‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಫಿ ಅನಾವರಣ

KannadaprabhaNewsNetwork | Published : Jan 3, 2024 1:45 AM

ಸಾರಾಂಶ

ಜನವರಿ ೫ರಂದು ಅಡ್ಯಾರಿನ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕೆಡಬ್ಲುಜೆ ಬ್ರಾಂಡ್‌ ರೋಹನ್‌ ಟ್ರೋಫಿಯನ್ನು ಸಂಸದ ನಳಿನ್‌ ಅನಾವರಣಗೊಳಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರುಬಂದರು, ವಿಮಾನಯಾನ, ರೈಲ್ವೆ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದೆ. ಈ ರೀತಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ವಿಭಿನ್ನತೆಯಿಂದ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ನಗರದ ಓಷಿಯನ್ ಪರ್ಲ್ ಹೊಟೇಲ್‌ನಲ್ಲಿ ಮಂಗಳವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜ.5ರಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ. ಪ್ರಾಂಜಲ್ ಗೌರವಾರ್ಥ ನಡೆಯಲಿರುವ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಫಿ ಅನಾವರಣಗೊಳಿಸಿ ಮಾತನಾಡಿದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, 4 ವರ್ಷದ ಹಿಂದೆ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನವನ್ನು ಮಾದರಿಯಾಗಿ ನಡೆಸಿದ ಹೆಗ್ಗಳಿಕೆ ಪಡೆದುಕೊಂಡ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದ ಅವಕಾಶ ಸಿಕ್ಕಿರುವುದು ನಿಜಕ್ಕೂ ನಮಗೆ ಹೆಮ್ಮೆ. ರಾಜ್ಯದ ನಾನಾ ಜಿಲ್ಲೆಯಿಂದ 600 ಕ್ಕೂ ಅಧಿಕ ಪತ್ರಕರ್ತರು ಆಗಮಿಸುತ್ತಿದ್ದು ಅವರಿಗೆ ಆತಿಥ್ಯ ಸೇರಿದಂತೆ ಯಶಸ್ವಿ ಕ್ರೀಡಾಕೂಟ ಆಯೋಜಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಕರ್ನಾಟಕ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ಕುಟ್ಟಪ್ಪ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಇದ್ದರು.

ಪ್ರೆಸ್‌ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ. ಭಟ್ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಜಗತ್ತಿನ ಸ್ವರ್ಗ: ರೋಹನ್

ಉದ್ಯಮದಲ್ಲಿ ತೊಡಗಿಸಿಕೊಂಡ ನಾವು ದೇಶ-ವಿದೇಶಗಳಲ್ಲಿ ಸುತ್ತಾಡುತ್ತೇವೆ. ಆದರೆ ಕಲೆ, ಸಂಸ್ಕೃತಿ, ಧಾರ್ಮಿಕ ನಂಬಿಕೆ, ಸಹಬಾಳ್ವೆಯ ಇಂತಹ ನಗರವನ್ನು ಮತ್ತೊಂದು ಕಡೆ ಕಾಣಲು ಸಾಧ್ಯವಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಈ ಜಗತ್ತಿನ ಸ್ವರ್ಗ ಎಂದು ರೋಹನ್ ಕಾರ್ಪೊರೇಷನ್ ಅಧ್ಯಕ್ಷ ರೋಹನ್ ಮೊಂತೆರೋ ಹೇಳಿದರು.

ಪತ್ರಕರ್ತರ ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆ ನಿಜಕ್ಕೂ ಚೆನ್ನಾಗಿದ್ದು, ಈ ಶೀರ್ಷಿಕೆಯಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಬೇರೆ ಬೇರೆ ಜಿಲ್ಲೆ, ರಾಜ್ಯಗಳಿಂದ ಪತ್ರಕರ್ತರು ಬರುವ ಕಾರಣ ಮಂಗಳೂರಿನ ಬ್ರ್ಯಾಂಡ್ ಮತ್ತಷ್ಟು ವ್ಯಾಪ್ತಿಗೆ ಪಸರಿಸಲಿ ಎಂದರು.

Share this article