
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮ ದಿನಾಚರಣೆ
ಬಡವರು, ಶೋಷಿತರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ರಾಜ್ಯದ ಸಾಮಾಜಿಕ ದಿಕ್ಸೂಚಿಯನ್ನೇ ಬದಲಾಯಿಸಿದ ಮಹಾನ್ ನಾಯಕ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಹೇಶ್ ಅಭಿಪ್ರಾಯಪಟ್ಟರು.
ನಗರದ ಕುವೆಂಪು ಕಲಾಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮ ದಿನಾಚರಣೆ ಉದ್ಘಾಟಿಸಿ, ಅರಸು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ಸ್ವಾತಂತ್ರ್ಯೋತ್ತರ ಭಾರತದಲ್ಲಿ ಜಾತೀಯತೆ ಹಾಗೂ ವರ್ಗ ಸಂಘರ್ಷ ಹೆಚ್ಚಾಗಿದ್ದ ಕಾಲಘಟ್ಟದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದೇವರಾಜ ಅರಸು ಪ್ರಧಾನಿ ಇಂದಿರಾ ಗಾಂಧಿಯವರ ೨೦ ಅಂಶಗಳ ಕಾರ್ಯಕ್ರಮ ರಾಜ್ಯದಲ್ಲಿ ಯಥಾವತ್ತಾಗಿ ಜಾರಿಗೆ ತಂದರು ಎಂದರು.
ಮೈಸೂರು ರಾಜ್ಯಕ್ಕೆ ’ಕರ್ನಾಟಕ’ ಎಂದು ಮರು ನಾಮಕರಣ ಮಾಡಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ. ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ‘ಎಲ್.ಜಿ.ಹಾವನೂರು ಆಯೋಗ’ ರಚಿಸಿ, ರಾಜ್ಯದಲ್ಲಿ ಪ್ರಥಮ ಬಾರಿಗೆ ವೈಜ್ಞಾನಿಕ ಮೀಸಲಾತಿ ಜಾರಿಗೆ ತಂದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ನಂತರ ಸಾಮಾಜಿಕ ಸಮಾನತೆ ಮತ್ತು ಮೀಸಲಾತಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ ಮತ್ತೊಬ್ಬ ನಾಯಕ ದೇವರಾಜ ಅರಸು ಎಂದು ಹೇಳಿದರು.
ಜಿ ಪಂ ಸಿಇಒ ಎಚ್.ಎಸ್.ಕೀರ್ತನಾ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಯುವಜನತೆ ಮೊಬೈಲ್ನ ಅತಿಯಾದ ಬಳಕೆಯಿಂದ ಹೊರಬಂದು, ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ ಮಹಾನ್ ನಾಯಕರ ಆದರ್ಶ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಹೇಳಿದರು.
ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಡಾ.ಎಚ್.ಎಸ್.ಸತ್ಯನಾರಾಯಣ ಉಪನ್ಯಾಸ ನೀಡಿದರು. ಕಾರ್ಯಕ್ರಮಕ್ಕೆ ಮುನ್ನ ತಹಸೀಲ್ದಾರ್ ಕಚೇರಿ ಆವರಣದಿಂದ ಕುವೆಂಪು ಕಲಾಮಂದಿರದವರೆಗೆ ದೇವರಾಜ ಅರಸು ಭಾವಚಿತ್ರ ದೊಂದಿಗೆ ನಡೆದ ಮೆರವಣಿಗೆಗೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಚಾಲನೆ ನೀಡಿದರು.
ತಹಸೀಲ್ದಾರ್ ರೇಷ್ಮಾ ಶೆಟ್ಟಿ, ಅರಸು ಸಮಾಜದ ಜಿಲ್ಲಾಧ್ಯಕ್ಷ ಮುಕುಂದರಾಜ್ ಅರಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಸತೀಶ್, ನಗರ ಸಭಾ ಸದಸ್ಯ ಪರಮೇಶ್ವರರಾಜ್ ಅರಸ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ನಾಗೇಶ್ರಾಜ್ ಅರಸ್, ಮಂಜುನಾಥ್ರಾಜ್ ಅರಸ್, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ದಲಿತ ಇದ್ದರು.