ಮಹದೇವಪ್ಪ ಎಂ. ಸ್ವಾಮಿ
ಹೆದ್ದಾರಿಯ ಹಲವು ಕಡೆ ಸೂಕ್ತ ಎಚ್ಚರಿಕೆ ಫಲಕಗಳು, ವೇಗ ನಿಯಂತ್ರಣ ಸೂಚನೆಗಳು, ಪ್ರತಿಫಲಕಗಳು, ರಸ್ತೆ ಗುರುತುಗಳು ಹಾಗೂ ರಾತ್ರಿ ವೇಳೆ ಗೋಚರಿಸುವ ಸುರಕ್ಷತಾ ವ್ಯವಸ್ಥೆಗಳ ಕೊರತೆಯಿಂದ ವಾಹನ ಸವಾರರು ಅಪಾಯದ ನಡುವೆ ಸಂಚರಿಸುವಂತಾಗಿದೆ.
ಕೆಲವು ಕಡೆ ರಸ್ತೆ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ಹಾಗೂ ತಾತ್ಕಾಲಿಕ ಸುರಕ್ಷತಾ ಬ್ಯಾರಿಕೇಡ್ಗಳನ್ನು ಅಳವಡಿಸದಿರುವುದರಿಂದ ಅಪಘಾತಗಳ ಸಂಭವ ಹೆಚ್ಚಾಗಿದೆ. ವಾಹನ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆ ಶಾಲೆಗಳು, ಗ್ರಾಮಗಳ ಪ್ರವೇಶ ದ್ವಾರಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ವೇಗ ನಿಯಂತ್ರಣ ವ್ಯವಸ್ಥೆ, ಬೀದಿದೀಪಗಳು ಮತ್ತು ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ರಸ್ತೆಬದಿ ಗಿಡಗಂಟಿಗಳನ್ನು ತೆರವುಗೊಳಿಸಿ ದೃಶ್ಯ ಸ್ಪಷ್ಟತೆ ಕಲ್ಪಿಸಬೇಕು ಹಾಗೂ ಹಾಳಾಗಿರುವ ರಸ್ತೆ ಭಾಗಗಳನ್ನು ತಕ್ಷಣ ದುರಸ್ತಿಪಡಿಸಬೇಕಿದೆ.ಗದಗ- ಹೊನ್ನಾಳಿ ರಾಜ್ಯ ಹೆದ್ದಾರಿ ಪ್ರಮುಖ ರಸ್ತೆ ಮಾರ್ಗಗಳಲ್ಲಿ ಒಂದಾಗಿದೆ. ಈ ಹೆದ್ದಾರಿ ಗದಗ ಜಿಲ್ಲೆಯ ಜನರಿಗೆ ಶಿರಹಟ್ಟಿ, ಲಕ್ಷ್ಮೇಶ್ವರ ಸೇರಿದಂತೆ ಹಲವು ಪಟ್ಟಣಗಳ ಮೂಲಕ ಹೊನ್ನಾಳಿ ಸಂಪರ್ಕ ಕಲ್ಪಿಸುತ್ತದೆ. ಕೃಷಿ, ವ್ಯಾಪಾರ, ಶಿಕ್ಷಣ, ಆರೋಗ್ಯ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ ಈ ರಸ್ತೆ ಅತ್ಯಂತ ಮಹತ್ವದ್ದಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅಪಘಾತಗಳಿಗೆ ಕಾರಣವಾಗುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು. ಮತ್ತಷ್ಟು ಅಮೂಲ್ಯ ಜೀವ ಹಾನಿಯಾಗುವ ಮುನ್ನ ಕೆ- ಶಿಪ್ ಸಂಸ್ಥೆ ಹಾಗೂ ಸಂಬಂಧಿಸಿದ ಇಲಾಖೆ ತುರ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.
ಗದಗ- ಹೊನ್ನಾಳಿ ರಾಜ್ಯ ಹೆದ್ದಾರಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಬೆಂಗಳೂರುನಲ್ಲಿರುವ ಕೆ ಶಿಪ್ ಸಂಸ್ಥೆಯ ಅಧಿಕಾರಿಗಳು ರಾಜ್ಯ ಹೆದ್ದಾರಿ ಕಾಮಗಾರಿ ಮಾಡುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಎಇಇ ಕೆ. ಶಿವಪ್ರಸಾದ ತಿಳಿಸಿದ್ದಾರೆ.