ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಒತ್ತು ನೀಡಿ: ಎಚ್.ಸಿ.ಬಾಲಕೃಷ್ಣ

KannadaprabhaNewsNetwork |  
Published : Sep 01, 2026, 01:15 AM IST
1 | Kannada Prabha

ಸಾರಾಂಶ

ನಗರ ಪ್ರದೇಶದಲ್ಲಿ ಮೂಲಭೂತ ಸೌಲಭ್ಯ ನೀಡುವುದು ನಮ್ಮ ಇಲಾಖೆ ಜವಾಬ್ದಾರಿಯಾಗಿದೆ. ಆಡಳಿತವನ್ನು ನಡೆಸಲು ಸಂಪನ್ಮೂಲ ಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪನ್ಮೂಲ ನೀಡುತ್ತವೆ. ಅಲ್ಲದೇ, ಸ್ಥಳೀಯವಾಗಿ ಇರುವ ಆಸ್ತಿಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ ನೀಡುವ ಸೌಲಭ್ಯಗಳ ಟ್ಯಾಕ್ಸ್‌ಗಳನ್ನು ನಿಗಧಿತ ಅವಧಿಯಲ್ಲಿ ವಸೂಲಿ ಮಾಡಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ನಗರ ಸ್ಥಳೀಯ ಸಂಸ್ಥೆಗಳು ನೀರು, ರಸ್ತೆ, ಒಳಚರಂಡಿ, ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು. ಈ ಸೌಲಭ್ಯಗಳನ್ನು ಕಲ್ಪಿಸಲು ಸಂಪನ್ಮೂಲಗಳ ಕ್ರೂಢೀಕರಣ ಮಾಡಬೇಕು ಎಂದು ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ತಿಳಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಸೋಮವಾರ ನಡೆದ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಗಳ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ಪ್ರದೇಶದಲ್ಲಿ ಮೂಲಭೂತ ಸೌಲಭ್ಯ ನೀಡುವುದು ನಮ್ಮ ಇಲಾಖೆ ಜವಾಬ್ದಾರಿಯಾಗಿದೆ. ಆಡಳಿತವನ್ನು ನಡೆಸಲು ಸಂಪನ್ಮೂಲ ಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪನ್ಮೂಲ ನೀಡುತ್ತವೆ. ಅಲ್ಲದೇ, ಸ್ಥಳೀಯವಾಗಿ ಇರುವ ಆಸ್ತಿಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ ನೀಡುವ ಸೌಲಭ್ಯಗಳ ಟ್ಯಾಕ್ಸ್‌ಗಳನ್ನು ನಿಗಧಿತ ಅವಧಿಯಲ್ಲಿ ವಸೂಲಿ ಮಾಡಬೇಕು. ಸ್ವಚ್ಛತೆ, ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆ ಉತ್ತಮವಾಗಿ ಇರಬೇಕು ಎಂದು ಸೂಚಿಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಂಜಿನಿಯರ್ ಹುದ್ದೆಗಳು ಖಾಲಿ ಇರುವ ಕಡೆಗೆ ಪಿಡಬ್ಲ್ಯೂಡಿ ಇಲಾಖೆಯಿಂದ ಹೆಚ್ಚುವರಿ ಹೊಣೆ ನೀಡಿ ನಿಯೋಜನೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮಂಡಿಸುವ ಬಜೆಟ್ ಕಾಟಾಚಾರಕ್ಕೆ ಆಗಬಾರದು. ತೆರಿಗೆ ವಸೂಲಾತಿ ವ್ಯವಸ್ಥಿತವಾಗಿ ಮಾಡಿ, ತೆರಿಗೆ ವಸೂಲಾತಿಗೆ ಪೂರಕವಾಗಿ ಬಜೆಟ್ ಮಂಡನೆ ಆಗಬೇಕು ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನ ಶೇ.30 ರಷ್ಟು ಬರುತ್ತದೆ. ನಗರ ಸ್ಥಳೀಯ ಸಂಸ್ಥೆಗಳ ಮೇಲೆ ಇರುವ ಕೋರ್ಟ್ ಪ್ರಕರಣಗಳ ಕುರಿತು ಪೌರಾಡಳಿತ ಇಲಾಖೆಯ ಕಾನೂನು ವಿಭಾಗ ಸಮರ್ಥವಾಗಿ ವಾದ ಮಂಡಿಸಬೇಕು. ಸ್ಥಳೀಯ ಸಂಸ್ಥೆಗಳು ಆಸ್ತಿಗಳ ಒತ್ತುವರಿ ತೆರವು ಮಾಡಲು ಅಭಿಯಾನ ಕಾರ್ಯವನ್ನು ಹಮ್ಮಿಕೊಳ್ಳುವುದು. ಒತ್ತುವರಿ ತೆರವಿನಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಮಾಡಿಕೊಂಡು ಬಯೋ ಗ್ಯಾಸ್ ಉತ್ಪಾದನೆ ಮಾಡಿಕೊಳ್ಳಲು ಹಲವು ಕಂಪನಿಗಳು ಮುಂದೆ ಬಂದಿವೆ. ಈ ಕಂಪನಿಗಳ ಜೊತೆ ಸಭೆ ನಡೆಸಿ ಒಪ್ಪಂದ ಮಾಡಿಕೊಳ್ಳಲಾಗುವುದು. ಖಾಸಗಿ ರಸ್ತೆಗಳನ್ನು ಸರ್ಕಾರಿ ರಸ್ತೆಗಳಾಗಿ ಮಾಡುವ ಕಾಯ್ದೆ ಜಾರಿಗೆ ತರಲಾಗಿದೆ. ಯಾವುದೇ ಅನಧಿಕೃತ ಬಡಾವಣೆಗಳು ನಿರ್ಮಾಣ ಆಗಿದ್ದರೆ ಅವನ್ನು ನಿರ್ಮೂಲನೆ ಮಾಡಲಾಗುವುದು. ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿದೆ ಇದ್ದರೆ ಎಂಜಿನಿಯರ್ ಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.

