ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕನ್ನಡದಲ್ಲಿ 6ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು. ಜನರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ವಿಷಯಗಳನ್ನು ಸರಿಯಾಗಿ ಮನದಟ್ಟು ಮಾಡಲು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ನಾನಾ ಕಾರ್ಯಕ್ರಮ ರೂಪಿಸಿ ಜನಪಯುಕ್ತ ಕೆಲಸ ಮಾಡುತ್ತಿದೆ. ವಿಶೇಷವಾಗಿ ಕನ್ನಡದಲ್ಲಿ 6ನೇ ಸಮ್ಮೇಳನ ಹಮ್ಮಿಕೊಂಡಿದ್ದು ಮಾದರಿಯಾಗಿದೆ ಎಂದರು.
ತುಂಗಭದ್ರಾ ಡ್ಯಾಂನ 92 ಟಿಎಂಸಿ ಪ್ರಮಾಣದ ಬಹುತೇಕ ನೀರು ರಾಯಚೂರು ಜಿಲ್ಲೆಯಲ್ಲಿ 6 ಲಕ್ಷ ಎಕರೆ ಭೂಮಿಗೆ ಹರಿಯುತ್ತಿದೆ. ಈ ಭಾಗದಲ್ಲಿ ನೀರಾವರಿ ಪ್ರದೇಶ ಇನ್ನಷ್ಟು ವಿಸ್ತರಿಸುವ ಪ್ರಯತ್ನ ಮಾಡಲಾಗುತ್ತಿದೆ. ಇಂತಹ ಪ್ರದೇಶದಲ್ಲಿನ ರೈತರು ತಮ್ಮ ಕೃಷಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ಹೊಸ ಪ್ರಯೋಗಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.ಸಂಸದ ಜಿ.ಕುಮಾರ ನಾಯಕ ಮಾತನಾಡಿ, ಕೃಷಿ ವಿಜ್ಞಾನವು ಈ ಹೊತ್ತಿನ ಅತ್ಯಂತ ಅಗತ್ಯ ಅಧ್ಯಯನದ ವಿಷಯವಾಗಿದ್ದು, ಮೆನಸಿಣಕಾಯಿ ಬೆಳೆಗೆ ಕೇಂದ್ರ ಸರ್ಕಾರದಿಂದ ಬೆಂಬಲ ಬೆಲೆ ಲಭ್ಯವಾಗಿದ್ದು ಇಂತಹ ಸಮ್ಮೇಳನದಲ್ಲಿ ನಡೆಯುವ ವಿಚಾರಗಳಿಂದ ಎಂದು ಅಭಿಪ್ರಾಯಪಟ್ಟರು.
ಕೃಷಿ ವಿಶ್ವವಿದ್ಯಾಲಯದ ಕೀಟಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸಮ್ಮೇಳನದ ಸಂಯೋಜಕರು ಹಾಗೂ ಪ್ರಾಧ್ಯಾಪಕ ಡಾ.ಎ.ಜಿ.ಶ್ರೀನಿವಾಸ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷ ಪ್ರೊ.ರಾಜಾಸಾಬ್ ಎ.ಎಚ್., ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಡಿ. ಮಲ್ಲಿಕಾರ್ಜುನ, ತಿಮ್ಮಣ್ಣ ಸೋಮಪ್ಪ ಚಾವಡಿ, ಶರಣಬಸಪ್ಪ ಕೋಟೆಪ್ಪಗೋಳ, ಡೀನ್ ಡಾ.ಕೆ.ನಾರಾಯಣರಾವ್, ವಿಶ್ರಾಂತ ಕುಲಪತಿ ಡಾ.ಎಂ.ಕೆ.ನಾಯಕ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ಪ್ರಾಧ್ಯಾಪಕರಾದ ಮಲ್ಲಿಕಾರ್ಜುನ ಅಯ್ಯನಗೌಡರ, ಡಾ.ಶರಣಗೌಡ ಸೇರಿದಂತೆ ಇತರರು ಇದ್ದರು.