ಬಸ್ ಡಿಕ್ಕಿಯಾಗಿ ಇಬ್ಬರು ಗಂಭಿರ: ವಿದ್ಯಾರ್ಥಿಗಳಿಂದ ಪ್ರತಿಭಟನೆ, ಬಸ್‌ಗೆ ಹಾನಿ

KannadaprabhaNewsNetwork |  
Published : Nov 11, 2024, 11:47 PM IST
32 | Kannada Prabha

ಸಾರಾಂಶ

ಮಿಜಾರು ಮೈಟ್ ಎಂಜಿನಿಯರಿಂಗ್ ಕಾಲೇಜು ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಸುಮಿತ್ರಾ ಹಾಗೂ ಸಂಬಂಧಿ ಸಾನ್ವಿ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಇಲ್ಲಿನ ಮಿಜಾರು ಮೈಟ್ ಎಂಜಿನಿಯರಿಂಗ್ ಕಾಲೇಜು ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಸುಮಿತ್ರಾ ಹಾಗೂ ಸಂಬಂಧಿ ಸಾನ್ವಿ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಬಸ್‌ಗೆ ಕಲ್ಲೆಸೆದು ಹಾನಿಗೊಳಿಸಿದ್ದಾರೆ. ಅಲ್ಲದೆ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿ ಸುಮಾರು ಮೂರು ಗಂಟೆ ಪ್ರತಿಭಟನೆ ನಡೆಸಿ ನಿರ್ಲಕ್ಷ್ಯದಿಂದ ಬಸ್ ಚಲಾಯಿಸುವ ಚಾಲಕರು ಮತ್ತು ಬೇಜವಾಬ್ದಾರಿಯಿಂದ ವರ್ತಿಸುವ ಮಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ಮೂಡುಬಿದಿರೆಯಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಖಾಸಗಿ ಬಸ್‌ನ ಚಾಲಕ ಅತೀ ವೇಗದಿಂದ ಚಲಾಯಿಸಿಕೊಂಡು ಬಂದಿದ್ದು, ಮೈಟ್ ಕಾಲೇಜು ತಿರುವು ಬಳಿ ನಿಯಂತ್ರಣ ಕಳೆದುಕೊಂಡ ಬಸ್, ಮೈಟ್ ಕಾಲೇಜು ಬಸ್‌ಗೆ ಮೊದಲು ಡಿಕ್ಕಿ ಹೊಡೆದಿದೆ. ಬಳಿಕ ಹೆದ್ದಾರಿ ಬಿಟ್ಟು ಮೈಟ್ ಕಾಲೇಜು ರಸ್ತೆಗೆ ನುಗ್ಗಿದ ಬಸ್‌ ಎದುರಿನಿಂದ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆಯಿತು. ಇದೇ ವೇಳೆ ಕಾಲೇಜಿಗೆ ನಡೆದು ಹೋಗುತ್ತಿದ್ದ ವಿದ್ಯಾರ್ಥಿಗಳು ದಿಕ್ಕಾಪಾಲಾಗಿ ಓಡಿ ಬಚಾವಾದರು. ಈ ವೇಳೆ ಸಮಯ ಪ್ರಜ್ಞೆ ಮೆರೆದ ರಿಕ್ಷಾ ಚಾಲಕರೊಬ್ಬರು ಬಸ್ ಮುಂದೆ ನುಗ್ಗಿ ಅನಾಹುತವಾಗುವುದನ್ನು ತಪ್ಪಿಸಲು ರಿಕ್ಷಾವನ್ನು ಅಡ್ಡ ನಿಲ್ಲಿಸಿದರು. ರಿಕ್ಷಾಕ್ಕೆ ಗುದ್ದಿದ ಬಸ್ ಬಳಿಕ ನಿಂತಿತ್ತು.ವಿಷಯ ತಿಳಿಯುತ್ತಿದ್ದಂತೆ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸಮಿತ್‌ರಾಜ್, ಎಬಿವಿಪಿ ಮುಖಂಡರಾದ ಸುವಿನ್, ಪವನ್, ಸಾಕ್ಷಾತ್, ಬಿಜೆಪಿ ಮುಖಂಡರಾದ ಕೆ. ಪಿ ಸುಚರಿತ ಶೆಟ್ಟಿ, ರಂಜಿತ್ ಪೂಜಾರಿ ಮತ್ತಿತರರು ಬಸ್ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಖಾಸಗಿ ಬಸ್‌ಗಳ ಅತಿವೇಗದ ಚಾಲನೆಯಿಂದ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ಸಿಕ್ಕಿಲ್ಲ. ಸ್ಥಳದಲ್ಲೇ ಪರಿಹಾರ ಒದಗಿಸಬೇಕು ಎಂದು ಪಟ್ಟು ಹಿಡಿದರು. ಸ್ಥಳಕ್ಕಾಗಮಿಸಿದ ಬಸ್ ಮಾಲಕ ರಫೀಕ್, ಸಂತ್ರಸ್ತರಿಗೆ ವೈಯಕ್ತಿಕ ನೆಲೆಯಲ್ಲಿ ೫ ಲಕ್ಷ ಪರಿಹಾರ ಒದಗಿಸುತ್ತೇನೆ ಹಾಗೂ ತಪ್ಪಿತಸ್ಥ ಬಸ್ ಚಾಲಕನನ್ನು ಕೆಲಸದಿಂದ ವಜಾಗೊಳಿಸುವುದಾಗಿ ಭರವಸೆ ನೀಡಿದರು.ಮಂಜೂರಾದ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು. ಬಸ್‌ಗಳಿಗೆ ಡೋರ್ ಅಳವಡಿಸಬೇಕು. ಖಾಸಗಿ ಬಸ್ ಚಾಲಕರ ಪರವಾನಗಿಯನ್ನು ಪರಿಶೀಲಿಸಬೇಕು. ತಪ್ಪಿತಸ್ಥ ಚಾಲಕರ ಚಾಲನಾ ಪರವಾನಗಿಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

ಪಣಂಬೂರು ಎಸಿಪಿ ಶ್ರೀಕಾಂತ್ ಮಾತನಾಡಿ, ಈ ಘಟನೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕನನ್ನು ಆರೋಪಿಗಳನ್ನಾಗಿಸಲಾಗುವುದು. ಖಾಸಗಿ ಬಸ್‌ಗಳಿಂದಾಗುವ ತೊಂದರೆಗಳ ಕುರಿತು ಚರ್ಚಿಸಲು ಶೀಘ್ರವೇ ಆರ್‌ಟಿಒ ಪೊಲೀಸ್ ಹಾಗೂ ಖಾಸಗಿ ಬಸ್ ಮಾಲಕರ ಸಭೆ ಕರೆಯುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಹಿಂತೆಗೆಯಲಾಯಿತು. ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಸೂಕ್ತ ಬಂದೋಬಸ್ತು ನಡೆಸಿದರು. ಚಾಲಕ ನಿಜಾಮ್‌ನನ್ನು ಪೋಲಿಸರು ಬಂಧಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