ಪಟ್ಟಣದ ವಿವಿಧೆಡೆ ಅನಧಿಕೃತವಾಗಿ ಅಂಗಡಿ ಇಟ್ಟು ವ್ಯಾಪಾರ: ತೆರವಿಗೆ ಮುಂದಾದ ಪುರಸಭೆ ಅಧಿಕಾರಿಗಳೊಂದಿಗೆ ವ್ಯಾಪಾರಸ್ಥರ ಮಾತಿನ ಚಕಮಕಿ

KannadaprabhaNewsNetwork |  
Published : Feb 01, 2025, 12:04 AM IST
31ಕೆಎಂಎನ್ ಡಿ23 | Kannada Prabha

ಸಾರಾಂಶ

ಈ ಕೂಡಲೇ ಇದನ್ನು ನಿಲ್ಲಿಸದಿದ್ದರೆ ಆಹಾರ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗೆ ದೂರು ನೀಡಲಾಗುವುದು. ರಸ್ತೆ ಬದಿಯಲ್ಲಿ ತಳ್ಳುವ ಗಾಡಿಗಳು ಬೆಳಗ್ಗೆಯಿಂದ ಸಂಜೆವರೆಗೂ ಒಂದೇ ಸ್ಥಳದಲ್ಲಿ ನಿಂತು ವ್ಯಾಪಾರ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ಪಟ್ಟಣದ ವಿವಿಧೆಡೆ ಬೀದಿ ಬದಿ ವ್ಯಾಪಾರಸ್ಥರು ಅನಧಿಕೃತವಾಗಿ ಇಟ್ಟುಕೊಂಡಿದ್ದ ಹಣ್ಣು ಮತ್ತು ತರಕಾರಿ ಅಂಗಡಿಗಳನ್ನು ತೆರವುಗೊಳಿಸಲು ಮುಂದಾದ ವೇಳೆ ವ್ಯಾಪಾರಸ್ಥರು ಮತ್ತು ಪುರಸಭೆ ಅಧಿಕಾರಿಗಳು, ಸಿಬ್ಬಂದಿಯ ನಡುವೆ ಮಾತಿನ ಚಕಮಕಿ ನಡೆಯಿತು.

ಪಟ್ಟಣದ ಮಂಡ್ಯ ಸರ್ಕಲ್, ತಾಲೂಕು ಆಡಳಿತ ಸೌಧದ ಮುಂಭಾಗ ಮತ್ತು ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವ್ಯಾಪಾರಸ್ಥರು ಹಣ್ಣು, ತರಕಾರಿ ಮತ್ತು ತಿಂಡಿ- ತಿನಿಸುಗಳನ್ನು ಮಾರಾಟ ಮಾಡುತ್ತಿರುವುದರಿಂದ ಪಾದಚಾರಿಗಳ ಓಡಾಟಕ್ಕೆ ಹಾಗೂ ವಾಹನ ಸಂಚಾರಕ್ಕೆ ಬಹಳಷ್ಟು ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಶುಕ್ರವಾರ ಬೆಳಗ್ಗೆ ಮಂಡ್ಯ ಸರ್ಕಲ್‌ನಲ್ಲಿ ಅನಧಿಕೃತ ಬೀದಿ ಬದಿ ಹಣ್ಣು ಮತ್ತು ತರಕಾರಿ ವ್ಯಾಪಾರಸ್ಥರನ್ನು ತೆರವುಗೊಳಿಸಲು ಪುರಸಭೆ ಅಧಿಕಾರಿಗಳು ಮುಂದಾಗುತ್ತಿದ್ದಂತೆ ನಾವು ಕಳೆದ 25 ವರ್ಷಗಳಿಂದಲೂ ಪಟ್ಟಣದಲ್ಲಿ ಹಣ್ಣು, ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ನಮಗೆ ಸೂಕ್ತ ಸ್ಥಳವಿಲ್ಲದ ಕಾರಣ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ನಮ್ಮ ಅಂಗಡಿಗಳನ್ನು ತೆರವುಗೊಳಿಸಲು ಬಿಡುವುದಿಲ್ಲ ಎಂದು ವಾಗ್ವಾದಕ್ಕಿಳಿದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ಮಾತನಾಡಿ, ಬೀದಿ ಬದಿಯ ವ್ಯಾಪಾರಸ್ಥರ ಪಟ್ಟಿ ಮಾಡಿ ಪುರಸಭೆ ವಾಣಿಜ್ಯ ಸಂಕೀರ್ಣದ ಒಳಭಾಗದಲ್ಲಿ ಪ್ರತ್ಯೇಕವಾಗಿ ಸ್ಥಳಾವಕಾಶ ಮಾಡಿಕೊಡಲಾಗಿದೆ. ನೆನೆಗುದಿಗೆ ಬಿದ್ದಿದ್ದ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟಿಸಿ ವ್ಯಾಪಾರ, ವಹಿವಾಟು ನಡೆಸುವರಿಗೆ ಮಳಿಗೆಗಳನ್ನು ಬಾಡಿಗೆಗೆ ನೀಡಲಾಗಿದೆ. ಹಾಗಾಗಿ ಬೀದಿ ಬದಿಯ ಹಣ್ಣು, ತರಕಾರಿ ಸೇರಿ ಇನ್ನಿತರೆ ವ್ಯಾಪಾರಸ್ಥರು ನಿಗದಿತ ಸ್ಥಳದಲ್ಲಿ ವ್ಯಾಪಾರ ವಹಿವಾಟು ನಡೆಸಬೇಕು ಎಂದರು.

