ಕೈ ಮಹಾನಗರ ಅಧ್ಯಕ್ಷ ಆಯ್ಕೆ ಸಭೆಯಲ್ಲಿ ಗದ್ದಲ

KannadaprabhaNewsNetwork |  
Published : Jul 28, 2026, 03:00 AM IST
ಕಾಂಗ್ರೆಸ್‌ ಸಭೆಯಲ್ಲಿ ಗದ್ದಲ, ಗೊಂದಲ ಉಂಟಾಯಿತು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿ ಮಹಾನಗರ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ತೀವ್ರ ಗೊಂದಲ ಮತ್ತು ಗದ್ದಲ ಉಂಟಾಯಿತು. ಮಾತಿಗೆ ಮಾತು ಬೆಳೆದು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಸುವ ಹಂತಕ್ಕೂ ತಲುಪಿತ್ತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಮಹಾನಗರ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ತೀವ್ರ ಗೊಂದಲ ಮತ್ತು ಗದ್ದಲ ಉಂಟಾಯಿತು. ಮಾತಿಗೆ ಮಾತು ಬೆಳೆದು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಸುವ ಹಂತಕ್ಕೂ ತಲುಪಿತ್ತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲೂ ಅಭಿಪ್ರಾಯ ಸಂಗ್ರಹ ಸಭೆ ಆಯೋಜಿಸಲಾಗಿತ್ತು. ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಅಭಿಪ್ರಾಯ ಪಡೆಯಲಾಯಿತು.

ಮಹಾನಗರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಹ ಹಾಗೂ ಸಂಘಟನಾ ಸಾಮರ್ಥ್ಯ ಹೊಂದಿರುವ ಮುಖಂಡರನ್ನು ಆಯ್ಕೆ ಮಾಡಬೇಕು ಎಂಬ ಉದ್ದೇಶದಿಂದ ಸಭೆ ಕರೆಯಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿ ವಿವಿಧ ಮುಖಂಡರ ಹೆಸರು ಪ್ರಸ್ತಾಪವಾದ ಸಂದರ್ಭದಲ್ಲಿ ಕಾರ್ಯಕರ್ತರು ತಮ್ಮ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಅಭಿಪ್ರಾಯ ಮಂಡಿಸಿದರು.

ಕೆಲವರು ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರೆ, ಮತ್ತೊಂದು ಗುಂಪು ಜನ ಸಂಪರ್ಕ, ಸಂಘಟನಾ ಸಾಮರ್ಥ್ಯ ಹಾಗೂ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ನಾಯಕತ್ವ ಹೊಂದಿರುವವರಿಗೆ ಜವಾಬ್ದಾರಿ ನೀಡಬೇಕು ಎಂದು ಆಗ್ರಹಿಸಿತು.

ಒಂದೇ ವೇಳೆ ಹಲವು ಕಾರ್ಯಕರ್ತರು ಮಾತನಾಡಲು ಮುಂದಾದ ಕಾರಣ ಸಭೆಯಲ್ಲಿ ಗೊಂದಲ ಹೆಚ್ಚಾಯಿತು. ತಮ್ಮ ಬೆಂಬಲಿತ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕೆಲವರು ಜೋರಾಗಿ ಒತ್ತಾಯಿಸಿದ ಪರಿಣಾಮ ಸಭೆಯಲ್ಲಿ ವಾತಾವರಣ ಬಿಸಿಯೇರಿತು. ಮುಖಂಡರು ಕಾರ್ಯಕರ್ತರನ್ನು ಸಮಾಧಾನಪಡಿಸಿ ಶಾಂತಿಯುತವಾಗಿ ಅಭಿಪ್ರಾಯ ದಾಖಲಿಸುವಂತೆ ಮನವಿ ಮಾಡಿದರೂ ಕೆಲಕಾಲ ಗದ್ದಲ ಮುಂದುವರಿಯಿತು.

ಮಾಜಿ ಶಾಸಕ ಕುಡಚಿ ಆಕ್ರೋಶ:

