ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ

KannadaprabhaNewsNetwork |  
Published : Jul 14, 2026, 01:15 AM IST
9 | Kannada Prabha

ಸಾರಾಂಶ

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರುವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ. ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್‌ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿ 1200 ವಿಶ್ವವಿದ್ಯಾಲಯಗಳು ಇದ್ದು, 43,000 ಕಾಲೇಜುಗಳು ಹಾಗೂ 43 ದಶಲಕ್ಷ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದು ದೇಶದ ಬಹುದೊಡ್ಡ ಪರಿವರ್ತನೆ. ಆದರೆ ಜಾಗತಿಕವಾಗಿ ಉದ್ಯಮ ಮತ್ತು ಶಿಕ್ಷಣದ ನಡುವೆ ಅಂತರವಿದ್ದು, ತಾವು ಕೊಡುವ ಶಿಕ್ಷಣ ಉದ್ಯಮಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು. ಇದಕ್ಕಾಗಿ ಬೋಧಕರ ಕೊರತೆ ನೀಗಿಸಬೇಕು ಹಾಗೂ ಪ್ರಾದೇಶಿಕವಾಗಿ ಸಮಾನಾಂತರ ಬೋಧನೆಗೆ ವ್ಯವಸ್ಥೆ ಕಲ್ಪಿಸಬೇಕು. ಈ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಅವಶ್ಯಕತೆಯಿದೆ ಎಂದು ಅವರು ತಿಳಿಸಿದರು. ಭಾರತದ ಇತಿಹಾಸದಲ್ಲಿ ಮೊದಲಿನಿಂದಲೂ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದ ಅವರು, ವಿಶ್ವದ ವಿವಿಧೆಡೆಗಳಿಂದ ತಕ್ಷಶಿಲಾ ಹಾಗೂ ನಳಂದ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಲು ಬರುತ್ತಿದ್ದರು. ಅಂದಿನಿಂದಲೂ ದೇಶದಲ್ಲಿ ಶಿಕ್ಷಣಕ್ಕೆ ಒತ್ತು ನೀಡುತ್ತಾ ಬಂದಿರುವುದು ಇತಿಹಾಸದ ಮೂಲಕ ತಿಳಿಯುತ್ತದೆ. ನಂತರದ ದಿನಗಳಲ್ಲಿ ಬ್ರಿಟಿಷರು ಕಲ್ಕತ್ತ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದರು. ನಂತರ ಮದ್ರಾಸ್, ಮೈಸೂರು ವಿಶ್ವವಿದ್ಯಾಲಯಗಳು ಆರಂಭವಾದವು ಎಂದರು. ಜಗತ್ತಿನ ಯಾವುದೇ ಮೂಲೆಗೆ ಹೋದರೂ ಎಂಜಿನಿಯರ್, ಡಾಕ್ಟರ್‌ಗಳು, ಪ್ರೊಫೆಸರ್‌ಗಳು ಭಾರತೀಯರಾಗಿರುತ್ತಾರೆ. ಅಲ್ಲದೆ, ವಿಶ್ವದ ೫೦೦ಕ್ಕೂ ಹೆಚ್ಚು ಅತಿ ದೊಡ್ಡ ಕಂಪನಿಗಳಲ್ಲಿ ಭಾರತೀಯರದ್ದೇ ಪಾರಮ್ಯ. ಇದು ಭಾರತದ ಶೈಕ್ಷಣಿಕ ವ್ಯವಸ್ಥೆಯನ್ನು ಸೂಚಿಸುತ್ತದೆ. ಪ್ರಸಕ್ತ ದಿನಗಳಲ್ಲಿ ಬೆಂಗಳೂರು, ಮೈಸೂರು ನಂತರ ತುಮಕೂರಿನಲ್ಲಿ ಅತಿ ಹೆಚ್ಚು ವಿದ್ಯಾ ಸಂಸ್ಥೆಗಳಿದ್ದು, ಅತಿ ಹೆಚ್ಚು ವಿದ್ಯಾರ್ಥಿಗಳು ಓದುತ್ತಿರುವ ಸಾಲಿಗೆ ತುಮಕೂರು ಜಿಲ್ಲೆ ನಿಲ್ಲಲಿದೆ ಎಂದು ಅವರು ಹೇಳಿದರು.

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಮಾತನಾಡಿ, ಭಾರತ ಸರ್ಕಾರ ಹೊಸ ಶೈಕ್ಷಣಿಕ ನೀತಿಯ ಮೂಲಕ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದು ಹೇಳಿದರು. ಪಿ.ಎಂ. ಉಷಾ ಯೋಜನೆಯಡಿ ವಿಶೇಷ ಅನುದಾನ ಪಡೆಯುತ್ತಿರುವ 4ವಿಶ್ವವಿದ್ಯಾನಿಲಯಗಳಲ್ಲಿ ತುಮಕೂರು ವಿಶ್ವವಿದ್ಯಾಲಯವೂ ಒಂದು ಎಂದು ಹೇಳಿದ ಅವರು, ತುಮಕೂರು ವಿಶ್ವವಿದ್ಯಾಲಯದ ಮೂಲ ಸೌಲಭ್ಯಾಭಿವೃದ್ಧಿಗಾಗಿ ಈ ಯೋಜನೆಯಡಿ 20 ಕೋಟಿ ರು.ಗಳ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು, ಮುಂದಿನ ದಿನದಲ್ಲಿ ಇನ್ನೂ ೪೦ ಕೋಟಿ ರು.ಗಳ ಅನುದಾನ ವಿಶ್ವವಿದ್ಯಾಲಯಕ್ಕೆ ಬರಲಿದೆ ಎಂದು ತಿಳಿಸಿದರು. ದೇಶದ ಅಭಿವೃದ್ಧಿ ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಅರಿತಿರುವ ಭಾರತ ಸರ್ಕಾರ ಶಿಕ್ಷಣಕ್ಕೆ ಉತ್ತೇಜನ ನೀಡಲು ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.

ಶಾಸಕ ಬಿ.ಸುರೇಶ್ ಗೌಡ ಅಧ್ಯಕ್ಷತೆವಹಿಸಿದ್ದರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಡಿ.ಟಿ. ಶ್ರೀನಿವಾಸ್, ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್, ಸಿಂಡಿಕೇಟ್ ಮತ್ತು ಶೈಕ್ಷಣಿಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಂಗೆಮಡು ಗಂಗಾಧರೇಶ್ವರ ಕ್ಷೇತ್ರದ ಅಭಿವೃದ್ಧಿಗೆ ವೇಗ
ಅರಸೀಕೆರೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