ರಾಜ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ವಾಲ್ಮೀಕಿ ಜನಾಂಗ ಇದೆ. ಸರ್ಕಾರ ಈ ಸಮುದಾಯಕ್ಕೆ ಸರಿಯಾದ ಸ್ಥಾನಮಾನ ನೀಡಬೇಕಾಗಿದೆ. ಅಲ್ಲದೆ ಪರಿಶಿಷ್ಟ ಪಂಗಡದ ಮಕ್ಕಳಿಗೆ ಸರ್ಕಾರ ಶಿಕ್ಷಣ ಸೇರಿದಂತೆ ವಿವಿಧ ರಂಗಗಳಲ್ಲಿ ಆದ್ಯತೆ ನೀಡಬೇಕಾಗಿದೆ ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಹೇಳಿದರು.
ಗಂಗಾವತಿ: ವಾಲ್ಮೀಕಿ ಜನಾಂಗವು ಶಿಕ್ಷಣದಲ್ಲಿ ಮುಂದೆ ಬಂದು ಆರ್ಥಿಕವಾಗಿ ಪ್ರಬಲರಾಗಬೇಕೆಂದು ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಹೇಳಿದರು.
ನಗರದ ವಾಲ್ಮೀಕಿ ವೃತ್ತದಲ್ಲಿ ತಾಲೂಕು ಆಡಳಿತ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ವಾಲ್ಮೀಕಿ ಜನಾಂಗ ಇದೆ. ಸರ್ಕಾರ ಈ ಸಮುದಾಯಕ್ಕೆ ಸರಿಯಾದ ಸ್ಥಾನಮಾನ ನೀಡಬೇಕಾಗಿದೆ. ಅಲ್ಲದೆ ಪರಿಶಿಷ್ಟ ಪಂಗಡದ ಮಕ್ಕಳಿಗೆ ಸರ್ಕಾರ ಶಿಕ್ಷಣ ಸೇರಿದಂತೆ ವಿವಿಧ ರಂಗಗಳಲ್ಲಿ ಆದ್ಯತೆ ನೀಡಬೇಕಾಗಿದೆ. ಪ್ರಸ್ತುತ ಸರ್ಕಾರದಲ್ಲಿ 17ಕ್ಕೂ ಹೆಚ್ಚು ಶಾಸಕರು ಪರಿಶಿಷ್ಟ ಪಂಗಡವರಿದ್ದಾರೆ. ಅವರು ಸಮುದಾಯದ ಪರವಾಗಿ ಧ್ವನಿ ಎತ್ತಬೇಕು ಎಂದರು.
ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಮಾತನಾಡಿ, ವಾಲ್ಮೀಕಿ ಜನಾಂಗದಲ್ಲಿ ಬಹಳಷ್ಟು ಜನರು ಬಡತನ ರೇಖೆಗಿಂತ ಕಡಿಮೆ ಇದ್ದಾರೆ. ಶ್ರಮಜೀವಿಗಳಾಗಿರುವ ಈ ಸಮುದಾಯಕ್ಕೆ ಸರ್ಕಾರ ಹಲವಾರು ಯೋಜನೆಗಳನ್ನು ಕಲ್ಪಿಸಬೇಕು ಎಂದರು.
ತಹಸೀಲ್ದಾರ್ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.
ವಾಲ್ಮೀಕಿ ಜನಾಂಗದ ಮುಖಂಡ ಜೋಗದ ನಾರಾಯಣಪ್ಪ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದರು.
ಮಾಜಿ ಸಂಸದ ಶಿವರಾಮಗೌಡ, ಮುಖಂಡರಾದ ನೆಕ್ಕಂಟಿ ಸೂರಿಬಾಬು, ರಾಜವಂಶಸ್ಥೆ ಲಲಿತರಾಣಿ ಶ್ರೀರಂಗದೇವರಾಯಲು, ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ನಗರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ನಗರಸಭೆ ಮಾಜಿ ಅಧ್ಯಕ್ಷ ಜೋಗದ ಹನುಮಂತಪ್ಪನಾಯಕ, ಮಾಜಿ ಸದಸ್ಯ ವೀರಭದ್ರಪ್ಪನಾಯಕ, ನಿವೃತ್ತ ಸಹಾಯಕ ಆಯುಕ್ತ ನಾಗಪ್ಪ, ಹೊಸಮಲಿ ಮಲ್ಲೇಶಪ್ಪ, ಪರಿಶಿಷ್ಟ ಪಂಗಡ ಇಲಾಖೆಯ ಕಲ್ಯಾಣಾಧಿಕಾರಿ ಗ್ಯಾನನಗೌಡ, ಸೈಯದ್ ಅಲಿ, ರಮೇಶ ಚೌಡ್ಕಿ, ಎ.ಜೆ. ರಂಗನಾಥ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.