ಅಭಿಪ್ರಾಯ ಸಂಗ್ರಹದ ವೇಳೆ ಮಾಜಿ ಶಾಸಕ ರಮೇಶ ಕುಡಚಿ ಪಕ್ಷದ ಕಾರ್ಯವೈಖರಿ ಹಾಗೂ ಕೆಲವು ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಮಾತಿಗೆ ಮಾತು ಬೆಳೆದು ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿದರು. ಮಾಜಿ ಶಾಸಕ ರಮೇಶ ಕುಡಚಿ ಅವರ ಆಪ್ತ ಹೇಮಂತ ಲೇಂಗಡೆ ಎಂಬುವವರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹೇಮಂತ್ ಲೇಂಗಡೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ಕೆಲವು ಮುಖಂಡರ ವಿರುದ್ಧ ನಿರಂತರವಾಗಿ ಬರಹಗಳನ್ನು ಪ್ರಕಟಿಸುತ್ತಿದ್ದರು. ಇದೇ ವಿಚಾರವಾಗಿ ಕೆಲವರು ಆಕ್ಷೇಪಿಸಿದಾಗ ವಾಗ್ವಾದ ಉಂಟಾಗಿ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ, ಹಲ್ಲೆಗೆ ನಿಖರ ಕಾರಣವೇನು ಮತ್ತು ಯಾರು ಹಲ್ಲೆ ನಡೆಸಿದ್ದಾರೆ ಎಂಬುದು ನಿಖರವಾಗಿ ಗೊತ್ತಾಗಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾರ್ಕೆಟ್ ಠಾಣೆ ಪೊಲೀಸರು ಕಾಂಗ್ರೆಸ್ ಭವನಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಕಾರ್ಯಕರ್ತರನ್ನು ಚದುರಿಸಿ, ಸಭೆಯಲ್ಲಿ ಶಾಂತಿ ಕಾಪಾಡುವಂತೆ ಸೂಚಿಸಿದರು.

-------

ಬಾಕ್ಸ್

ಸಭೆಯಲ್ಲಿ ಗಲಾಟೆ ನಡೆದಿಲ್ಲ: ಆಸೀಫ್ ಸೇಠ್

ಕಾಂಗ್ರೆಸ್ ಸಭೆಯಲ್ಲಿ ಗಲಾಟೆ ನಡೆದಿದೆ ಎಂಬ ವರದಿಗಳನ್ನು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ತಳ್ಳಿ ಹಾಕಿದರು. ಈ ಬಗ್ಗೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಯಾವುದೇ ಗಲಾಟೆ ನಡೆದಿಲ್ಲ. ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಯೊಬ್ಬರಿಗೂ ಒಂದೊಂದು ಅಭಿಪ್ರಾಯ ಇರುತ್ತದೆ. ಕಾರ್ಯಕರ್ತರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಿದ್ದಾರೆ. ಕೆಲವರು ಜೋರಾಗಿ ಮಾತನಾಡಿದ ಮಾತ್ರಕ್ಕೆ ಅದನ್ನು ಗಲಾಟೆ ಎಂದು ಬಿಂಬಿಸುವುದು ಸರಿಯಲ್ಲ ಎಂದರು.

ಮಹಾನಗರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯಾರ ಬೇಕಾದರೂ ಅರ್ಜಿ ಸಲ್ಲಿಸಬಹುದು. ಪಕ್ಷದಲ್ಲಿ ಎಲ್ಲರಿಗೂ ಅವಕಾಶವಿದೆ. ಅರ್ಜಿ ಸಲ್ಲಿಸಿದವರ ರಾಜಕೀಯ ಅನುಭವ, ಪಕ್ಷ ಸಂಘಟನೆಗೆ ನೀಡಿರುವ ಕೊಡುಗೆ, ಕಾರ್ಯಕರ್ತರೊಂದಿಗೆ ಹೊಂದಿರುವ ಸಂಪರ್ಕ ಹಾಗೂ ನಾಯಕತ್ವದ ಸಾಮರ್ಥ್ಯವನ್ನು ಪಕ್ಷದ ವರಿಷ್ಠರು ಪರಿಶೀಲಿಸಲಿದ್ದಾರೆ. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪಕ್ಷದ ನಿಯಮಾನುಸಾರ ನಡೆಯಲಿದೆ. ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರಿಂದ ಸಂಗ್ರಹಿಸಲಾದ ಅಭಿಪ್ರಾಯಗಳನ್ನು ವರಿಷ್ಠರಿಗೆ ಕಳುಹಿಸಲಾಗುವುದು. ಪಕ್ಷದ ಹಿತದೃಷ್ಟಿಯಿಂದ ಸೂಕ್ತ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕೆಲವರು ಏಕಕಾಲದಲ್ಲಿ ಮಾತನಾಡಿದ್ದರಿಂದ ಗೊಂದಲ ಉಂಟಾಗಿದೆ. ಎಲ್ಲ ಕಾರ್ಯಕರ್ತರ ಅಭಿಪ್ರಾಯಗಳಿಗೆ ಗೌರವ ನೀಡಲಾಗುವುದು. ಅಗತ್ಯವಿದ್ದರೆ ಸಭೆಯ ಬಳಿಕ ಪ್ರತಿಯೊಬ್ಬ ಕಾರ್ಯಕರ್ತರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕಾ ಬಲೆಗೆ ಬಿದ್ದ ಉಪಖಜಾನೆ ಅಧಿಕಾರಿಗಳು
ಸ್ಫೋಟಕ ಬಳಕೆಯ ಯಾವುದೇ ಸುಳಿವು ಪತ್ತೆಯಾಗಿಲ್ಲ