ಕನ್ನಡಪ್ರಭ ವಾರ್ತೆ ರಾಮನಗರ
ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ಹಾಗೂ ಜನವಿರೋಧಿ ಅಗತ್ಯ ವಸ್ತುಗಳ ಬೆಲೆ ಏರಿಕೆ ನೀತಿ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಏ.15ರಂದು ಛತ್ರಿ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಕೆ. ಮಲ್ಲಯ್ಯ ತಿಳಿಸಿದರು.ನಗರದ ಎಪಿಎಂಸಿಯಲ್ಲಿರುವ ರೈತ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬದುಕನ್ನು ದುಸ್ತರ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸುವ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.ಜನ ವಿರೋಧಿ, ರೈತ ವಿರೋಧಿ, ದಲಿತ ವಿರೋಧಿ ಜಿಲ್ಲಾಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕು. ಗ್ರಾಮೀಣ ಗೃಹ ಬಳಕೆ ಮತ್ತು ರೈತರ ಐಪಿ ಸೆಟ್ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಸರ್ಕಾರದ ನಿರ್ಧಾರವನ್ನು ಕೂಡಲೇ ಕೈ ಬಿಡಬೇಕು. ಐಪಿ ಸೆಟ್ಗಳಿಗೆ ಸಂಪರ್ಕ ಪಡೆಯಲು ಸಂಪೂರ್ಣ ವೆಚ್ಚವನ್ನು ರೈತರು ಭರಿಸುವುದನ್ನು ನಿಲ್ಲಿಸಿ ಹಿಂದಿನಂತೆ ಯಥಾಸ್ಥಿತಿಗೆ ತರಬೇಕು ಎಂದು ಒತ್ತಾಯಿಸಿದರು.ವಿದ್ಯುತ್ ದರ 1 ಯುನಿಟ್ ಗೆ 36 ಪೈಸೆ ಏರಿಸಿರುವುದನ್ನು ತಕ್ಷಣ ಕೈಬಿಡಬೇಕು. ರೈತರಿಗೆ ನಿರಂತರ 7 ತಾಸು ಗುಣಮಟ್ಟದ 3 ಪೇಸ್ ವಿದ್ಯುತ್ ಸರಬರಾಜು ಮಾಡಬೇಕು. ಏರಿಸಿರುವ ಹಾಲಿನ ದರವನ್ನು ರೈತರಿಗೆ ಕೊಡಬೇಕು ಎಂದು ತಿಳಿಸಿದರು.ರೈತ ಸಂಘದ ಯುವ ಕಾರ್ಯದರ್ಶಿ ಚೀಲೂರು ಮುನಿರಾಜು ಮಾತನಾಡಿ, ಜಿಲ್ಲೆಯ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಜಿಲ್ಲಾಧಿಕಾರಿಗಳು ಸಭೆ ಕರೆದು ಪರಿಹರಿಸುತ್ತಿಲ್ಲ. ಜಿಲ್ಲಾಧಿಕಾರಿಗಳು ಕೂಡಲೇ ರೈತರ ಸಭೆ ಕರೆದು ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ರೈತರಿಗೆ ಬರಬೇಕಾದ ಬರ ಪರಿಹಾರ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.ಸರ್ವೆ ಮತ್ತು ರೆವಿನ್ಯೂ ಇಲಾಖೆಗಳಲ್ಲಿ ಸೇವೆಗಳ ದರವನ್ನು ಹೆಚ್ಚಳ ಮಾಡಿರುವುದನ್ನು ಕೂಡಲೇ ಕಡಿಮೆ ಮಾಡಬೇಕು. ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನಕ್ಕೆ ಕಡಿವಾಣ ಹಾಕಬೇಕು. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡುಪ್ರಾಣಿಗಳಿಂದ ಉಂಟಾಗುತ್ತಿರುವ ಉಪಟಳವನ್ನು ತಪ್ಪಿಸಿ, ಕಾಡುಪ್ರಾಣಿಗಳಿಂದ ಆಗಿರುವ ನಷ್ಟಕ್ಕೆ ಸರಿಯಾದ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದರು.ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ಜನರು ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಶಾಸಕ ಇಕ್ಬಾಲ್ ಹುಸೇನ್ ಅದ್ದೂರಿಯಾಗಿ ಹುಟ್ಟುಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಜನಪ್ರತಿನಿಧಿಗಳು ಯಾರೇ ಆಗಲಿ ಮೊದಲು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಯಾವುದೇ ಸರ್ಕಾರ ರೈತರ ಸಮಸ್ಯೆಯನ್ನು ಪರಿಹರಿಸಲು ಮುಂದಾಗುತ್ತಿಲ್ಲ ಎಂದು ಕಿಡಿಕಾರಿದರು.ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪುಟ್ಟಸ್ವಾಮಿ ಮಾತನಾಡಿ, ಜಿಲ್ಲೆಯ ಮಾವು ಬೆಳೆಗಾರರು ಫಸಲು ಇಲ್ಲದೆ ದಿವಾಳಿಯಾಗಿದ್ದಾರೆ. ಆದರೆ ತೋಟಗಾರಿಕೆ ಇಲಾಖೆಯವು ಜಿಲ್ಲೆಯಲ್ಲ ಶೇ.70ರಷ್ಟು ಮಾವಿನ ಫಸಲು ಇದೆ ಎಂದು ಸುಳ್ಳು ಲೆಕ್ಕವನ್ನು ಸರ್ಕಾರಕ್ಕೆ ಕೊಡುವ ಮೂಲಕ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ವಾಸ್ತವದಲ್ಲಿ ಜಿಲ್ಲೆಯಲ್ಲಿ ಶೆ.20ರಷ್ಟು ಮಾತ್ರ ಮಾವಿನ ಫಸಲಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಎಚ್.ಸಿ. ಕೃಷ್ಣಯ್ಯ, ತಿಮ್ಮೇಗೌಡ, ಎನ್. ವೆಂಕಟೇಶ, ಮರೀಗೌಡ, ಶಿವಪ್ಪ ಇತರರು ಇದ್ದರು.
----11ಕೆಆರ್ ಎಂಎನ್ 4.ಜೆಪಿಜಿ
ರಾಜ್ಯ ರೈತ ಸಂಘದ ಉಪಾದ್ಯಕ್ಷ ಕೆ. ಮಲ್ಲಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.