ವೈಕುಂಠ ಏಕಾದಶಿ- ದೇವಸ್ಥಾನಗಳಲ್ಲಿ ಭಕ್ತರ ದಂಡು

KannadaprabhaNewsNetwork |  
Published : Jan 01, 2026, 03:00 AM IST
10 | Kannada Prabha

ಸಾರಾಂಶ

ವಿಷ್ಣು ತನ್ನ ಅವತಾರ ಸಮಾಪ್ತಿಗೊಳಿಸಿ ವೈಕುಂಠಕ್ಕೆ ಹೋಗುವ ದಿನವನ್ನು ವೈಕುಂಠ ಏಕಾದಶಿಯಾಗಿ ಆಚರಿಸಲಾಗುತ್ತದೆ.

- ಮುಂಜಾನೆಯಿಂದಲೇ ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆದ ಭಕ್ತರುಫೋಟೋ- 30ಎಂವೈಎಸ್7

ಮೈಸೂರಿನ ಡಾ. ರಾಜ್ ಕುಮಾರ್ ರಸ್ತೆಯಲ್ಲಿರುವ ಶ್ರೀ ಕಲ್ಯಾಣ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ವೆಂಕಟರಮಣ ಸ್ವಾಮಿ.30ಎಂವೈಎಸ್8

ಮೈಸೂರಿನ ಒಂಟಿಕೊಪ್ಪಲು ಲಕ್ಷ್ಮೀವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ನೆರೆದಿದ್ದ ಭಕ್ತಾದಿಗಳು30ಎಂವೈಎಸ್9, 10

ಮೈಸೂರಿನ ವಿಜಯನಗರ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರೆರಿವುದ ಭಕ್ತಾದಿಗಳು. ಚಿತ್ರಗಳು- ಅನುರಾಗ್ ಬಸವರಾಜ್30ಎಂವೈಎಸ್11

ಮೈಸೂರಿನ ಜಯನಗರ ಇಸ್ಕಾನ್ ದೇವಸ್ಥಾನದಲ್ಲಿ ನಿರ್ಮಿಸಲಾಗಿರುವ ವೈಕುಂಠ ದ್ವಾರ.

----ಕನ್ನಡಪ್ರಭ ವಾರ್ತೆ ಮೈಸೂರು

ವೈಕುಂಠ ಏಕಾದಶಿ ಅಂಗವಾಗಿ ನಗರದ ವಿವಿಧ ದೇವಸ್ಥಾನಗಳಲ್ಲಿ ಮಂಗಳವಾರ ವಿಶೇಷ ಪೂಜಾ ಕೈಂಕರ್ಯಗಳು ಜರುಗಿತು. ಭಕ್ತರು ದಂಡು ದೇವಸ್ಥಾನಕ್ಕೆ ತೆರಳಿ ವೈಕುಂಠ ದ್ವಾರ ಪ್ರವೇಶಿಸುವ ಮೂಲಕ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ವಿಷ್ಣು ತನ್ನ ಅವತಾರ ಸಮಾಪ್ತಿಗೊಳಿಸಿ ವೈಕುಂಠಕ್ಕೆ ಹೋಗುವ ದಿನವನ್ನು ವೈಕುಂಠ ಏಕಾದಶಿಯಾಗಿ ಆಚರಿಸಲಾಗುತ್ತದೆ. ವೈಕುಂಠ ಏಕಾದಶಿಯಂದು ನಾರಾಯಣನ ದರ್ಶನ ಪಡೆದು, ವೈಕುಂಠ ದ್ವಾರದ ಮೂಲಕ ಹೊರಬಂದರೆ ಸ್ವರ್ಗ ಪ್ರಾಪ್ತಿಯಾಗಲಿದೆ ಎಂಬ ನಂಬಿಕೆ ಆಸ್ತಿಕರದು.

ನಗರದ ಒಂಟಿಕೊಪ್ಪಲಿನ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನ, ಜಯನಗರದ ಇಸ್ಕಾನ್ ದೇವಸ್ಥಾನ, ಮೈಸೂರು-ನಂಜನಗೂಡು ರಸ್ತೆಯ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ, ವಿಜಯನಗರದ ಯೋಗಾನರಸಿಂಹ ಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳನ್ನು ಹೂಗಳಿಂದ ಸ್ವರ್ಗದ ಬಾಗಿಲು ನಿರ್ಮಿಸಲಾಗಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿದ ಭಕ್ತರು ಸ್ವರ್ಗದ ಬಾಗಿಲ ಮೂಲಕ ದೇವರ ದರ್ಶನ ಪಡೆದರು.

