₹1.50 ಕೋಟಿ ದಾಟಿದ ಯುಪಿಐ ವಹಿವಾಟು

KannadaprabhaNewsNetwork |  
Published : Jan 03, 2024, 01:45 AM IST
ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಕರು ಯುಪಿಐ ಮೂಲಕ ವಹಿವಾಟು ಮಾಡಿ ಟಿಕೆಟ್‌ ಖರೀದಿಸಿದರು. | Kannada Prabha

ಸಾರಾಂಶ

. ಸಾರ್ವಜನಿಕರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಎಲ್ಲ ನಗದು ರಹಿತ ವ್ಯವಹಾರಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ.

- ಜನವರಿ ತಿಂಗಳಲ್ಲಿ ಎಲ್ಲ ಬಸ್ಸುಗಳಲ್ಲಿ ಯುಪಿಐ ವಹಿವಾಟು ಲಭ್ಯ: ಭರತ್‌ ಎಸ್‌

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿಯೇ ಮೊದಲ ಬಾರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾದ ಯುಪಿಐ ವ್ಯವಸ್ಥೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ವಹಿವಾಟುಗಳ ಮೊತ್ತ ₹ 1.50 ಕೋಟಿ ದಾಟಿದ್ದು, ತಿಂಗಳಲ್ಲಿ ಸಂಸ್ಥೆಯ ಎಲ್ಲ ಬಸ್ಸುಗಳಿಗೂ ಈ ವ್ಯವಸ್ಥೆ ವಿಸ್ತರಿಸಲಾಗುತ್ತದೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಆರಾಮದಾಯಕ ಹಾಗೂ ಪ್ರಯಾಣಿಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ಸಂಸ್ಥೆಯಲ್ಲಿ ಹಲವಾರು ಉಪಕ್ರಮ ಅಳವಡಿಸಿಕೊಳ್ಳಲಾಗುತ್ತಿದೆ. ಸಾರ್ವಜನಿಕರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಎಲ್ಲ ನಗದು ರಹಿತ ವ್ಯವಹಾರಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ.

ಅದರಂತೆ ಬಸ್ಸುಗಳಲ್ಲಿ ಟಿಕೆಟ್ ಪಡೆಯಲು ಯುಪಿಐ ಪಾವತಿ ವ್ಯವಸ್ಥೆಯನ್ನು ರಾಜ್ಯದಲ್ಲಿಯೇ ಮೊದಲ ಬಾರಿಗೆ ಹುಬ್ಬಳ್ಳಿ ಗ್ರಾಮಾಂತರ 3ನೇ ಘಟಕದ ಬಸ್ಸುಗಳಲ್ಲಿ ಸೆ.1ರಿಂದ ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತು. ಈ ನೂತನ‌ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಿರ್ವಾಹಕರಿಗೆ ಪ್ರತ್ಯೇಕ ಸ್ಟ್ಯಾಟಿಕ್ ಕ್ಯೂ ಆರ್ ಕೋಡ್ ನೀಡಲಾಗಿದೆ. ಪ್ರಯಾಣಿಕರು ಫೋನ್ ಪೇ, ಗೂಗಲ್ ಪೇ ಮತ್ತಿತರ ಯಾವುದೇ ಯುಪಿಐ ಅಪ್ಲಿಕೇಷನ್ ಮೂಲಕ ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಪದೆ ಪದೇ ಪ್ರಯಾಣಿಕರು ಹಾಗೂ ನಿರ್ವಾಹಕರ ನಡುವೆ ಸಂಘರ್ಷಕ್ಕೆ ಕಾರಣವಾಗುವ ಚಿಲ್ಲರೆ ಸಮಸ್ಯೆ ಪರಿಹಾರ, ನಗದು ರಹಿತ ಪ್ರಯಾಣ ಹಾಗೂ ಸಮಯದ ಉಳಿತಾಯ ಮುಂತಾದ ಪ್ರಯೋಜನಗಳಿಂದಾಗಿ ಯುಪಿಐ ವ್ಯವಸ್ಥೆಗೆ ಸಾರ್ವಜನಿಕರಿಂದ ಹಾಗೂ ಸಿಬ್ಬಂದಿಗಳಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ.

ಪ್ರಸ್ತುತ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಲ್ಲ 452 ಬಸ್ಸುಗಳಿಗೆ ವಿಸ್ತರಿಸಲಾಗಿದೆ. ಇಲ್ಲಿಯ ವರೆಗೆ 71,396 ವಹಿವಾಟುಗಳು ನಡೆದಿದ್ದು ₹1,50,26,815 ಮೊತ್ತ ಪಾವತಿಯಾಗಿರುತ್ತದೆ. ಬಹಳಷ್ಟು ಅನುಕೂಲತೆಗಳಿರುವುದರಿಂದ ಸಾರ್ವಜನಿಕರು ಹಾಗೂ ಸಿಬ್ಬಂದಿಗಳ ಬೇಡಿಕೆಯಂತೆ ಯುಪಿಐ ಪಾವತಿ ವ್ಯವಸ್ಥೆಯನ್ನು ಇತರೆ ಬಸ್ಸುಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಸಂಬಂಧಿತ ಪ್ರಕ್ರಿಯೆಗಳು ಪ್ರಗತಿಯಲ್ಲಿದ್ದು, ಜನವರಿ ತಿಂಗಳ ಅಂತ್ಯದೊಳಗೆ ಸಂಸ್ಥೆಯ ಎಲ್ಲ 4581 ಬಸ್ ಗಳಲ್ಲಿ ಈ ವ್ಯವಸ್ಥೆ ಲಭ್ಯವಾಗಲಿದೆ. ಇದರ ಜತೆಗೆ ಬಸ್ಸುಗಳಲ್ಲಿ ಈಗಿರುವ ನಗದು ಪಾವತಿ ವ್ಯವಸ್ಥೆಯೂ ಮುಂದುವರೆಯುತ್ತದೆ ಎಂದು ಭರತ್ ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತನ್ನ ಮರ ಕಡಿದಿದ್ದಕ್ಕೆ ವಿಧಾನಸೌಧ ಬಳಿ ಸರ್ಕಾರಿ ಶ್ರೀಗಂಧ ಮರ ಕತ್ತರಿಸಿದ ರೈತ!
ಸಿದ್ದರಾಮಯ್ಯ , ನಾನು ಕದ್ದು ಮುಚ್ಚಿ ಮಾತಾಡಿಲ್ಲ, ನಮ್ಮಲ್ಲಿ ಗೊಂದಲವೂ ಇಲ್ಲ : ಡಿಸಿಎಂ