ಉಡುಪಿ: ಉಪವಾಸ, ಧ್ಯಾನದೊಂದಿಗೆ ಗುಡ್‌ಫ್ರೈಡೇ ಆಚರಣೆ

KannadaprabhaNewsNetwork |  
Published : Apr 19, 2025, 12:35 AM IST
18ಫ್ರೈಡೆ | Kannada Prabha

ಸಾರಾಂಶ

ಕ್ರೈಸ್ತ ಸಮುದಾಯದವರ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕ್ರೈಸ್ತ ಸಮುದಾಯದವರ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.

ಧರ್ಮಪ್ರಾಂತ್ಯದ ಪ್ರಧಾನ ದೇವಾಲಯ ಮಿಲಾಗ್ರಿಸ್ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಪ್ರಾರ್ಥನಾ ವಿಧಿ ನೆರವೇರಿಸಿದರು.

ನಂತರ ಸಂದೇಶ ನೀಡುತ್ತಾ, ಶುಭ ಶುಕ್ರವಾರ ಯೇಸು ಇಡೀ ಮನುಕುಲದ ವಿಮೋಚನೆಗಾಗಿ ತನ್ನಾತ್ಮವನ್ನು ಪಿತನ ಕೈಗೊಪ್ಪಿಸಿದ ದಿನ. ಕ್ರಿಸ್ತನ ತ್ಯಾಗದ ಮಹತ್ವವನ್ನು ಧ್ಯಾನಿಸುವ ಪವಿತ್ರ ದಿನ. ಶುಭ ಶುಕ್ರವಾರ ನಿಮ್ಮ ಬದುಕಿನಲ್ಲಿ ಪ್ರೀತಿಯ, ಕ್ಷಮೆಯ ಮತ್ತು ತ್ಯಾಗದ ಅರ್ಥವನ್ನು ಅರಿಯಲು ಸಹಾಯ ಮಾಡುತ್ತದೆ ಎಂದರು.

ಇಂದಿನ ವೈಷಮ್ಯದಿಂದ ಕೂಡಿದ ಜಗತ್ತಿನಲ್ಲಿ ಕ್ರಿಸ್ತನ ಬಲಿದಾನವು ನಮಗೆ ಸಹಾನುಭೂತಿ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳೆಡೆಗೆ ಮನವನ್ನು ಕೊಂಡೊಯ್ಯುತ್ತದೆ. ಕ್ರಿಸ್ತನ ತ್ಯಾಗ, ನಮ್ಮ ಜೀವನದಲ್ಲಿ ದಾರಿ ತೋರಿಸುವ ಬೆಳಕಾಗಲಿ. ಪ್ರೀತಿ, ಕ್ಷಮೆ, ಪರೋಪಕಾರದ ಮೂಲಕ ನವ ಸಮಾಜವನ್ನು ಕಟ್ಟೋಣ. ಒಬ್ಬರೊಗೊಬ್ಬರು ಪ್ರೀತಿ ನೀಡುವ, ವೈರಿಗಳಿಗೆ ಕ್ಷಮೆ ನೀಡುವ, ಮತ್ತು ನೋವಿನ ಸಡುವೆಯೂ ಶಾಂತಿಯನ್ನು ಕಟ್ಟುವ ಸಂಕಲ್ಪದೊಂದಿಗೆ ಜೀವಿಸೋಣ ಎಂದು ಕರೆ ನೀಡಿದರು.

ಚರ್ಚಿನ ಪ್ರಧಾನ ಧರ್ಮಗುರು ಹಾಗೂ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರು ವಂ.ಪ್ರದೀಪ್ ಕಾರ್ಡೊಜಾ, ಪೋಪ್ ಅವರ ಭಾರತೀಯ ರಾಯಭಾರಿಗಳ ಕಾರ್ಯದರ್ಶಿ ವಂ.ಆಲ್ಬರ್ಟೋ ನಪ್ಲಿತಾನೋ ಹಾಗೂ ಬೊಲಿವಿಯಾ ರಾಯಭಾರಿಗಳ ಕಾರ್ಯದರ್ಶಿ ವಂ.ಐವನ್ ಮಾರ್ಟಿಸ್, ಕಟಪಾಡಿ ಹೋಲಿ ಕ್ರೊಸ್ ಸಂಸ್ಥೆಯ ನಿರ್ದೇಶಕ ವಂ.ರೋನ್ಸನ್ ಡಿಸೋಜಾ ಉಪಸ್ಥಿತರಿದ್ದರು.

ಜಿಲ್ಲೆಯ ಎಲ್ಲಾ ಚರ್ಚ್‌ಗಳಲ್ಲಿ ಕ್ರೈಸ್ತರು ಉಪವಾಸ, ಧ್ಯಾನ, ಪ್ರಾರ್ಥನೆ ಸಲ್ಲಿಸಿದರು. ಕೆಲವು ಚರ್ಚ್‌ಗಳಲ್ಲಿ ಯೇಸು ಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ಘಟನಾವಳಿಗಳನ್ನು ಪ್ರಸ್ತುತಪಡಿಸಲಾಯಿತು. ಧರ್ಮಗುರುಗಳು ರಕ್ತವರ್ಣದ ಪೂಜಾ ಬಟ್ಟೆ ಧರಿಸಿ ಯೇಸು ಕ್ರಿಸ್ತನ ಕೊನೆಯ ಘಳಿಗೆಗಳ ವತ್ತಾಂತ ಓದಿದರು. ಬಳಿಕ ಶಿಲುಬೆಯನ್ನು ಮೆರವಣಿಗೆಯಲ್ಲಿ ತರಲಾಯಿತು. ತ್ಯಾಗದ ಉಳಿಕೆಯ ಹಣವನ್ನು ಬಡವರಿಗೆ ಹಂಚಲಾಯಿತು.

ಉಡುಪಿ ಶೋಕಮಾತಾ ಚರ್ಚಿನಲ್ಲಿ ಧರ್ಮಗುರುಗಳಾದ ವಂ.ಚಾರ್ಲ್ಸ್ ಮಿನೇಜಸ್, ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ವಂ.ಡೆನಿಸ್ ಡೆಸಾ, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ.ಪಾವ್ಲ್ ರೇಗೊ, ಶಿರ್ವ ಆರೋಗ್ಯ ಮಾತಾ ಚರ್ಚಿನಲ್ಲಿ ವಂ.ಡಾ.ಲೆಸ್ಲಿ ಡಿಸೋಜಾ, ಕಾರ್ಕಳ ಸಂತ ಲಾರೇನ್ಸ್ ಬಸಿಲಿಕಾದಲ್ಲಿ ವಂ.ಆಲ್ಬನ್ ಡಿಸೋಜಾ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