ಬಳ್ಳಾರಿ: ಕರ್ನಾಟಕ-ಆಂಧ್ರ ಗಡಿಭಾಗವಾದ ವಿಡುಪನಕಲ್ಲು-ಚೇಳ್ಳಗುರ್ಕಿ ಮಾರ್ಗ ಮಧ್ಯೆ ಭಾನುವಾರ ಬೆಳಗಿನಜಾವ ಸಂಭವಿಸಿದ ಅಪಘಾತದಲ್ಲಿ ನಗರದ ಇಬ್ಬರು ವೈದ್ಯರು ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಬಳ್ಳಾರಿಗೆ ಮೂವರು ವೈದ್ಯರು, ವಕೀಲರಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ. ಗಾಯಗೊಂಡ ಅಮರೇಗೌಡ ಅವರನ್ನು ಸ್ಥಳೀಯರು ಬಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು.
ಮೃತ ವೈದ್ಯರು ಸೇರಿದಂತೆ ನಾಲ್ವರು ಬ್ಯಾಂಕಾಕ್ ಪ್ರವಾಸ ಮುಗಿಸಿಕೊಂಡು ಬೆಂಗಳೂರು ವಿಮಾನ ನಿಲ್ದಾಣದಿಂದ ಅನಂತಪುರಂ ಮಾರ್ಗವಾಗಿ ಬಳ್ಳಾರಿಗೆ ಆಗಮಿಸುತ್ತಿದ್ದರು. ಬೆಳಗಿನಜಾವ 4 ಗಂಟೆಯ ಸುಮಾರಿಗೆ ನಿದ್ರೆಯ ಮಂಪರಿನಲ್ಲಿದ್ದರು. ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ ಗಡಿಗ್ರಾಮವಾದ ಚೇಳ್ಳಗುರ್ಕಿ ಇನ್ನು ಐದು ಕಿ.ಮೀ. ದೂರದಲ್ಲಿರುವಾಗಲೇ ಅವಘಡ ಸಂಭವಿಸಿದೆ.ಮೂಲತಃ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೇರಿ ಗ್ರಾಮದ ನಿವಾಸಿಯಾಗಿದ್ದ ಕ್ಯಾನ್ಸರ್ ರೋಗ ತಜ್ಞ ಡಾ.ಗೋವಿಂದರಾಜು ಎಂಬಿಬಿಎಸ್ ವಿದ್ಯಾಭ್ಯಾಸವನ್ನು ಬಳ್ಳಾರಿಯ ಮೆಡಿಕಲ್ ಕಾಲೇಜ್ ಹಾಗೂ ಸಂಶೋಧನಾ ಕೇಂದ್ರದಲ್ಲಿ ಪೂರ್ಣಗೊಳಿಸಿದ್ದರು. ಕಲಬುರಗಿಯಲ್ಲಿ ಎಂಎಸ್ ಪೂರೈಸಿದ್ದರು. 2002ರಲ್ಲಿ ಇಲ್ಲಿನ ಬಿಮ್ಸ್ನಲ್ಲಿ ಸೇವೆ ಆರಂಭಿಸಿದ ಅವರು ಸಹಾಯಕ, ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಸದ್ಯ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಯಲ್ಲಿ ಹೆಸರುವಾಸಿಯಾಗಿದ್ದ ಅವರು 2008ರಿಂದ 2011ರ ವರೆಗೆ ಕಿದ್ವಾಯಿ ಆಸ್ಪತ್ರೆಯಲ್ಲಿ ಕರ್ತವ್ಯ ಸಲ್ಲಿಸಿದ್ದಾರೆ. ಅವರ ಪತ್ನಿ ಡಾ. ರಚನಾ ದಂತ ಚಿಕಿತ್ಸಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಇಬ್ಬರು ಪುತ್ರಿಯರಿದ್ದಾರೆ.
ಅಪಘಾತದ ವಿಷಯ ಗೊತ್ತಾಗುತ್ತಿದ್ದಂತೆಯೇ ಬಿಮ್ಸ್ನ ವೈದ್ಯರು, ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿದರು. ಬಿಮ್ಸ್ನ ಶವಾಗಾರದ ಬಳಿ ನೂರಾರು ಸಂಖ್ಯೆಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಸಾರ್ವಜನಿಕರು ಆಗಮಿಸಿದ್ದರು. ಮೃತ ವೈದ್ಯರಿಗೆ ಬಿಮ್ಸ್ ನಿರ್ದೇಶಕ ಡಾ.ಗಂಗಾಧರ್ ಗೌಡ ಸೇರಿ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.