ಹಾವೇರಿ: ವಿದ್ಯಾರ್ಥಿಗಳ ಕಲಿಕೆಗೆ ಹಲವಾರು ಅವಕಾಶಗಳಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಆಪ್ತ ಸಮಾಲೋಚಕ ಡಾ. ಗುರುರಾಜ ಪಾಟೀಲ ತಿಳಿಸಿದರು.ನಗರದ ಕೆಎಲ್ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ 2025- 26ನೇ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನ ಕಾರ್ಯಕ್ರಮದಲ್ಲಿ ಮಾತನಾಡಿ, ಕಲಿಯುವ ವಿದ್ಯಾರ್ಥಿ ಸಾಂಪ್ರದಾಯಿಕ ಮತ್ತು ಪ್ರಾಚೀನ ಸಂಸ್ಕೃತಿ ಮೂಲಕ ಮೌಲ್ಯಗಳನ್ನು ಬೆಳೆಸಿಕೊಂಡು ಸಾಗಬೇಕಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಆಧುನಿಕ ಸೌಲಭ್ಯಗಳನ್ನು ಉತ್ತಮ ಕಲಿಕೆಗೆ ಪೂರಕ ಪ್ರೇರಕ ಅಂಶಗಳನ್ನು ಅಳವಡಿಸಿಕೊಳ್ಳಬೇಕು. ಇಂದು ಕಷ್ಟಪಡಿ ನಾಳೆ ಸುಖ ಪಡಿ ಎಂಬ ಧ್ಯೇಯವನ್ನು ಇಟ್ಟುಕೊಂಡು ಅಧ್ಯಯನ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಎಲ್ಇ ಸಂಸ್ಥೆ ಬೆಳಗಾವಿ ಆಡಳಿತ ಮಂಡಳಿಯ ಸದಸ್ಯ ಎಂ.ಸಿ. ಕೊಳ್ಳಿ ಮಾತನಾಡಿ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಪ್ರಮುಖ ಅಂಗಗಳಾಗಿವೆ. ಶಿಕ್ಷಣವು ಮಾನಸಿಕ, ಬೌದ್ಧಿಕ, ವಿಕಾಸ ಮಾಡಿದರೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಪ್ರತಿಭೆಗಳ ವಿಕಾಸಕ್ಕೆ ಕಾರಣವಾಗುತ್ತವೆ ಎಂದರು.
ಅಕ್ಷತಾ ಹಿರೇಮಠ ಹಾಗೂ ಬಸವರಾಜೇಶ್ವರಿ ಜಿ.ಕೆ. ಸನ್ಮಾನ ಕಾರ್ಯಕ್ರಮ ನಿರೂಪಿಸಿದರು. ಸಮಷ್ಠಿ ರಿತ್ತಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರೊ. ಎಸ್.ಜೆ. ಹುಣಸಿಕಟ್ಟಿಮಠ ನಿರೂಪಿಸಿದರು. ಪ್ರೊ. ಆರ್.ಎಸ್. ರಾಯ್ಕರ ವಂದಿಸಿದರು.