ಉಡುಪಿ: ರಂಗಭೂಮಿ ಉಡುಪಿ, ವರ್ಷದಲ್ಲಿ 25ಕ್ಕೂ ಅಧಿಕ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುವ ಮೂಲಕ ಉಡುಪಿಯ ಇತಿಹಾಸ ಪುಟದಲ್ಲಿ ಭದ್ರವಾದ ಸ್ಥಾನ ಪಡೆದಿದೆ. ಇದು ಉಡುಪಿಯ ನಾವೆಲ್ಲಾ ಹೆಮ್ಮೆ ಪಡುವ ವಿಚಾರವಾಗಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.ಇತ್ತೀಚೆಗೆ ಇಲ್ಲಿನ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ಸಂಸ್ಥೆ ಹಮ್ಮಿಕೊಂಡ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.ಇಂದು ಜನರ ಆಸಕ್ತಿಗೆ ತಕ್ಕಂತೆ ನಾಟಕಗಳನ್ನು ಮಾರ್ಪಾಟು ಮಾಡಿಕೊಳ್ಳಬೇಕೋ ಅಥವಾ ನಾಟಕಕ್ಕೆ ಸರಿಯಾಗಿ ಜನರನ್ನು ಕರೆಸುವ ಕೆಲಸ ಮಾಡಬೇಕೋ ಎಂಬ ಗೊಂದಲ ಸಂಘಟಕರನ್ನು ಕಾಡುತ್ತಿದೆ. ಈ ಎಲ್ಲಾ ಸವಾಲುಗಳ ನಡುವೆಯೇ ಛಲ ಬಿಡದೆ ಕಳೆದ 45 ವರ್ಷಗಳಿಂದ ಈ ಕನ್ನಡ ನಾಟಕ ಸ್ಪರ್ಧೆಯನ್ನು ನಡೆಸಿಕೊಂಡು ಬಂದಿರುವ ರಂಗಭೂಮಿಯ ಸಾಧನೆ ಅಭಿನಂದನಾರ್ಹ ಎಂದು ಅವರು ಹೇಳಿದರು.ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರಂಗಭೂಮಿ ಉಡುಪಿ ಮಕ್ಕಳಿಗೆ ರಂಗ ಶಿಕ್ಷಣವನ್ನು 25 ಶಾಲೆಗಳಿಗೆ ನೀಡುತ್ತಿದೆ. ಈ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನದ ಜೊತೆಗೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂಬ ಹಂಬಲ ನಮ್ಮದು ಎಂದರು.