ಉಡುಪಿ: ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಜಯಂತಿ ನಿಮಿತ್ತ ಪ್ರತಿ ವರ್ಷ ಅ. 2 ನೇ ತಾರೀಕನ್ನು ಸ್ವಚ್ಛ ಭಾರತ್ ದಿನವನ್ನಾಗಿ ಆಚರಿಸುತ್ತಿದ್ದು ಪೂರ್ವಾಭಾವಿಯಾಗಿ ಹಲವು ಜಾಗೃತಿ ಕಾರ್ಯಕ್ರಮ ಹಾಗೂ ಸಾಮೂಹಿಕ ಸ್ವಚ್ಛತಾ ಶ್ರಮದಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಲ್ಲಿ ನೈರ್ಮಲ್ಯ ಕುರಿತು ಅರಿವು ಮೂಡಿಸುವಉದ್ದೇಶದಿಂದ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯವು ಸೆ. 17 ರಿಂದ ಅ. 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ- 2025 ಅಭಿಯಾನವನ್ನು ‘ಸ್ವಚ್ಛೋತ್ಸವ’ ಎಂಬ ಘೋಷವಾಕ್ಯದೊಂದಿಗೆ ಆಚರಿಸುತ್ತಿದೆ.2017ರಲ್ಲಿ ಆರಂಭವಾದ ಸ್ವಚ್ಛ ಭಾರತ್ ಅಭಿಯಾನವು 11ನೇ ವಾರ್ಷಿಕೋತ್ಸ ಆಚರಿಸುತ್ತಿದ್ದು, ಈ ಯೋಜನೆಯ ಮೈಲಿಗಲ್ಲನ್ನು ಗೌರವಿಸಲು ಹಾಗೂ ಸಾರ್ವಜನಿಕರ ಸಹಭಾಗಿತ್ವ, ಸಮುದಾಯದ ಭಾಗವಹಿಸುವಿಕೆ ಮತ್ತು ಶುಚಿತ್ವದ ಮಹತ್ವದ ಕುರಿತು ವ್ಯಾಪಕವಾದ ಅರಿವು ಮೂಡಿಸಲು ಉಡುಪಿ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ನೈರ್ಮಲ್ಯ ಅರಿವು, ಸ್ವಚ್ಛತಾ ಶ್ರಮದಾನ, ಬೀಚ್ಗಳ ಸ್ವಚ್ಛತೆ, ಜಲ ಮೂಲಗಳ ಸ್ವಚ್ಛತೆ, ಸ್ವಚ್ಛತಾ ಸಿಬ್ಬಂದಿಗಳಿಗೆ ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧನೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಪಾಕ್ಷಿಕಕ್ಕೆ ಚಾಲನೆ ನೀಡಿದರು.ಶಾಸಕ ಯಶ್ಪಾಲ್ ಸುವರ್ಣ, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ನೋಡಲ್ ಅಧಿಕಾರಿ ಡಾ. ಉದಯ ಶೆಟ್ಟಿ, ಜಿ.ಪಂ ಉಪಕಾರ್ಯದರ್ಶಿ ಎಸ್.ಎಸ್ ಕಾದ್ರೋಳಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಮತ್ತಿತರರು ಇದ್ದರು.