ರಟ್ಟೀಹಳ್ಳಿ: ಬೆಳಗಾವಿಯಲ್ಲಿ ನಡೆದ 2ಎ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಹಾಗೂ ಅದಕ್ಕೆ ಕಾರಣರಾದ ಎಡಿಜಿಪಿ ಹಿತೇಂದ್ರ ಅವರನ್ನು ವಜಾಗೋಳಿಸಬೇಕೆಂದು ಆಗ್ರಹಿಸಿ ಗುರುವಾರ ತಾಲೂಕು ಪಂಚಮಸಾಲಿ ಸಮಾಜದ ನೂರಾರು ಕಾರ್ಯಕರ್ತರಿಂದ ಸುಮಾರು ಅರ್ಧ ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಆನಂತರ ಮಾತನಾಡಿದ ಸಮಾಜದ ತಾಲೂಕಾಧ್ಯಕ್ಷ ಪರಮೇಶಪ್ಪ ಹಲಗೇರಿ, ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಹಲ್ಲೆ ನಡೆಸಿರುವುದನ್ನು ಉಗ್ರವಾಗಿ ಖಂಡಿಸುತ್ತೇವೆ. ಶಾಂತಿಯುತ ಪ್ರತಿಭಟನೆಯನ್ನು ರಣರಂಗ ಮಾಡಿದ ಎಡಿಜಿಪಿ ಹಿತೇಂದ್ರ ಅವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಿಡಿಯುವ ಮುನ್ನ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಅಧಿಕಾರ ಹಿಡಿದ ಆನಂತರ ತಮ್ಮ ವರಸೆ ಬದಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುವುದು ಶತಃಸಿದ್ಧ ಎಂದರು.ಸಮಾಜದ ಮುಖಂಡ, ಸಾಹಿತಿ ಡಾ. ನಿಂಗಪ್ಪ ಚಳಗೇರಿ ಮಾತನಾಡಿ, ಪಂಚಮಸಾಲಿ ಸಮಾಜದಲ್ಲಿ ರೈತ ಸಮುದಾಯದವರು ಹೆಚ್ಚಿದ್ದು, ದೇಶದ ಹಸಿವು ನೀಗಿಸುವ ಸಮಾಜಕ್ಕೆ ಅನ್ಯಾಯ ಮಾಡಿದ ರಾಜ್ಯ ಸರ್ಕಾರಕ್ಕೆ ನಮ್ಮ ಧಿಕ್ಕಾರ. ಲಾಠಿ ಚಾರ್ಜ್ ಮಾಡಿ ಅಮಾಯಕರನ್ನು ಆಸ್ಪತ್ರೆ ಸೇರುವಂತೆ ಮಾಡಿದ್ದು ನಮ್ಮೆಲ್ಲರಿಗೂ ನೋವುಂಟು ಮಾಡಿದೆ ಎಂದರು.