ಉಡುಪಿ: ಉಡುಪಿ ಯಕ್ಷಗಾನ ಕಲಾರಂಗವು ತನ್ನ ‘ವಿದ್ಯಾಪೋಷಕ್’ ಯೋಜನೆಯಡಿ ಬಡ ವಿದ್ಯಾರ್ಥಿಗಳಿಗಾಗಿ ದಾನಿಗಳ ನೆರವಿನಿಂದ ನಿರ್ಮಿಸಿದ 100ನೇ ಮನೆಯ ಹಸ್ತಾಂತರ ಪ್ರಯುಕ್ತ ಜೂ. 28ರಂದು ‘ಸೂರು ನೂರರ ಸಡಗರ’ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಾರಂಗವು ಕಳೆದ 26 ವರ್ಷಗಳಿಂದ ಕಲಾವಿದರ ಕಲ್ಯಾಣಕ್ಕಾಗಿ ಹಾಗೂ 22 ವರ್ಷಗಳಿಂದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸುತ್ತಿದೆ. ಇದರ ಮಹತ್ವದ ಸಾಧನೆಯಾಗಿ ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ 90 ಹಾಗೂ ಬಡ ಕಲಾವಿದರಿಗೆ 10 ಸೇರಿದಂತೆ ಒಟ್ಟು 100 ಮನೆಗಳ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಅಂದು ಬೆಳಗ್ಗೆ 9.30ಕ್ಕೆ ಹೆಬ್ರಿ ತಾಲೂಕಿನ ಶಿವಪುರದ ಕಲ್ಕುಂಡದಲ್ಲಿ ವಿದ್ಯಾಪೋಷಕ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿಂಚನಾ ಅವರ 100ನೇ ಮನೆ ‘ಶತಸ್ಮೃತಿ’ಯ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಪರ್ಯಾಯ ಶ್ರೀ ಶೀರೂರು ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ಉದ್ಘಾಟನೆ ನೆರವೇರಿಸಲಿದ್ದು, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಉಡುಪಿ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಆಶೀರ್ವಚನ ನೀಡುವರು. ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ ಅಧ್ಯಕ್ಷತೆ ವಹಿಸಲಿದ್ದಾರೆ.ಮಂಗಳೂರಿನ ಕರ್ಣಾಟಕ ಬ್ಯಾಂಕ್ನ ಎಂಡಿ ಮತ್ತು ಸಿಇಓ ಎಂ. ರಾಘವೇಂದ್ರ ಭಟ್ ‘ಸೂರು ನೂರರ’ ಸಂಪುಟ ಬಿಡುಗಡೆ ಮಾಡಲಿದ್ದು, ಕೋಟ ಗೀತಾನಂದ ಫೌಂಡೇಶನ್ನ ಆನಂದ ಸಿ. ಕುಂದರ್ ಶುಭ ಹಾರೈಸಲಿದ್ದಾರೆ. ಸಂಸದರು, ಶಾಸಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭ ಮನೆಗಳ ಪ್ರಾಯೋಜಕರು, ಕಾರ್ಮಿಕರನ್ನು ಸನ್ಮಾನಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ನಾರಾಯಣ ಎಂ. ಹೆಗಡೆ, ಸದಾಶಿವ ರಾವ್ ಮತ್ತು ವಿದ್ಯಾ ಪ್ರಸಾದ್ ಉಪಸ್ಥಿತರಿದ್ದರು.