ಕೆರೆ, ಡ್ಯಾಂ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿ: ಗೌರವ ಗುಪ್ತಾ

KannadaprabhaNewsNetwork |  
Published : Jul 16, 2026, 03:00 AM IST
ಗದಗ ಜಿಲ್ಲಾಡಳಿತ ಭವನದಿಂದ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್‌ ಅವರು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿರುವ ಎಲ್ಲ ಕೆರೆ, ಡ್ಯಾಂ ಹಾಗೂ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು.

ಗದಗ: ರಾಜ್ಯದಲ್ಲಿ ಮಳೆ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆ ಕೆರೆ, ಜಲಾಶಯ ಹಾಗೂ ಡ್ಯಾಂಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕೇವಲ ಕುಡಿಯುವ ನೀರು ಮತ್ತು ಜನಜೀವನಕ್ಕೆ ಅಗತ್ಯವಾದ ದೈನಂದಿನ ಬಳಕೆಗಳಿಗೆ ಮಾತ್ರ ಮೀಸಲಿಡಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ತಿಳಿಸಿದರು.

ಮಂಗಳವಾರ ಬೆಂಗಳೂರಿನಿಂದ ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಲಭ್ಯತೆ, ಜಲಾಶಯಗಳ ನೀರಿನ ಮಟ್ಟ, ನೀರಿನ ನಿರ್ವಹಣೆ ಹಾಗೂ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಡೆದ ಸಮಗ್ರ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೃಷಿ, ಲಿಫ್ಟ್ ಇರಿಗೇಶನ್, ವಾಹನ ತೊಳೆಯುವುದು, ಕೈಗಾರಿಕಾ ಬಳಕೆ ಹಾಗೂ ಇತರೆ ಅನಿವಾರ್ಯವಲ್ಲದ ಉದ್ದೇಶಗಳಿಗೆ ಸಂಗ್ರಹಿತ ನೀರನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

ರಾಜ್ಯ ಸರ್ಕಾರದ ಆದ್ಯತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದಾಗಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿರುವ ಎಲ್ಲ ಕೆರೆ, ಡ್ಯಾಂ ಹಾಗೂ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಉದ್ದೇಶಕ್ಕೆ ಮೀಸಲಾದ ನೀರನ್ನು ಬೇರೆ ಉದ್ದೇಶಗಳಿಗೆ ಬಳಸಲು ಅವಕಾಶ ನೀಡಬಾರದು ಎಂದರು.

ಕೆರೆ ಹಾಗೂ ಜಲಾಶಯಗಳಿಂದ ಅನಧಿಕೃತವಾಗಿ ನೀರು ಎತ್ತುತ್ತಿರುವ ಪಂಪ್‌ಸೆಟ್‌ಗಳನ್ನು ತಕ್ಷಣವೇ ತೆರವುಗೊಳಿಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿನ ಯಾವುದೇ ಭಾಗದಲ್ಲಿ ಲಿಫ್ಟ್ ಇರಿಗೇಶನ್‌ಗೆ ಜಿಲ್ಲಾಧಿಕಾರಿ ಅನುಮತಿ ನೀಡಬಾರದು. ಸರ್ಕಾರದ ಆದೇಶವನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.

ಕೆರೆ ತುಂಬಿಸುವ ಯೋಜನೆಗಳನ್ನು ಅನುಷ್ಠಾನಗೊಳಿಸುವ ಇಲಾಖೆಗಳು ನೀರಿನ ಬಳಕೆಯಲ್ಲಿ ಯಾವುದೇ ರೀತಿಯ ದುರುಪಯೋಗ ನಡೆಯದಂತೆ ನಿರಂತರ ನಿಗಾ ವಹಿಸಬೇಕು. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉತ್ತಮ ಹಾಗೂ ನಿರಂತರ ಮಳೆಯಾದಲ್ಲಿ ನೀರಿನ ಸಂಗ್ರಹ ಪರಿಸ್ಥಿತಿಯನ್ನು ಮರುಪರಿಶೀಲಿಸಿ, ಅಗತ್ಯವಿದ್ದಲ್ಲಿ ಸರ್ಕಾರ ತನ್ನ ಆದೇಶವನ್ನು ಪರಿಷ್ಕರಿಸಲಿದೆ. ಆದರೆ ಅಷ್ಟರ ವರೆಗೆ ಈಗ ಜಾರಿಯಲ್ಲಿರುವ ಎಲ್ಲ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್‌ ಮಾತನಾಡಿ, ರಾಜ್ಯ ಸರ್ಕಾರ ಹೊರಡಿಸಿರುವ ಎಲ್ಲ ನಿರ್ದೇಶನಗಳನ್ನು ಸಂಬಂಧಿತ ಇಲಾಖೆಗಳು ಯಾವುದೇ ವಿನಾಯಿತಿ ಇಲ್ಲದೆ ಪಾಲಿಸಬೇಕು. ಜಿಲ್ಲೆಯ ಪ್ರತಿಯೊಂದು ಕೆರೆ ಹಾಗೂ ಜಲಾಶಯಗಳ ನೀರಿನ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕು. ಅನಧಿಕೃತವಾಗಿ ನೀರು ಎತ್ತುವ ಚಟುವಟಿಕೆಗಳನ್ನು ತಕ್ಷಣ ತಡೆಯಬೇಕು ಹಾಗೂ ಜಿಲ್ಲೆಯಲ್ಲಿ ಬೇಸಿಗೆಯವರೆಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಲಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಕಂದಾಯ ಸೇರಿದಂತೆ ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸರ್ಕಾರದ ನಿರ್ದೇಶನಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ಚರ್ಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳು ವರದಾನ: ಬಿಇಒ ಬಿ.ವಿ. ಪಾಟೀಲ
ಎಸ್‌ಐಆರ್‌ ಪ್ರಕ್ರಿಯೆ ಪಾರದರ್ಶಕವಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಶ್ರೀಧರ್