ಗುತ್ತಿಗೆದಾರರು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳದೆ ಇದ್ದರೆ ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ ಹೋದರೆ ಮೂರು ಬಾರಿ ನೋಟಿಸ್ ನೀಡಿ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಎಂದು ಸೂಚಿಸಿದರು.

ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಪಿ.ಎಸ್.ರವೀಂದ್ರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನಗಳನ್ನು ಸಕಾಲದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಮುಂದಿನ ವರ್ಷಕ್ಕೆ ಕೊಂಡೊಯ್ದರೆ ಎಸ್ಆರ್ ರೇಟ್ ಹೆಚ್ಚಾಗುತ್ತದೆ. ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣ ಮಾಡಿ ಈ ಮೊತ್ತದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಟ್ಯಾಕ್ಸ್ ಕಲೆಕ್ಷನ್ ವ್ಯವಸ್ಥಿತವಾಗಿ ಆಗಬೇಕು. ಅಗತ್ಯವಿರುವೆಡೆ ಕೊಳವೆ ಬಾವಿಗಳನ್ನು ಕೊರೆಸಬೇಕು ಎಂದು ತಿಳಿಸಿದರು.

ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ, ಅಮೃತ್ 2 ಯೋಜನೆಯಡಿ ವಿರಾಜಪೇಟೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಇನ್ನೂ ಮುಗಿದಿಲ್ಲ. ಮನೆ ಮನೆಗೆ ನಲ್ಲಿ ಸಂಪರ್ಕ ಮಾಡಿಸಿಲ್ಲ. ಪುರಸಭೆಯ ಕಟ್ಟಡ ನಿರ್ಮಾಣ ಬಾಕಿ ಇದೆ. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.

ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ಸಿ.ಪುಟ್ಟರಂಗಶೆಟ್ಟಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಕೆ.ವೆಂಕಟೇಶ್, ಜಿ.ಟಿ.ದೇವೇಗೌಡ, ಡಿ.ರವಿಶಂಕರ್, ಜಿ.ಡಿ.ಹರೀಶ್ ಗೌಡ, ಮಂತರ್ ಗೌಡ, ಸಿ.ಎನ್. ಮಂಜೇಗೌಡ, ಡಾ.ಡಿ.ತಿಮ್ಮಯ್ಯ, ಕೆ.ಶಿವಕುಮಾರ್, ಕೆ.ವಿವೇಕಾನಂದ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮೊದಲಾದವರು ಇದ್ದರು.

ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶವ ಸಂಸ್ಕಾರ ಮಾಡಲು ಬರ್ನಿಂಗ್ ಯೂನಿಟ್ ಗಳನ್ನು ಸ್ಥಾಪಿಸಬೇಕು. ಸ್ಥಳೀಯ ಸಂಸ್ಥೆಗಳ ಜಾಗವನ್ನು ಕೆಲವು ಕಡೆ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದು, ಹಲವು ಪ್ರಕರಣಗಳು ಕೋರ್ಟ್ ನಲ್ಲಿ ಇವೆ. ಈ ಬಗ್ಗೆ ಇಲಾಖೆ ಕ್ರಮ ವಹಿಸಬೇಕು.

- ಸಿ.ಪುಟ್ಟರಂಗಶೆಟ್ಟಿ, ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರು

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಂಜಿನಿಯರ್‌ಗಳ ಕೊರತೆ ಇದೆ. ಮೈಸೂರಿನ ವ್ಯಾಪ್ತಿಯಲ್ಲಿ 1000 ಖಾಸಗಿ ಬಡಾವಣೆಗಳನ್ನು ಅಭಿವೃದ್ಧಿ ಮಾಡದೆ ನೀಡಿದ್ದಾರೆ. ಈ ಖಾಸಗಿ ಬಡಾವಣೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ. ಖಾಸಗಿ ಬಡಾವಣೆಗಳಿಗೆ ಸೌಲಭ್ಯಗಳನ್ನು ಒದಗಿಸಲು ಸಚಿವರು ಕ್ರಮ ವಹಿಸಬೇಕು.

