ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾ ಮಂಡಳಿ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.21 ರಿಂದ ಜೂ.4 ರವರೆಗೆ ಜಿಲ್ಲಾದ್ಯಂತ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಮತ್ತು ಚರ್ಮ ಗಂಟು ರೋಗದ ಲಸಿಕಾ ಅಭಿಯಾನ ಕೈಗೊಂಡಿದ್ದು, ರೈತರು ತಮ್ಮ ಜಾನುವಾರುಗಳಿಗೆ ರೋಗ ಬರದಂತೆ ತಡೆಯಲು ತಪ್ಪದೇ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹೇಳಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ 7ನೇ ಸುತ್ತಿನ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಾಲುಬಾಯಿ ಜ್ವರ ವೈರಾಣುವಿನಿಂದ ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದೆ. ಇದು ಸಾಂಕ್ರಾಮಿಕ ರೋಗವಾಗಿದ್ದು, ಅತಿ ಬೇಗನೆ ಒಂದು ರಾಸುವಿನಿಂದ ಇನ್ನೊಂದಕ್ಕೆ ನೇರ ಸಂಪರ್ಕ ಹಾಗೂ ಗಾಳಿ ಮೂಲಕ ಹರಡುತ್ತದೆ. ಚರ್ಮಗಂಟು ರೋಗ ವೈರಾಣುವಿನಿಂದ ಬರುವಂತಹದ್ದು. ಹಾಗಾಗಿ ಈ ರೋಗಗಳನ್ನು ನಿಯಂತ್ರಿಸಲು ಜಾನುವಾರುಗಳಿಗೆ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಬೇಕು ಎಂದರು.
ಲಸಿಕೆ ಹಾಕುವವರು ನಿಮ್ಮ ಗ್ರಾಮಕ್ಕೆ, ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗ ಬರದಂತೆ ರಕ್ಷಿಸಿಕೊಳ್ಳಬಹುದು. ಜಾನುವಾರಗಳಿಗೆ ಆರೋಗ್ಯದ ಸಮಸ್ಯೆ ಕಂಡುಬಂದಲ್ಲಿ ಪಶು ಸಹಾಯವಾಣಿಗೆ ಕರೆಮಾಡಿ, ತಮ್ಮ ವಿಳಾಸ, ಜಾನುವಾರು ಆರೋಗ್ಯ ಸಮಸ್ಯೆ, ಮೊಬೈಲ್ ಸಂಖ್ಯೆ ಇತ್ಯಾದಿ ವಿವರ ನೀಡಿ, ನೋಂದಾಯಿಸಿದ ನಂತರ ಹತ್ತಿರದ ಸಂಚಾರ ತುರ್ತು ಪಶು ಚಿಕಿತ್ಸಾಲಯದ ಆ್ಯಂಬುಲೆನ್ಸ್ ಸೇವೆ ಪಡೆಯಬಹುದು ಎಂದರು.ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಜಗದೀಶ್ ಕುಮಾರ್, ತಾಲೂಕು ಪಶು ವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.