ವಲ್ಲಭಭಾಯಿ ಪಟೇಲ್‌ ದೇಶದ ಏಕೀಕರಣದ ರೂವಾರಿ: ಎಸ್.ವಿ. ಸಂಕನೂರ

KannadaprabhaNewsNetwork |  
Published : Nov 23, 2025, 02:45 AM IST
ಕಾರ್ಯಕ್ರಮವನ್ನ ವಿಪ ಸದಸ್ಯ ಎಸ್‌.ವಿ.ಸಂಕನೂರ ಉದ್ಘಾಟಿಸಿದರು. | Kannada Prabha

ಸಾರಾಂಶ

ಸರ್ದಾರ ವಲ್ಲಭಭಾಯಿ ಪಟೇಲ್ ಅವರು 1947ರ ಸ್ವಾತಂತ್ರ್ಯ ನಂತರ ದೇಶದಲ್ಲಿ ಹರಿದು ಹಂಚಿ ಹೋಗಿದ್ದ 500ಕ್ಕೂ ಹೆಚ್ಚು ಸಂಸ್ಥಾನಗಳನ್ನು ಒಂದೇ ಒಕ್ಕೂಟದ ವ್ಯವಸ್ಥೆಗೆ ತರಲು ಶ್ರಮಿಸಿದರು. ಅವರ ನಿರಂತರ ಶ್ರಮದ ಫಲವಾಗಿ ದೇಶವು ಒಕ್ಕೂಟ ವ್ಯವಸ್ಥೆಯಡಿ ಬರಲು ಸಾಧ್ಯವಾಯಿತು ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ತಿಳಿಸಿದರು.

ಗದಗ: ನಮ್ಮ ದೇಶದ ಐಕ್ಯತೆ ಹಾಗೂ ಏಕೀಕರಣಕ್ಕೆ ಹೋರಾಟ ಮಾಡಿದವರು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರು ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ತಿಳಿಸಿದರು.

ನಗರದ ವಿಠಲಾರೂಢ ಕಲ್ಯಾಣಮಂಟಪದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಪಂ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕೋಶದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಏಕತಾ ಪಾದಯಾತ್ರಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

1947ರ ಸ್ವಾತಂತ್ರ್ಯ ನಂತರ ದೇಶದಲ್ಲಿ ಹರಿದು ಹಂಚಿ ಹೋಗಿದ್ದ 500ಕ್ಕೂ ಹೆಚ್ಚು ಸಂಸ್ಥಾನಗಳನ್ನು ಒಂದೇ ಒಕ್ಕೂಟದ ವ್ಯವಸ್ಥೆಗೆ ತರಲು ಶ್ರಮಿಸಿದರು. ಅವರ ನಿರಂತರ ಶ್ರಮದ ಫಲವಾಗಿ ದೇಶವು ಒಕ್ಕೂಟ ವ್ಯವಸ್ಥೆಯಡಿ ಬರಲು ಸಾಧ್ಯವಾಯಿತು ಎಂದರು.

ದೇಶಾದ್ಯಂತ 3,000ಕ್ಕೂ ಹೆಚ್ಚು ಜಾತಿಗಳು, 25 ಸಾವಿರಕ್ಕೂ ಹೆಚ್ಚು ಉಪಜಾತಿಗಳಿದ್ದರೂ ಎಲ್ಲರಲ್ಲಿಯೂ ಒಗ್ಗಟ್ಟಿನ ಮನೋಭಾವ ಬೆಳೆಸಬೇಕು, ಅದಕ್ಕೆ ಉತ್ತೇಜನ ಕೊಡಬೇಕು ಎಂಬ ನಿಟ್ಟಿನಲ್ಲಿ ಶ್ರಮಿಸಿದ ವಲ್ಲಭಭಾಯಿ ಪಟೇಲ್‌ ಅವರಿಗೆ ಮಹಾತ್ಮ ಗಾಂಧೀಜಿ ಅವರು ಸರ್ದಾರ್ ಎಂದು ಬಿರುದನ್ನು ನೀಡಿದರು ಎಂದರು.

