ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಂಟಗಾನಹಳ್ಳಿ ಗ್ರಾಮದ ಹಾಸನ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ದಾಬಸ್ಪೇಟೆ : ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಂಟಗಾನಹಳ್ಳಿ ಗ್ರಾಮದ ಹಾಸನ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಯಂಟಗಾನಹಳ್ಳಿ ಗ್ರಾಮದ ಶ್ರೀಧರ್ (50) ಅರ್ಚನಾ (30) ಮೃತರು. ಶ್ರೀಧರ್ ಅಂಧರಾಗಿದ್ದು, ಅರ್ಚನಾ ಸ್ವಲ್ಪ ಬುದ್ಧಿಮಾಂಧ್ಯ ಯುವತಿ ಎನ್ನಲಾ ಗಿದೆ. ಇವರು ಯಂಟಗಾನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯನ್ನು ದಾಟುವಾಗ ನೆಲಮಂಗಲ ಕಡೆಯಿಂದ ಕುಣಿಗಲ್ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರನನ್ನು ಅಜಿತ್ ಎಂದು ಗುರುತಿಸಲಾಗಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿಗಳಾದ ಶ್ರೀಧರ್ ಹಾಗೂ ಅರ್ಚನಾ ರಸ್ತೆ ಮಧ್ಯೆ ಬಿದ್ದಿದ್ದು ಹಿಂದೆಗಡೆಯಿಂದ ಬರುತ್ತಿದ್ದ ಕಾರಿನ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ನಡೆಯುತ್ತಿದ್ದಂತೆ ಚಾಲಕ ಕಾರಿನ ಸಮೇತ ಪರಾರಿಯಾಗಿದ್ದು, ಪೊಲೀಸರು ಕಾರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.
ಬೈಕ್ , ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ದಾಬಸ್ಪೇಟೆ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾಬಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತ್ಯಾಮಗೊಂಡ್ಲು ನಿವಾಸಿ ಪ್ರದೀಪ್ (28) ಮೃತ ಯುವಕನಾಗಿದ್ದು, ಈತ ತನ್ನ ಬೈಕಿನಲ್ಲಿ ಪಟ್ಟಣದ ಕಿಡ್ಸ್ ಶಾಲೆಯ ಸಮೀಪ ಬರುವಾಗ ಹಿಂಬದಿಯಿಂದ ಬಂದ ವಿಆರ್ ಎಲ್ ಕಂಪನಿಗೆ ಸೇರಿದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೃತ ಪ್ರದೀಪ್ ರಸ್ತೆಗೆ ಬಿದ್ದಿದ್ದು, ತಲೆಗೆ ತೀವ್ರವಾದ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ದಾಬಸ್ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.