ಸಿಡಿಲಬ್ಬರದ ಮಳೆಗೆ ಎರಡು ಬಲಿ

KannadaprabhaNewsNetwork |  
Published : May 17, 2026, 01:45 AM IST
ಮಳೆಗೆ ಮರ ಬಿದ್ದು ಹಾನಿ | Kannada Prabha

ಸಾರಾಂಶ

ರಾಜ್ಯದ 9 ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದ್ದು, ಸಿಡಿಲಬ್ಬರದ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದ 9 ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದ್ದು, ಸಿಡಿಲಬ್ಬರದ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ. ಮೈಸೂರು, ಚಿಕ್ಕಮಗಳೂರು, ಹಾವೇರಿ, ಕೊಪ್ಪಳ, ದಕ್ಷಿಣ ಕನ್ನಡ ಸೇರಿದಂತೆ ವಿವಿಧೆಡೆ ಮಳೆ ಆಗಿದೆ.

ಬಳ್ಳಾರಿ ತಾಲೂಕಿನ ದಾಸರ ನಾಗೇನಹಳ್ಳಿಯಲ್ಲಿ ಸಿಡಿಲು ಬಡಿದು ಗಾದಿಲಿಂಗಪ್ಪ (32) ಮೃತಪಟ್ಟಿದ್ದಾರೆ. ತಮ್ಮ ತೋಟದಲ್ಲಿ ಹಣ್ಣು ಕೀಳುವಾಗ ಸಿಡಿಲು ಬಡಿದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಸಿಡಿಲಿಗೆ ವಿನೋದಾ (38) ಮೃತಪಟ್ಟಿದ್ದಾರೆ. ಶನಿವಾರ ಸಂಜೆ ಮಳೆ ಬೀಳುತ್ತಿದ್ದ ವೇಳೆ ಜಮೀನಿನಲ್ಲಿ ಕಟ್ಟಿ ಹಾಕಿದ ಎರಡು ಹಸುಗಳನ್ನು ಮನೆಗೆ ಕರೆ ತರುತ್ತಿದ್ದಾಗ ಸಿಡಿಲು ಬಡಿಯಿತು. ಈ ವೇಳೆ, ಅವರ ಮನೆಯ ಎರಡು ಹಸುಗಳೂ ಸಿಡಿಲಿಗೆ ಬಲಿಯಾಗಿವೆ.

ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆಯೂ ಮಳೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ತಾಲೂಕಿನ ಮೆಲಂದಗುಡ್ಡೆಯಲ್ಲಿ ಸಿಡಿಲಿಗೆ ಜಯಂತ್ ಮತ್ತು ಕವಿತಾ ಗಾಯಗೊಂಡಿದ್ದಾರೆ. ಇದೇ ವೇಳೆ, ಮಂಗಳೂರಲ್ಲಿ ಸಂಜೆಯ ವೇಳೆ ಬಿದ್ದ ಮಳೆಯಿಂದ ಕೆಲವೆಡೆ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಶೃಂಗೇರಿ ಸೇರಿ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಜಿಲ್ಲೆಯ ಹಲವೆಡೆ ಅಡಕೆ, ಬಾಳೆ ತೋಟಗಳಲ್ಲಿ ಮರಗಳು ಉರುಳಿ ಬಿದ್ದಿವೆ. ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಮರಗಳು ಬಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಲವೆಡೆ ಮಳೆಗೆ ಬಾಳೆ ಹಾಗೂ ತೆಂಗಿನ ಮರಗಳು ನೆಲಕ್ಕುರುಳಿವೆ.

ಬಳ್ಳಾರಿ, ವಿಜಯನಗರ, ಹಾವೇರಿ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಬಿರುಗಾಳಿಗೆ ಮರಗಳು ಧರೆಗುರುಳಿದ್ದು, ಬೆಳೆದ ಬಾಳೆ ಸೇರಿದಂತೆ ಹಲವು ಫಸಲುಗಳು ನೆಲಸಮವಾಗಿವೆ. ಕೊಪ್ಪಳ ತಾಲೂಕೊಂದರಲ್ಲಿಯೇ 50 ಎಕರೆಗೂ ಅಧಿಕ ಕಟಾವಿಗೆ ಬಂದ ಬಾಳೆ ಬೆಳೆ ಧರೆಗುರುಳಿ ಹಾನಿಯಾಗಿದೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಬಳಿ ವಿಂಡ್‌ ಪವರ್‌ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್‌ ದೊಡ್ಡ ದುರಂತವೊಂದು ತಪ್ಪಿದೆ.

ಈ ಮಧ್ಯೆ, ಬಂಗಾಳಕೊಲ್ಲಿಯಲ್ಲಿ ಒತ್ತಡ ಪ್ರಮಾಣ ಶಿಥಿಲವಾಗುತ್ತಿದ್ದಂತೆ ಮುಂಗಾರು ಅಂಡಮಾನ್‌ ದ್ವೀಪದಲ್ಲಿ ಕಾಣಿಸಲಿದ್ದು, ಮೇ 26ರಂದು ಮುಂಗಾರು ಕೇರಳ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನುವಾದಿ ರಾಷ್ಟ್ರ ನಿರ್ಮಾಣಕ್ಕೆ ಯತ್ನ: ಸನತ್‌ಕುಮಾರ ಬೆಳಗಲಿ
ಟೌನ್‌ಶಿಪ್‌ ಹೆಸರಲ್ಲಿ ಜಮೀನು ಕಬಳಿಕೆ: ಎಚ್‌ಡಿಡಿ