ಪಾದಚಾರಿ ಸುರಂಗ ಮಾರ್ಗಕ್ಕೆ ವಿ.ಸೋಮಣ್ಣರಿಂದ ಶಂಕುಸ್ಥಾಪನೆ

KannadaprabhaNewsNetwork |  
Published : Mar 16, 2025, 01:49 AM IST

ಸಾರಾಂಶ

ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಶನಿವಾರ ಶಿಲಾನ್ಯಾಸ ನೆರವೇರಿಸಿದರು.

ಕಾಮಗಾರಿಗಳಿಗೆ ಚಾಲನೆ

ಕನ್ನಡಪ್ರಭ ವಾರ್ತೆ ತುಮಕೂರು

ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಶನಿವಾರ ಶಿಲಾನ್ಯಾಸ ನೆರವೇರಿಸಿದರು.

ನಗರದ ಶೆಟ್ಟಿಹಳ್ಳಿ ರೈಲ್ವೆಗೇಟ್‌ನಲ್ಲಿ ಈಗಾಗಲೇ ರಸ್ತೆ ಕೆಳ ಸೇತುವೆಯನ್ನು ನಿರ್ಮಿಸಲಾಗಿದ್ದು, ಈ ಕೆಳ ಸೇತುವೆ ಮೂಲಕ ವಾಹನಗಳು ಸಂಚರಿಸುತ್ತಿವೆ. ಆದರೆ ವಾಹನ ದಟ್ಟಣೆ ಇರುವ ಕಾರಣ ಅಂಡರ್‌ಪಾಸ್‌ನಲ್ಲಿ ಪಾದಚಾರಿಗಳು ಸಂಚರಿಸುವುದು ಕಷ್ಟಕರವಾಗಿರುವುದನ್ನು ಮನಗಂಡ ಸಚಿವ ಸೋಮಣ್ಣ ಅವರು 2.49 ಕೋಟಿ ರು. ವೆಚ್ಚದಲ್ಲಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಸಚಿವ ಸೋಮಣ್ಣ ಅವರು, ರಾಜ್ಯದಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿಗಳಿಗೆ ಈ ಹಿಂದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎರಡೂ ಹಣ ನೀಡುತ್ತಿದ್ದವು. ಆದರೆ ಇತ್ತೀಚೆಗೆ ರಾಜ್ಯ ಸರ್ಕಾರಗಳು ಹಣ ಬಿಡುಗಡೆ ಮಾಡದಿರುವುದನ್ನು ಗಮನಿಸಿದ ಕೇಂದ್ರ ಸರ್ಕಾರ ಲೆವೆಲ್ ಕ್ರಾಸಿಂಗ್ ಮೇಲ್ಸೇತುವೆ ಮತ್ತು ಕೆಳ ಸೇತುವೆ ಕಾಮಗಾರಿಗಳಿಗೆ ಸಂಪೂರ್ಣ ಹಣವನ್ನು ಬಿಡುಗಡೆ ಮಾಡುತ್ತಿದೆ ಎಂದರು.

ದೇಶಾದ್ಯಂತ ಎಲ್ಲ ಕಡೆಗಳಲ್ಲಿ ಲೆವೆಲ್ ಕ್ರಾಸಿಂಗ್ ಕಾಮಗಾರಿಗಳನ್ನು ಕೇಂದ್ರ ಸರ್ಕಾರವೇ ಮಾಡುತ್ತಿದೆ ಎಂದು ಅವರು ಹೇಳಿದರು.

ಏಪ್ರಿಲ್ 30 ರೊಳಗೆ ಸುಮಾರು 700 ಕೋಟಿ ರು. ವೆಚ್ಚದಲ್ಲಿ ತುಮಕೂರು ಹಾಗೂ ಹಾಸನ ಜಿಲ್ಲೆಯ ಲೆವೆಲ್ ಕ್ರಾಸಿಂಗ್ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಈ ಕಾಮಗಾರಿಗಳನ್ನು ಮುಂಬರುವ 2027ರೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ಹೇಳಿದರು.

ನಾನು ಕೇಂದ್ರ ಸಚಿವನಾದ 9 ತಿಂಗಳಲ್ಲಿ ಜಿಲ್ಲೆಯ ಬಹುತೇಕ ರೈಲ್ವೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿಸಿದ್ದೇನೆ. ಕೇವಲ ಕರ್ನಾಟಕವಲ್ಲದೆ ದೇಶದ ಇತರೆ ರಾಜ್ಯಗಳ ರೈಲ್ವೆ ಕಾಮಗಾರಿಗಳಿಗೂ ಪ್ರಧಾನಿ ನರೇಂದ್ರ ಮೋದಿಯವರು ಅನುದಾನ ನೀಡಿದ್ದಾರೆ ಎಂದರು.

ರೈಲ್ವೆ ಇಲಾಖೆ ರಕ್ಷಣಾ ಇಲಾಖೆಯ ಮತ್ತೊಂದು ಮುಖವಾಗಿ ಕೆಲಸ ಮಾಡುತ್ತಿದೆ. ಹಾಗಾಗಿ ಶನಿವಾರ ಶಿಲಾನ್ಯಾಸ ನೆರವೇರಿಸಿರುವ ಪಾದಚಾರಿ ಸುರಂಗ ಮಾರ್ಗ ಹಾಗೂ ಭೀಮಸಂದ್ರದ ಬಳಿ ರೈಲ್ವೆ ಕೆಳ ಸೇತುವೆ ಕಾಮಗಾರಿಗಳನ್ನು ಮುಂದಿನ 7 ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಶಾಸಕರಾದ ಜ್ಯೋತಿಗಣೇಶ್, ಸುರೇಶ್‌ಗೌಡ, ಮಾಜಿ ಸಂಸದ ಜಿ.ಎಸ್. ಬಸವರಾಜು, ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ, ರೈಲ್ವೆ ಇಲಾಖೆಯ ಬೆಂಗಳೂರು ವಿಭಾಗೀಯ ವ್ಯವಸ್ಥಾಪಕ ಅಮಿತೇಶ್‌ಕುಮಾರ್ ಸಿನ್ಹಾ, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್ಪೂರಿಯಾ, ಕೃಷ್ಣಚೈತನ್ಯ, ಮಂಜುನಾಥ ಕನಮಡಿ, ರಾಜೀವ್ ಶರ್ಮಾ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ವೈ.ಎಚ್. ಹುಚ್ಚಯ್ಯ, ಪಾಲಿಕೆ ಮಾಜಿ ಸದಸ್ಯ ಮಲ್ಲಿಕಾರ್ಜುನಯ್ಯ, ವೇದಮೂರ್ತಿ, ರುದ್ರೇಶ್, ಹನುಮಂತರಾಜು ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