ಬಳ್ಳಾರಿ: ಕೇಂದ್ರ ಬಿಜೆಪಿ ಸರ್ಕಾರ ಅವೈಜ್ಞಾನಿಕ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಕೈಗೊಳ್ಳುವ ಮೂಲಕ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಎಸಗಲು ಮುಂದಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಗುರಾಣಿಯಾಗಿ ಇಟ್ಟುಕೊಂಡು ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮಂಡಿಸಲು ಎಲ್ಲ ತಯಾರಿ ನಡೆಸಿತ್ತು. ಆದರೆ, ವಿರೋಧ ಪಕ್ಷಗಳು ಆ ಮಸೂದೆಯನ್ನು ಸೋಲಿಸಿವೆ. 2023ರಲ್ಲೇ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಬಂದಿದೆ. ಆದರೆ, ಅದನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿಲ್ಲ. ಈಗ ಆ ಮಸೂದೆಯನ್ನು ಮುಂದಿಟ್ಟು ಅವೈಜ್ಞಾನಿಕ ರೀತಿಯಲ್ಲಿ ಕ್ಷೇತ್ರ ಮರವಿಂಗಡನೆಗೆ ಹೊರಟಿದೆ ಎಂದು ಪ್ರತಿಭಟಕಾರಾರರು ಟೀಕಿಸಿದರು.
ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಮಹಿಳಾ ಮೀಸಲಾತಿ ನೆಪದಲ್ಲಿ ಅವೈಜ್ಞಾನಿಕ ಕ್ಷೇತ್ರ ಮರು ವಿಂಗಡಣೆಗೆ ಮುಂದಾಗಿತು. ಕೇಂದ್ರದ ಈ ನಿಲುವನ್ನು ಪ್ರತಿಪಕ್ಷ ಕಾಂಗ್ರೆಸ್ ವಿರೋಧಿಸಿದೆ. ಆದರೆ, ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಎಂಬಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಬಿಂಬಿಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ಎಂದೂ ಮಹಿಳಾ ವಿರೋಧಿ ನೀತಿಯನ್ನು ಅನುಸರಿಸಿಲ್ಲ. ಮಹಿಳಾ ಪರವಾದ ಅನೇಕ ಕಾನೂನುಗಳನ್ನು ಜಾರಿಗೊಳಿಸಿರುವ ಕಾಂಗ್ರೆಸ್ಗೆ ಮಹಿಳಾ ಪರ ನಿಲುವಿನ ಮೇಲೆ ಯಾವ ಅನುಮಾನ ಪಡಬೇಕಾಗಿಲ್ಲ ಎಂದು ಹೇಳಿದರು.
ಪಕ್ಷದ ಜಿಲ್ಲಾ ಹಾಗೂ ತಾಲೂಕು ಸಮಿತಿ ಸದಸ್ಯರು ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.