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಸರ್ದಾರ್ ವಲ್ಲಭಭಾಯಿ ಪಟೇಲರು ಇಂಗ್ಲೆಂಡ್ ಹೋಗಿ ಕಾನೂನು ಪದವಿ ಪಡೆದು, ಐಷಾರಾಮಿ ಜೀವನ ನಡೆಸಬಹುದಿತ್ತು. ಆದರೆ, ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಟಕ್ಕೆ ಧುಮುಕಿದರು. ರೈತರ ಹೋರಾಟದ ನೇತೃತ್ವ ವಹಿಸಿ ಯಶಸ್ಸು ಕಂಡ ವಲ್ಲಭಭಾಯಿ ಪಟೇಲ ಅವರು ಉಕ್ಕಿನ ಮನುಷ್ಯ ಎಂದೇ ಪ್ರಸಿದ್ಧಿ ಹೊಂದಿದರು ಎಂದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು, ಏಕತಾ ನಡಿಗೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಮೈ ಭಾರತ ಕೇಂದ್ರದ ಉಪನಿರ್ದೇಶಕ ಲೋಕೇಶಕುಮಾರ, ರಾಷ್ಟ್ರೀಯ ಸೇವಾ ಯೋಜನೆಯ ನೋಡಲ್ ಅಧಿಕಾರಿಗಳಾದ ವಿ.ಎಚ್. ಕೊಳ್ಳಿ, ಶ್ರೀನಿವಾಸ ಬಡಿಗೇರ, ರಾಜು ಕುರಡಗಿ, ಅಭಿಯಾನದ ಜಿಲ್ಲಾ ಸಂಚಾಲಕ ಆರ್.ಕೆ. ಚವ್ಹಾಣ, ಸಂತೋಷ ಅಕ್ಕಿ, ಲಿಂಗರಾಜ ಪಾಟೀಲ, ಫಕೀರೇಶ ರಟ್ಟಿಹಳ್ಳಿ, ರಮೇಶ ಸಜ್ಜಗಾರ, ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ, ವಿಜಯಲಕ್ಷ್ಮೀ ಮಾನ್ವಿ, ಸ್ವಾತಿ ಅಕ್ಕಿ ಸೇರಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.

ವಿವಿಧೆಡೆ ಸಂಚರಿಸಿದ ಏಕತಾ ನಡಿಗೆ

ನಗರದ ಮುಳಗುಂದ ನಾಕಾ ಬಳಿಯ ವಿಠಲಾರೂಢ ಕಲ್ಯಾಣಮಂಟಪದಿಂದ ಆರಂಭವಾದ ಜಿಲ್ಲಾ ಮಟ್ಟದ ಏಕತಾ ನಡಿಗೆಯು ಮುಳಗುಂದ ನಾಕಾ, ಜೋಡ ಮಾರುತಿ ದೇವಸ್ಥಾನ, ಹತ್ತಿಕಾಳ ಕೂಟ, ಬಸವೇಶ್ವರ ವೃತ್ತ, ಮಹೇಂದ್ರಕರ್ ವೃತ್ತ ಮಾರ್ಗವಾಗಿ ಮಹಾತ್ಮ ಗಾಂಧಿ ವೃತ್ತದಲ್ಲಿ ಸಮಾರೋಪಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮರಳು ಮಾಫಿಯಾದಿಂದ ಶಾಸಕಿ ಕರೆಮ್ಮಗೆ ಬೆದರಿಕೆ
ಉಡುಪಿಯ ಕೃಷ್ಣಮಠದಲ್ಲಿ ಇನ್ನು ಭಕ್ತರಿಗೆ ಕಟ್ಟುನಿಟ್ಟಿನ ನಿಯಮ ಜಾರಿ