ಕನ್ನಡಪ್ರಭ ವಾರ್ತೆ ಮಣಿಪಾಲಉಡುಪಿ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ 53,601 ಹಾಗೂ ನಗರ ಪ್ರದೇಶಗಳಲ್ಲಿ 13,191 ಸೇರಿ ಒಟ್ಟು 66,852 ಮಂದಿ 5 ವರ್ಷದೊಳಗಿನ ಮಕ್ಕಳಿದ್ದು, ಅವರಿಗೆ ಮಾ. ರಂದು ಪಲ್ಸ್ ಪೊಲಿಯೋ ಲಸಿಕೆ ನೀಡುವ ಗುರಿ ಇದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.ಅವರು ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೊಲಿಯೋ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 568, ನಗರ ಪ್ರದೇಶಗಳಲ್ಲಿ 92 ಒಟ್ಟು 660 ಲಸಿಕಾ ಕೇಂದ್ರಗಳಲ್ಲಿ ಪೊಲಿಯೋ ಹನಿಗಳನ್ನು ಹಾಕಲಾಗುವುದು. ಇವುಗಳ ಜೊತೆಯಲ್ಲಿ ಟ್ರಾನ್ಸಿಟ್ 31 ಬೂತುಗಳು, 6 ಮೊಬೈಲ್ ಟೀಮ್ ಗಳಿದ್ದು, 2788 ಸಿಬ್ಬಂದಿ ಹಾಗೂ 144 ಮೇಲ್ವಿಚಾರಕರನ್ನು ನೇಮಿಸಲಾಗಿದೆ. 94,900 ಡೋಸ್ನಷ್ಟು ಪೊಲಿಯೋ ಲಸಿಕೆ ಲಭ್ಯವಿದೆ. ಯಾವುದೇ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ತಪ್ಪಿ ಹೋಗದಂತೆ ನೋಡಿಕೊಳ್ಳಬೇಕು. ಹೆತ್ತವರು ತಪ್ಪದೇ ತಮ್ಮ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆ ತಂದು ಲಸಿಕೆ ಹಾಕಿಸಬೇಕು ಎಂದರು.* ಜಂತು ಹುಳು ಸೋಂಕುರಕ್ತಹೀನತೆ, ಅಪೌಷ್ಠಿಕತೆ, ದುರ್ಬಲ ಮಾನಸಿಕ ದೈಹಿಕ ಬೆಳವಣಿಗೆ ಕಾರಣವಾಗುವ, ಮಣ್ಣಿನ ಮೂಲಕ ಮಕ್ಕಳಲ್ಲಿ ಹರಡುವ ಜಂತುಹುಳು ಸೋಂಕನ್ನು ತಡೆಗಟ್ಟಲು 1-19 ವರ್ಷದೊಳಗಿನ ಮಕ್ಕಳಿಗೆ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಲ್ಲಿ ಅಲ್ಬೆಂಡಾಜೋಲ್ ಮಾತ್ರೆಗಳನ್ನು ಉಚಿತವಾಗಿ ವಿತರಿಸಲಾಗುವುದು. ಪ್ರತಿಯೊಬ್ಬ ವಿದ್ಯಾರ್ಥಿಗಳು ತಪ್ಪದೇ ಪಡೆಯಬೇಕು ಎಂದರು.ಸಭೆಯಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಜೋಶ್ನಾ ಬಿ.ಕೆ., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ರಾಮರಾವ್, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.