ಕನ್ನಡಪ್ರಭ ವಾರ್ತೆ ಬೆಂಗಳೂರು
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಹೈದರಾಬಾದ್ನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ 18 ಫೇಕ್ ಅಕೌಂಟ್ ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.ಹೈದರಾಬಾದ್ ಮೂಲದ ಸತ್ಯನಾರಾಯಣ ವರ್ಮಾ ಎಂಬಾತನನ್ನು ಎಸ್ಐಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ. ಈತನ ಬಳಿ ಮೂರು ಸೂಟ್ ಕೇಸ್ ತುಂಬಿದ್ದ ಭಾರೀ ಪ್ರಮಾಣದ ಹಣ ಪತ್ತೆಯಾಗಿದೆ. ಈ ಸತ್ಯನಾರಾಯಣ ವರ್ಮಾನನ್ನು ಎಸ್ಐಟಿ ಅಧಿಕಾರಿಗಳು ಬುಧವಾರ ಬೆಂಗಳೂರಿಗೆ ಕರೆತಂದು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದ ಎಂ.ಜಿ.ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರು. ಅಕ್ರಮವಾಗಿ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು.ಈ ಅಕ್ರಮ ಹಣ ವರ್ಗಾವಣೆ ಸಂಬಂಧ ಈಗಾಗಲೇ ತನಿಖೆಗೆ ಇಳಿದಿರುವ ಎಸ್ಐಟಿ, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ.ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆಯಿಂದ ಬೆಳಕಿಗೆ ಬಂದಿದ್ದ ಹಗರಣದಲ್ಲಿ, ನಿಗಮದ 94.7 ಕೋಟಿ ರು.ಗಳನ್ನು 18 ನಕಲಿ ಖಾತೆಗಳಿಗೆ ಅಧಿಕಾರಿಗಳು ವರ್ಗಾಯಿಸಿದ್ದ ಪ್ರಕರಣ ಎಸ್ಐಟಿ, ಸಿಬಿಐನಿಂದ ತನಿಖೆ ನಡೆದಿದ್ದು, ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ್ದರು. ಈಗ ಆಂಧ್ರದಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆಯಲು ಸಹಕರಿಸಿದ್ದ ಸತ್ಯನಾರಾಯಣರನ್ನು ವಶಕ್ಕೆ ಪಡೆಯಲಾಗಿದೆ.