ಮದ್ದೂರು: ನಗರದ ಬೀದಿ ಬದಿ ಅಂಗಡಿಗಳಿಗೆ ಭೇಟಿ ನೀಡಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪನವರು ಸ್ವಚ್ಛತೆ ಮತ್ತು ಆಹಾರ ನೈರ್ಮಲ್ಯ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಪಾನಿಪುರಿ, ಬೇಕರಿ ಹಾಗೂ ಗೋಬಿ ಅಂಗಡಿಗಳಲ್ಲಿ ಬಳಸುವ ನೀರು, ಪಾತ್ರೆಗಳ ಪರಿಶೀಲಿಸಿ ಆಹಾರ ಪದಾರ್ಥಗಳನ್ನು ಸುರಕ್ಷಿತವಾಗಿ ತಯಾರಿಸಿ ಸಾರ್ವಜನಿಕರಿಗೆ ನೀಡುವಂತೆ ಸೂಚನೆ ನೀಡಿ ಅಂಗಡಿಗಳ ಸುತ್ತಮುತ್ತ ಕಸ ಹಾಕದಂತೆ ಸ್ವಚ್ಛತೆ ಕಾಪಾಡುವಂತೆ ಕಟ್ಟುನಿಟ್ಟಿನ ಆದೇಶ ಮಾಡಿದರು. ಸಾರ್ವಜನಿಕರ ಆರೋಗ್ಯದೊಂದಿಗೆ ಯಾವುದೇ ರೀತಿ ರಾಜಿ ಮಾಡಿಕೊಳ್ಳಬಾರದು. ಬೀದಿ ಬದಿ ಆಹಾರ ಮಳಿಗೆಗಳಲ್ಲಿ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಗ್ರಾಹಕರಿಗೆ ಗುಣಮಟ್ಟದ ಆಹಾರ ಒದಗಿಸುವ ಜವಾಬ್ದಾರಿ ಪ್ರತಿಯೊಬ್ಬ ವ್ಯಾಪಾರಿಯದ್ದಾಗಿದೆ ಎಂದು ಹೇಳಿದರು.
ಮದ್ದೂರು: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ನಗರಸಭೆ ಶುಚಿತ್ವದ ಕಾರ್ಯವೈಖರಿ ಕುರಿತು ಉಪಲೋಕಾಯುಕ್ತ ಬಿ.ವೀರಪ್ಪ ಶುಕ್ರವಾರ ಮೆಚ್ಚುಗೆ ವ್ಯಕ್ತಪಡಿಸಿದರು.
ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು, ತುರ್ತು ಚಿಕಿತ್ಸಾ ಘಟಕ, ಡಯಾಲಿಸಿಸ್ ಕೇಂದ್ರ, ಪ್ರಯೋಗ ಶಾಲೆ, ಫಾರ್ಮಸಿ, ಹೆರಿಗೆ ವಾರ್ಡ್, ಸಾಮಾನ್ಯ ವಾರ್ಡ್ ಗೆ ಜಿಲ್ಲಾಧಿಕಾರಿ ಡಾ. ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆಸ್ಪತ್ರೆಯಲ್ಲಿನ ಚಿಕಿತ್ಸಾ ಪದ್ಧತಿ, ವೈದ್ಯರುಗಳ ನಡವಳಿಕೆ ಕುರಿತು ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬೆಟ್ಟಸ್ವಾಮಿಗೌಡ, ಡಾ.ಆಶಾಲತಾ, ತಾಲೂಕು ಆರೋಗ್ಯ ಅಧಿಕಾರಿ ಡಾ.ರವಿಶಂಕರ್, ಆಡಳಿತ ವೈದ್ಯ ಡಾ.ಬಾಲಕೃಷ್ಣ ಅವರೊಂದಿಗೆ ಮಾತುಕತೆ ನಡೆಸಿದರು. ಆಸ್ಪತ್ರೆಯಲ್ಲಿನ ಕೆಲವೊಂದು ನ್ಯೂನತೆಗಳನ್ನು ಬಿಟ್ಟರೆ ಮಿಕ್ಕೆಲ ವ್ಯವಸ್ಥೆಗಳು ಸಮರ್ಪಕವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮದ್ದೂರು ನಗರಸಭೆ ವಾರ್ಡ್ ಗಳು ಮತ್ತು ಪ್ರಮುಖ ರಸ್ತೆಗಳ ಸ್ವಚ್ಛತೆ ಹಾಗೂ ಕಸ ವಿಲೇವಾರಿಗೆ ಕೈಗೊಂಡ ಕ್ರಮಗಳ ಬಗ್ಗೆ ನಗರ ಸಭೆ ಆಯುಕ್ತೆ ರಾಧಿಕಾ ಸೋಮಶೇಖರ್, ಪರಿಸರ ಅಭಿಯಂತರೆ ಅರ್ಚನ ಆರಾಧ್ಯ ಮತ್ತು ಸ್ವಚ್ಛತಾ ಸಿಬ್ಬಂದಿ ಕೆಲಸವನ್ನು ಶ್ಲಾಘಿಸಿದರು.