ಹೊಸಪೇಟೆ: ದೇಶವನ್ನು ಸಂಪೂರ್ಣ ಪೋಲಿಯೋ ಮುಕ್ತವನ್ನಾಗಿಸಲು ಸಾರ್ವಜನಿಕರು ಐದು ವರ್ಷದೊಳಗಿನ ಮಕ್ಕಳಿಗೆ ಹತ್ತಿರದ ಪೋಲಿಯೋ ಲಸಿಕೆ ಬೂತ್ಗಳಿಗೆ ತೆರಳಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಲ್.ಆರ್. ಶಂಕರ್ ನಾಯ್ಕ ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗದರ್ಶನದಲ್ಲಿ ಸಂಪೂರ್ಣ ಭಾರತ ಪೋಲಿಯೋ ಮುಕ್ತವಾಗುವಲ್ಲಿ ಯಶಸ್ವಿಯಾಗಿದೆ. ಆದರೆ ನೆರೆಯ ದೇಶ ಪಾಕಿಸ್ತಾನದಲ್ಲಿ 30 ಹಾಗೂ ಅಪ್ಘಾನಿಸ್ತಾನದಲ್ಲಿ 9 ಪ್ರಕರಣ ಕಂಡು ಬಂದಿರುವ ಹಿನ್ನೆಲೆ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೇ ಪೋಲಿಯೋ ಲಸಿಕೆ ಹಾಕಿಸುವಲ್ಲಿ ವಿವಿಧ ಇಲಾಖೆಗಳ ಸಮನ್ವಯತೆಯೊಂದಿಗೆ ಈ ಬಾರಿ ಡಿ. 21ರಿಂದ 24ರ ವರಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಹೆಚ್ಚಿನ ಕಾಳಜಿ ವಹಿಸಿ ಕಡ್ಡಾಯವಾಗಿ ಲಸಿಕೆ ಹಾಕಿಸಲು ಉತ್ತೇಜನ ನೀಡಬೇಕಿದೆ. ಈ ಹಿಂದೆ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ್ದರೂ ಈ ಬಾರಿಯೂ ತಪ್ಪದೇ ಇನ್ನೊಂದು ಬಾರಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಜಿಲ್ಲೆಯಲ್ಲಿ ಐದು ವರ್ಷದೊಳಗಿನ 1,31,363 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು 1087 ತಂಡಗಳು, 2174 ಲಸಿಕೆದಾರರು, 1036 ಬೂತ್ಗಳು, 175 ಮೇಲ್ವಿಚಾರಕು, 45 ಟ್ರಾನ್ಸಿಟ್, 628 ಎಚ್ಆರ್ಎ ಸೈಟ್ಗಳು, 6 ಮೊಬೈಲ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದರು.
ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಿಂದ ಆರಂಭಗೊಂಡ ಪೋಲಿಯೋ ಜಾಗೃತಿ ಜಾಥಾ ಪ್ರಮುಖ ವೃತ್ತಗಳಾದ ಗಾಂಧಿ ಚೌಕ್, ಪುಣ್ಯಮೂರ್ತಿ ವೃತ್ತ, ಬಸ್ ನಿಲ್ದಾಣ ಮಾರ್ಗವಾಗಿ, ಡಾ. ಪುನೀತ್ ರಾಜಕುಮಾರ್ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ರಾಮಾ ಟಾಕೀಸ್ ಮುಂಭಾಗದಿಂದ ದೊಡ್ಡ ಮಸೀದಿ ಮಾರ್ಗವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದ ವರೆಗೆ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಆಶಾ ಕಾರ್ಯಕರ್ತೆಯರು ಪೋಲಿಯೋ ಸಂಬಂಧಿತ ವಿವಿಧ ಘೋಷಣೆ ಕೂಗುತ್ತ ಜನ ಜಾಗೃತಿ ಮೂಡಿಸಿದರು.ಈ ವೇಳೆ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಬಿ. ಜಂಬಯ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಕೆ. ರಾಧಿಕಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ, ತಾಲೂಕು ವೈದ್ಯಾಧಿಕಾರಿ ಡಾ. ವಿನೋದ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ಸಿಂಧು ಅಂಗಡಿ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ರಘುನಾಥ ದೀಪಾಲಿ, ಮಕ್ಕಳ ತಜ್ಞೆ ಡಾ. ಲಲಿತಾ ಜೈನ್ ಸೇರಿ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.