ಉಡುಪಿ: ಇಲ್ಲಿನ ಅಲೆವೂರು ಗ್ರಾಮದ ಪ್ರಗತಿ ನಗರದಲ್ಲಿ ಸುಮಾರು 6.50 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಖಾತೆ ಸಚಿವ ಎನ್. ಎಸ್. ಬೋಸರಾಜು ಅವರು, ಈ ಕೇಂದ್ರವನ್ನು 5 ತಿಂಗಳಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುತ್ತದೆ ಎಂದು ಹೇಳಿದರು.5 ಎಕ್ರೆ ಜಮೀನಿನಲ್ಲಿ ಈ ವಿಜ್ಞಾನ ಕೇಂದ್ರ ನಿರ್ಮಾಣವಾಗುತ್ತಿರುವ ಉಡುಪಿ ವಿಜ್ಞಾನ ಕೇಂದ್ರದ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯವರೇ ಆದ ಖ್ಯಾತ ವಿಜ್ಞಾನಿ ಡಾ. ಯು. ಆರ್. ರಾವ್ ಅವರ ಸ್ಮರಣಾರ್ಥ ಈ ಕೇಂದ್ರಕ್ಕೆ ಅವರ ಹೆಸರಿಡಲಾಗಿದೆ. ಇಲ್ಲಿ ಏರೋಸ್ಪೇಸ್ ಗ್ಯಾಲರಿ, ಒಶಿಯನ್ ಗ್ಯಾಲರಿ, ಫನ್ ಸೈನ್ಸ್ ಹಾಗೂ ಔಟ್ಡೋರ್ ಗ್ಯಾಲರಿಗಳು ಬರಲಿವೆ. ರಾಜ್ಯದ 12 ಜಿಲ್ಲೆಗಳಲ್ಲಿ ಈಗಾಗಲೇ ಈ ವಿಜ್ಞಾನ ಕೇಂದ್ರಗಳು ಪೂರ್ಣಗೊಂಡಿದ್ದು, ಕೋಲಾರ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಟೆಂಡರ್ ಆಗಿದೆ. ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತಲಾ 14 ಕೋಟಿ ರು.ವೆಚ್ಚದಲ್ಲಿ ಕೇಂದ್ರ ಸರ್ಕಾರದ ಸಹಯೋಗದಲ್ಲಿ ವಿಜ್ಞಾನ ಕೇಂದ್ರ ನಿರ್ಮಾಣ ಪ್ರಗತಿಯಲ್ಲಿದೆ ಎಂದರು.
ರಾಜ್ಯದಲ್ಲಿ 37 ಲಕ್ಷ ಬೋರ್ವೆಲ್ ಗಳಿದ್ದು 3,000 ಕಡೆಗಳಲ್ಲಿ ಟೆಲೀ ಮೀಟರ್ ಮೂಲಕ ಅಂತರ್ಜಲ ಮಟ್ಟ ಪರಿಶೀಲಿಸಲಾಗುತ್ತಿದೆ. ಖಾಸಗಿ ಬೋರ್ವೆಲ್ ಗಳಿಗೆ ಪರವಾನಗಿ, ಶುಲ್ಕ ಸಹಿತ ನೀತಿನಿಯಮ ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು. ಅವರೊಂದಿಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕ ಬಿ. ಸದಾಶಿವ ಪ್ರಭು, ಡಯಟ್ ಪ್ರಿನ್ಸಿಪಾಲ್ ಡಾ.ಅಶೋಕ್ ಕಾಮತ್, ಕಾಂಗ್ರೆಸ್ ಪರಮುಖರಾದ ವಿಶ್ವಾಸ್ ಅಮೀನ್ ಮುಂತಾದವರಿದ್ದರು.