ಪುರಸಭೆ ವಾಣಿಜ್ಯ ಸಂರ್ಕಿರ್ಣದ 100 ಮೀಟರ್ ವ್ಯಾಪ್ತಿ ರಸ್ತೆ ಬದಿ ಹಣ್ಣು, ತರಕಾರಿ ಮತ್ತು ತಿಂಡಿ- ತಿನಿಸುಗಳನ್ನು ಮಾರಾಟ ಮಾಡುತ್ತಿರುವುದರಿಂದ ಪುರಸಭೆ ವಾಣಿಜ್ಯ ಸಂಕೀರ್ಣ ಕಟ್ಟಡದ ಮಳಿಗೆಗಳಿಗೆ ಲಕ್ಷಾಂತರ ರು. ಮುಂಗಡ ಹಣ ಪಾವತಿಸಿ 25 ರಿಂದ 70 ಸಾವಿರ ರು.ವರೆಗೂ ಬಾಡಿಗೆ ನೀಡುತ್ತಿರುವ ವರ್ತಕರು ತೊಂದರೆಯಾಗುತ್ತಿರುವ ಬಗ್ಗೆ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಪಟ್ಟಣದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾಯ್ದು ಹೋಗಿರುವುದರಿಂದ ಜನರ ಓಡಾಟಕ್ಕೆ, ವಾಹನಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅಡ್ಡಿಯಾಗುತ್ತಿದೆ. ಇದನ್ನು ಅರ್ಥೈಸಿಕೊಂಡು ತಮಗೆ ನಿಗದಿಪಡಿಸಿರುವ ಸ್ಥಳದಲ್ಲಿಯೇ ವ್ಯಾಪಾರ ಮಾಡಬೇಕು ಎಂದು ಬೀದಿಬದಿ ವ್ಯಾಪಾರಸ್ಥರನ್ನು ಮನವೊಲಿಸಲು ಯತ್ನಿಸಿದರು.