- ಜಿ.ಟಿ.ದೇವೇಗೌಡ, ಶಾಸಕರು, ಚಾಮುಂಡೇಶ್ವರಿ ಕ್ಷೇತ್ರ

ಲಕ್ಷ್ಮಣ ತೀರ್ಥ ನದಿಗೆ ಹುಣಸೂರು ನಗರದ ಒಳಚರಂಡಿ ನೀರು ಸೇರುತ್ತಿದ್ದು, ನದಿ ಕಲುಷಿತವಾಗುತ್ತಿದೆ. ಈ ಬಗ್ಗೆ ನಗರಾಭಿವೃದ್ಧಿ ಸಚಿವರ ಗಮನಕ್ಕೂ ತರಲಾಗಿದೆ. ನೀರು ಸೇರದಂತೆ ತಡೆಯಲು ಕಾಮಗಾರಿಗಾಗಿ 72 ಕೋಟಿ ಎಸ್ಟಿಮೇಟ್ ಮಾಡಿ ಕಳುಹಿಸಲಾಗಿದೆ. ಹುಣಸೂರು ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಸಿಬ್ಬಂದಿ ನೇಮಕ ಮಾಡಬೇಕು. ನಗರಸಭೆ ಆಸ್ತಿಗಳ ಒತ್ತುವರಿ ಆಗಿವೆ. ಇವುಗಳ ಒತ್ತುವರಿ ತೆರವು ಆಗಬೇಕು. ಇದರಿಂದ ನಗರಸಭೆಗೆ ಆದಾಯ ಬರುತ್ತದೆ.

- ಜಿ.ಡಿ.ಹರೀಶ್ ಗೌಡ, ಶಾಸಕರು, ಹುಣಸೂರು ಕ್ಷೇತ್ರ

ಅಮೃತ್ 2 ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರು ನೀಡಲು ನಲ್ಲಿ ಸಂಪರ್ಕ ಕಲ್ಪಿಸಿಲ್ಲ. ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. 8 ವೆಟ್ ವೆಲ್ ಗಳನ್ನು ನಿರ್ಮಿಸಬೇಕಿದೆ. ವೆಟ್ ವೆಲ್ ನಿರ್ಮಿಸಲು ಜಾಗ ನೀಡಲಾಗಿದೆ. ನೆಟ್ ವರ್ಕಿಂಗ್ ಕಾಮಗಾರಿಯು ಆಗಬೇಕಿದೆ. ಮಡಿಕೇರಿ ಭಾಗದಲ್ಲಿ ಗುಡ್ಡ ಕುಸಿತಗಳು ಕಂಡು ಬರುತ್ತವೆ. ಹೀಗಾಗಿ, ತಡೆ ಗೋಡೆಗಳು ನಿರ್ಮಾಣವಾಗಬೇಕು. ಮಡಿಕೇರಿಯಲ್ಲಿ ಕಸ ಸಂಗ್ರಹಣೆ ಮಾಡಿ ಕಸ ಸುರಿಯಲು ಜಾಗ ಇಲ್ಲ. ಕಸವನ್ನು ವಿಂಗಡಣೆ ಮಾಡಿ ವಿಲೇವಾರಿ ಮಾಡಲು ಪಿಪಿಪಿ ಮಾದರಿಯಲ್ಲಿ ಅನುವು ಮಾಡಬೇಕು.

- ಮಂತರ್ ಗೌಡ, ಶಾಸಕರು, ಮಡಿಕೇರಿ ಕ್ಷೇತ್ರ

ಕೆ.ಆರ್.ನಗರ ಪುರಸಭೆ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿ ಸಮರ್ಪಕವಾಗಿ ಆಗುತ್ತಿಲ್ಲ. ಹಲವು ಕಡೆ ಬಾಕಿ ಇದೆ. ಪೈಪ್ ಲೈನ್ ಕಾಮಗಾರಿಗೆ ರಸ್ತೆಗಳನ್ನು ಅಗೆದಿದ್ದು ವಾಹನಗಳು ಓಡಾಡಲು ತೊಂದರೆ ಆಗುತ್ತಿದೆ. ಪುರಸಭೆ ವ್ಯಾಪ್ತಿಯಲ್ಲಿ 3 ವೆಟ್ ವೆಲ್ ಗಳು ತುಂಬಿ ಹರಿಯುತ್ತವೆ. ಆದ್ದರಿಂದ ಹೊಸ ವೆಟ್ ವೆಲ್ ಗಳನ್ನು ನಿರ್ಮಿಸಬೇಕು.

- ಡಿ.ರವಿಶಂಕರ್, ಶಾಸಕರು, ಕೆ.ಆರ್. ನಗರ ಕ್ಷೇತ್ರ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳೆಹಾನಿ ಸರ್ವೆ: ರೈತರಿಂದ ಹಣ ವಸೂಲಿ ಆರೋಪ
ಕೆಂಭಾವಿ: ರಾಯರ 355ನೇ ಆರಾಧನಾ ಮಹೋತ್ಸವ