ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬಳಘಟ್ಟ ಏತನೀರಾವರಿ ಯೋಜನೆ ವೀಕ್ಷಣೆ ಮಾಡಲಿದ್ದಾರೆ. ನಂತರ ಬಳಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀರಾಮಮಂದಿರ ಹಾಗೂ ಪುನರ್ ನಿರ್ಮಾಣಗೊಂಡಿರುವ ಶ್ರೀಮಾರಮ್ಮದೇವಿ ದೇವಸ್ಥಾನವನ್ನು, ಬಳಿಕ ದೇವಸ್ಥಾನದ ಊಟದ ಹಾಲ್ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಪಾಂಡವಪುರ ತಾಲೂಕಿನ ಮಳೆಯಾಶ್ರಿತ ಪ್ರದೇಶವಾದ ಮೇಲುಕೋಟೆ ಹೋಬಳಿಗೆ ಕಾವೇರಿ ನೀರೊದಗಿಸಲು ಬಳಘಟ್ಟ ಏತನೀರಾವರಿ ಯೋಜನೆಯನ್ನು ನಿರ್ಮಿಸಲು ₹300 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು ಎಂದರು.ಈ ಯೋಜನೆಯಿಂದ ಹಲವು ಗ್ರಾಮಗಳ ಕೆರೆಕಟ್ಟೆಗಳನ್ನು ತುಂಬಿಸುವ ಜತೆಗೆ ಕೃಷಿಗೆ ಅನುಕೂಲ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಬಳಘಟ್ಟ ಗ್ರಾಮಸ್ಥರು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಲಿದ್ದಾರೆ ಎಂದು ಹೇಳಿದರು.
ಸಮಾರಂಭದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸಾನ್ನಿಧ್ಯದಲ್ಲಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಮಮಂದಿರ ಉದ್ಘಾಟಿಸಿ ಅಭಿನಂದನೆ ಸ್ವೀಕರಿಸಲಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಮಾರಮ್ಮನ ಗುಡಿ ಉದ್ಘಾಟಿಸುವರು. ಬೆಂಗಳೂರಿನ ವಕೀಲರಾದ ವಿನುತ ರಾಘವೇಂದ್ರ ಮತ್ತು ರಾಘವೇಂದ್ರ ಶ್ರೀರಾಮಮಂದಿರ ಗರ್ಭಗುಡಿ ಉದ್ಘಾಟಿಸುವರು.