ಒಂಟಿಕೊಪ್ಪಲಿನ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮ ನಡೆದವು. ದೇವರಿಗೆ ವಿಶೇಷ ಅಲಂಕಾರ ಮಾಡಿ ಭಕ್ತರಿಗೆ ಮುಂಜಾನೆ 5.30 ರಿಂದಲೇ ಪ್ರವೇಶಾವಕಾಶ ಕಲ್ಪಿಸಲಾಯಿತು. ಭಕ್ತರು ಭಾರಿ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.

ವಿಜಯನಗರದ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆ ವೈಕುಂಠ ದ್ವಾರ ಪ್ರವೇಶ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ವಿಶೇಷ ಅಲಂಕಾರದೊಂದಿಗೆ ಯೋಗಾನರಸಿಂಹಸ್ವಾಮಿ ಕಂಗೊಳಿಸಿತು. ದೇವಸ್ಥಾನ ಸಂಸ್ಥಾಪಕ ಡಾ. ಭಾಷ್ಯಂಸ್ವಾಮಿ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ಭಕ್ತರು ದೇವರ ದರ್ಶನ ಬಳಿಕ ಪ್ರಸಾದ ವಿತರಿಸಲಾಯಿತು.

ಜಯನಗರದ ಇಸ್ಕಾನ್ ದೇವಸ್ಥಾನದಲ್ಲಿ ನಿರ್ಮಿಸಿದ್ದ ವಿಶಿಷ್ಟವಾದ ವೈಕುಂಠ ದ್ವಾರವನ್ನು ಮುಂಜಾನೆಯೇ ತೆರೆಯಲಾಯಿತು. ಬಳಿಕ ವಿಶೇಷ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಿಕೊಡಲಾಯಿತು. ದೇವಸ್ಥಾನದಲ್ಲಿ ನಿರ್ಮಿಸಿದ್ದ ವಿಶಿಷ್ಟ ವೈಕುಂಠ ದ್ವಾರದ ಮೂಲಕ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿತ್ತು. ಸಾವಿರಾರು ಸಂಖ್ಯೆಯ ಭಕ್ತರು ದೇವರ ದರ್ಶನ ಪಡೆದರು.

ಬೆಳಗ್ಗೆ 6.30ಕ್ಕೆ ವೈಕುಂಠ ದ್ವಾರ ಪೂಜೆ ಮಾಡಲಾಯಿತು. ಶೃಂಗಾರ ಆರತಿ ಬಳಿಕ ಕೃಷ್ಣ- ಬಲರಾಮರ ಪಲ್ಲಕ್ಕಿ ಉತ್ಸವ ನಡೆಯಿತು. ಭಕ್ತರಿಗೆ ಬೆಳಗ್ಗೆ 7 ರಿಂದ ರಾತ್ರಿ 10 ಗಂಟೆವರೆಗೆ ವೈಕುಂಠ ದ್ವಾರ ಪ್ರವೇಶಕ್ಕೆ ಅವಕಾಶ ನೀಡಲಾಯಿತು. ಭಕ್ತರು ಸಾಲಾಗಿ ನಿಂತು ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆದರು. ಇಸ್ಕಾನ್ ನಲ್ಲಿ ವಿವಿಧ ಕಲಾವಿದರು ಸಂಗೀತ ಕಾರ್ಯಕ್ರಮ ನೀಡಿದರು. ಒಂದು ಲಕ್ಷ ಕೃಷ್ಣಶ್ಲೋಕ ಪಠಣ ನಡೆಯಿತು.

ಡಾ. ರಾಜ್ ಕುಮಾರ್ ರಸ್ತೆಯಲ್ಲಿರುವ ಶ್ರೀ ಕಲ್ಯಾಣ ಲಕ್ಷ್ಮೀವೆಂಕಟರಮಣ ದೇವಸ್ಥಾನ ಸೇರಿದಂತೆ ನಗರದ ವಿವಿಧ ಭಾಗಗಳ ವೆಂಕಟೇಶ್ವರಸ್ವಾಮಿ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿ ಆಚರಿಸಲಾಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ದೇವಸ್ಥಾನಗಳಲ್ಲಿ ಪೊಲೀಸರು ಭದ್ರತೆ ಕೈಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