ಶಿಗ್ಗಾಂವಿ: ಪಟ್ಟಣದ ವೀರಾಂಜನೇಯ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿರುವ ಆರೋಪಿತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕು ಜೆಡಿಎಸ್ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಂಜುನಾಥ ಗೌಡಶಿವಣ್ಣವರ, ಪಟ್ಟಣದ ಟಿಂಪೋ ಸ್ಟ್ಯಾಂಡ್ ಬಳಿಯ ವೀರಾಂಜನೇಯ ದೇವಸ್ಥಾನದಲ್ಲಿ ಮಹಮ್ಮದ್ ಜಾಫರ್ ಕದರಮಂಡಲಗಿ ಎಂಬಾತ ಮೂತ್ರ ವಿಸರ್ಜನೆ ಮಾಡಿರುವುದು ಖಂಡನೀಯ.
ಶಿಗ್ಗಾಂವಿ ತಾಲೂಕಿನಲ್ಲಿ ಹಿಂದೂ–ಮುಸ್ಲಿಂರು ಸೌಹಾರ್ದದಿಂದ ಬದುಕುತ್ತಿರುವ ಸಂದರ್ಭದಲ್ಲಿ ಇಂತಹ ಘಟನೆಗಳು ಸಮಾಜದಲ್ಲಿ ವೈಷಮ್ಯಕ್ಕೆ ಕಾರಣವಾಗಬಹುದು. ಆರೋಪಿತನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಎಸ್. ಸಿದ್ದಬಸಪ್ಪ ಯಾದವ್ ಮಾತನಾಡಿ, ಶಿಗ್ಗಾಂವಿಯಲ್ಲಿ ಹಿಂದೂ–ಮುಸ್ಲಿಂರು ಹಲವು ವರ್ಷಗಳಿಂದ ಭಾವೈಕ್ಯತೆಯಿಂದ ಜೀವನ ನಡೆಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಆರೋಪಿತನಿಗೆ ಕಠಿಣ ಶಿಕ್ಷೆ ವಿಧಿಸುವುದರ ಜತೆಗೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.