ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಸಮನ್ವಯ ಸಮಿತಿ ಸಭೆ ನಡೆಯಿತು. ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪಾಲ್ಗೊಂಡರು.
ಕನ್ನಡಪ್ರಭ ವಾರ್ತೆ ಮಣಿಪಾಲ
ಜಿಲ್ಲೆಯಲ್ಲಿ ಮಕ್ಕಳಿಗೆ ವಿವಿಧ ಲಸಿಕೆಗಳನ್ನು ಹಾಕುವ ಕಾರ್ಯಕ್ರಮಗಳಲ್ಲಿ, 5 ವರ್ಷದೊಳಗಿನ ಶೇ.87.24 ರಷ್ಟು, 10 ವರ್ಷದೊಳಗಿನ ಶೇ. 62.16 ಹಾಗೂ 16 ವರ್ಷದೊಳಗಿನ ಶೇ. 55.43 ರಷ್ಟು ಮಕ್ಕಳಿಗೆ ಮಾತ್ರ ಲಸಿಕೆ ನೀಡಲಾಗಿದ್ದು, ಈ ಪ್ರಮಾಣ ಕಡಿಮೆ ಇದೆ. ಇದನ್ನು ಶೇ ನೂರರಷ್ಟು ಸಾಧನೆ ಆಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.
ಅವರು ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತಾಯಿ ಮಕ್ಕಳ ಮರಣ ತನಿಖಾ ಸಮಿತಿ ಸಭೆ, ಜಿಲ್ಲಾ ಲಸಿಕಾ ಕಾರ್ಯಪಡೆ ಸಮಿತಿ ಸಭೆ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನವಜಾತ ಶಿಶುಗಳಿಗೆ ಕಾಲಕಾಲಕ್ಕೆ ನೀಡುವ ಸಾರ್ವತ್ರಿಕ ಲಸಿಕೆಗಳನ್ನು ಹಾಕಿಸಲು ತಾಯಂದಿರುಗಳಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಿ, ತಪ್ಪದೇ ಮಕ್ಕಳಿಗೆ ಸಂಪೂರ್ಣ ಲಸಿಕೆ ಪಡೆಯುವಂತೆ ನೋಡಿಕೊಳ್ಳಬೇಕು ಎಂದ ಅವರು, ತಾಯಿ ಮತ್ತು ಮಕ್ಕಳ ಮರಣ ತಡೆಗಟ್ಟಲು ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.
ಡಿ.9ರಂದು ಜಂತುಹುಳು ನಿವಾರಣಾ ದಿನಾಚರಣೆ ಮತ್ತು 16ರಂದು ಮಾಫ್ ಅಫ್ ಡೇ ನಡೆಯಲಿದೆ. ಜಿಲ್ಲೆಯ ಎಲ್ಲಾ 1 ರಿಂದ 19 ವರ್ಷದ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಯನ್ನು ಅಂಗನವಾಡಿ, ಶಾಲೆ, ಕಾಲೇಜು ಹಾಗೂ ಕೈಗಾರಿಕಾ ತರಬೇತಿ ಹಾಗೂ ವೃತ್ತಿ ತರಬೇತಿ ಸಂಸ್ಥೆಗಳಲ್ಲಿ ನೀಡಲು ಸಂಬಂಧಿಸಿದ ಎಲ್ಲಾ ಇಲಾಖೆಗಳು ಕ್ರಮ ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ, ಜಿಲ್ಲಾ ಆರ್.ಸಿ. ಎಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀರಾಮರಾವ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಡಿ.ಎಸ್.ಓ ಡಾ. ನಾಗರತ್ನ, ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.