ನೀಲಾವರ ಗೋಶಾಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲೆಯ ಎಲ್ಲ ಹೈನುಗಾರರು ತಮ್ಮ ಜಾನುವಾರುಗಳಿಗೆ ಶೇ.100ರಷ್ಟು ಕಾಲುಬಾಯಿ ರೋಗ ನಿರೋಧಕ ಲಸಿಕೆಯನ್ನು ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಮತ್ತು ಹೈನುಗಾರರಿಗೆ ಸಲಹೆ ಮಾಡಿದ್ದಾರೆ.ಅವರು ಸೋಮವಾರ ನೀಲಾವರ ಗೋಶಾಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಅ. 21ರಿಂದ ನ. 20ರ ವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಜಿಲ್ಲೆ, ರಾಜ್ಯ ಹಾಗೂ ದೇಶಾದ್ಯಂತ ನಡೆಯುತ್ತಿರುವ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವು ಯಶಸ್ವಿಯಾಗುವಂತೆ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಎಂ.ಸಿ.ರೆಡ್ಡಪ್ಪ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ಶಿವಯೋಗಿ. ಬಿ, ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಂದೀಪ ಕುಮಾರ್, ಡಾ. ಉದಯಕುಮಾರ್ ಶೆಟ್ಟಿ ನೀಲಾವರ ಗೋಶಾಲೆಯ ಟ್ರಸ್ಟಿಗಳಾದ ಡಾ.ಸರ್ವೋತ್ತಮ ಉಡುಪ, ನಾಗರಾಜ ರಾವ್, ಕೆ.ಎಂ.ಎಫ್.ನ ಸಹಾಯಕ ವ್ಯವಸ್ಥಾಪಕ ಡಾ.ನಿಜಾಮ್ ಪಟೇಲ್, ಬ್ರಹ್ಮಾವರ ತಾಲ್ಲೂಕಿನ ಪಶುಪಾಲನಾ ಇಲಾಖೆಯ ಮತ್ತು ಕೆ.ಎಂ.ಎಫ್.ನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಗೋವರ್ಧನ ಗಿರಿ ಟ್ರಸ್ಟ್ ಸದಸ್ಯರು, ಸಿಬ್ಬಂದಿ, ಪಶುಸಖಿಯರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.