ಈ ವೇಳೆ ಮಂಡ್ಯ ಸರ್ಕಲ್‌ನ ಬೀದಿ ಬದಿ ವ್ಯಾಪಾರಸ್ಥರು ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಸಿ ನಮಗೆ ಸೂಕ್ತ ಜಾಗವಿಲ್ಲ. ಹಾಗಾಗಿ ಇಲ್ಲಿಯೇ ವ್ಯಾಪಾರ ಮಾಡುತ್ತೇವೆಂದು ಪಟ್ಟು ಹಿಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಶ್ರೀನಿವಾಸ್, ಪಟ್ಟಣ ವ್ಯಾಪ್ತಿಯ ಫುಟ್‌ಪಾತ್‌ನಲ್ಲಿ ಅಂಗಡಿಗಳು ವ್ಯಾಪಕವಾಗಿ ಹೆಚ್ಚಾಗುತ್ತಿವೆ.

ಫುಟ್‌ಪಾತ್‌ಗಳಲ್ಲಿ ಹೋಟೆಲ್ ನಡೆಸುವವರು ಮನೆಯಿಂದ ತಯಾರಿಸಿಕೊಂಡು ಬರುವ ಪದಾರ್ಥಗಳನ್ನಷ್ಟೇ ಮಾರಾಟ ಮಾಡಬೇಕು. ಆದರೆ, ರಸ್ತೆ ಬದಿಯಲ್ಲಿಯೇ ಮನೆ ಅಡುಗೆ ಸಿಲಿಂಡರ್ ಬಳಸಿಕೊಂಡು ದೋಸೆ, ಇಡ್ಲಿ ಹಾಗೂ ತಿಂಡಿ ಪದಾರ್ಥಗಳನ್ನು ಸಿದ್ಧಪಡಿಸುವ ಜೊತೆಗೆ ನೀರಿನ ಡ್ರಂ ಇಟ್ಟು ಅಲ್ಲಿಯೇ ಗಲೀಜು ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಕೂಡಲೇ ಇದನ್ನು ನಿಲ್ಲಿಸದಿದ್ದರೆ ಆಹಾರ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗೆ ದೂರು ನೀಡಲಾಗುವುದು. ರಸ್ತೆ ಬದಿಯಲ್ಲಿ ತಳ್ಳುವ ಗಾಡಿಗಳು ಬೆಳಗ್ಗೆಯಿಂದ ಸಂಜೆವರೆಗೂ ಒಂದೇ ಸ್ಥಳದಲ್ಲಿ ನಿಂತು ವ್ಯಾಪಾರ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

ಶುಕ್ರವಾರ ವಾರದ ಸಂತೆ ನಡೆಯುತ್ತಿರುವುದರಿಂದ ಫುಟ್‌ಪಾತ್ ಅಂಗಡಿಗಳ ತೆರವುಗೊಳಿಸುವ ಕಾರ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತಿದೆ. ಫೆ.1ರಿಂದ ಯಾವುದೇ ಕಾರಣಕ್ಕೂ ಪಟ್ಟಣದ ರಸ್ತೆ ಬದಿಗಳಲ್ಲಿ ಹಣ್ಣು, ಹೂವು, ತರಕಾರಿ ಸೇರಿದಂತೆ ಇನ್ನಿತರೆ ತಿಂಡಿ ತಿನಿಸುಗಳನ್ನು ಮಾರಾಟ ಮಾಡಕೂಡದು. ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಪುರಸಭೆಯೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪುರಸಭೆ ಆರೋಗ್ಯ ನಿರೀಕ್ಷಕರಾದ ವೆಂಕಟೇಶ್, ನಾಗರಾಜು ಸೇರಿದಂತೆ ಸಿಬ್ಬಂದಿ ಇದ್ದರು.

PREV

Recommended Stories

‘ಚಾಮುಂಡೇಶ್ವರಿ ಬಗ್ಗೆ ಬಾನು ತಮ್ಮ ಗೌರವ ಸ್ಪಷ್ಟಪಡಿಸಲಿ’ : ವಿಜಯೇಂದ್ರ
ಗ್ಯಾರಂಟಿ ಯೋಜನೆಗಳ ಜತೆ ರಾಜ್ಯವು ಅಭಿವೃದ್ಧಿ