-ಸರ್ಕಾರದ ನಡೆ ವಿರುದ್ಧ ಬಿಜೆಪಿ ಜನಾಂದೋಲನ । ಶಾಸಕ ಎಸ್.ಎನ್. ಚನ್ನಬಸಪ್ಪ ಮಾಹಿತಿ
ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ನಿರ್ಧಾರ ನ್ಯಾಯಾಲಯದಲ್ಲಿ ಪ್ರಶ್ನಿಸುವುದರ ಜತೆಗೆ ಸರ್ಕಾರದ ನಡೆಯ ವಿರುದ್ಧ ಬಿಜೆಪಿ ಜನಾಂದೋಲನ ರೂಪಿಸಲಿದೆ ಎಂದು ಶಾಸಕ ಎಸ್. ಎನ್ ಚನ್ನಬಸಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಹಾಗೂ ಸಂವಿಧಾನದ ಆಶಯಗಳನ್ನು ಸಂರಕ್ಷಿಸುವಲ್ಲಿ ನಡೆಯಬೇಕಾದ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲೇ ಕಾನೂನು ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧದ ನಡೆ ನಡೆದಿದೆ. ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದರು.ವಂದೇಮಾತರಂ ಗೀತೆಗೆ 150 ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಉಲ್ಲೇಖಿಸಿದ ಅವರು, ಈ ಸಂಬಂಧದ ಕಾನೂನು ಹಾಗೂ ನಿರ್ದೇಶನಗಳನ್ನು ಎಲ್ಲರೂ ಗೌರವಿಸಬೇಕು.
ಪ್ರಜಾಪ್ರಭುತ್ವ ಉಳಿಸಿ ಕಾರ್ಯಕ್ರಮದಲ್ಲಿ ನ್ಯಾಯಾಧೀಶರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದ ಸಂದರ್ಭದಲ್ಲೇ ವಂದೇಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲಾಗಿದೆ.
ಸಂವಿಧಾನದ ಅಡಿಯಲ್ಲಿ ನಡೆವ ಸರ್ಕಾರವೇ ಕಾನೂನಿನ ಪಾಲನೆಯಲ್ಲಿ ದ್ವಂದ್ವ ನೀತಿ ಅನುಸರಿಸಬಾರದು. ಸರ್ಕಾರದ ಪ್ರಸ್ತಾವನೆ, ಕ್ಯಾಬಿನೆಟ್ ನಿರ್ಧಾರ ಹಾಗೂ ಪಕ್ಷದ ರಾಜಕೀಯ ನಿಲುವುಗಳನ್ನು ಸರ್ಕಾರಿ ಕಾರ್ಯಕ್ರಮಗಳೊಂದಿಗೆ ಬೆರೆಸಬಾರದು. ಪ್ರಜಾಪ್ರಭುತ್ವ ಉಳಿಸುವ ಹೆಸರಿನಲ್ಲಿ ನಡೆವ ಕಾರ್ಯಕ್ರಮದಲ್ಲಿ ಯಾವುದೇ ಪಕ್ಷದ ನೀತಿ- ನಿಯಮಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದರು.
ಚಾಮುಂಡೇಶ್ವರಿ ಸೇರಿದಂತೆ ವಿವಿಧ ದೇವತೆಗಳ ಆರಾಧನೆ, ಸಾಂಸ್ಕೃತಿಕ ಆಚರಣೆಗಳಿಗೆ ಗೌರವ ನೀಡುವ ಸರ್ಕಾರಕ್ಕೆ ವಂದೇಮಾತರಂನಂತಹ ರಾಷ್ಟ್ರೀಯ ಭಾವನೆಯೊಂದಿಗೆ ಬೆಸೆದುಕೊಂಡಿರುವ ಗೀತೆಗೆ ಗೌರವ ಸಲ್ಲಿಸುವ ವಿಚಾರದಲ್ಲಿ ಹಿಂಜರಿಕೆ ಏಕೆ ಎಂದು ಪ್ರಶ್ನಿಸಿದ ಅವರು, ಪ್ರಜಾಪ್ರಭುತ್ವವನ್ನು ಉಳಿಸಿ, ಸಂವಿಧಾನವನ್ನು ಗೌರವಿಸಿ ಎಂದು ಹೇಳುವ ದಿನವೇ ಸಂವಿಧಾನದ ಆಶಯಗಳಿಗೆ ವಿರುದ್ಧವಾದ ನಡೆ ನಡೆಯಬಾರದು. ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಗುಡುಗಿದರು.
ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್ .ಕೆ. ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ದೀನ ದಯಾಳ್, ಮಂಜುನಾಥ್ ನವುಲೆ, ಸುರೇಖಾ ಮುರುಳಿಧರ್, ಯಶೋದಾ, ಪ್ರಭಾಕರ್, ಕುಮಾರ್, ಪರಮೇಶ್ವರ್ ನಾಯ್ಕ್, ಶ್ರೀನಾಗ್ ಇದ್ದರು.
ಶಿವಮೊಗ್ಗ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿದರು.