ಕನ್ನಡಪ್ರಭ ವಾರ್ತೆ ಪಾಂಡವಪುರ
ಹಬ್ಬವನ್ನು ಗ್ರಾಮೀಣ ಪ್ರದೇಶಗಳಿಗಿಂತಲೂ ನಗರ ಪ್ರದೇಶಗಳಲ್ಲಿ ಹೆಚ್ಚು ಸಡಗರ-ಸಂಭ್ರಮ ಹಾಗೂ ವಿಜೃಂಭಣೆಯಿಂದ ನಡೆಸುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದಿತ್ತು. ಆದರೆ, ಇತ್ತೀಚೆಗೆ ಗ್ರಾಮೀಣ ಪ್ರದೇಶಗಳಲ್ಲಿಯೂ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ಲಕ್ಷ್ಮಿ ಪೂಜೆಗಾಗಿ ಹೂವು, ಹಣ್ಣು, ತರಕಾರಿಗಳಿಗೆ ಭಾರೀ ಬೆಲೆ ತೆತ್ತು ಕೊಂಡು ಮಹಿಳೆಯರು ಹಾಗೂ ಹೆಂಗೆಳೆಯರು ಹೊಸ ಬಟ್ಟೆಗಳನ್ನು ಧರಿಸಿಕೊಂಡು ವರಮಹಾಲಕ್ಷ್ಮಿ ಪೂಜೆ ಮಾಡುವ ಹಬ್ಬವನ್ನು ಬಹಳ ಶ್ರದ್ಧಾಭಕ್ತಿಯಿಂದ ಆಚರಿಸಿದರು.ಲಕ್ಷ್ಮಿಯನ್ನು ಕುಟುಂಬದ ಅಭ್ಯುದಯ ಮತ್ತು ಪ್ರಗತಿಗಾಗಿ ಪೂಜಿಸಲಾಗುತ್ತದೆ. ಈ ನಂಬಿಕೆಯನ್ನು ಉಳಿಸಿಕೊಂಡು ಹೋಗುತ್ತಿರುವ ಮಹಿಳೆಯರು ಶುಕ್ರವಾರದಂದು ವರಮಹಾಲಕ್ಷ್ಮಿ ದೇವತೆಯನ್ನು ಬಗೆಬಗೆಯ ಹೂವುಗಳಿಂದ ಅಲಂಕರಿಸಿ ವಿಶೇಷ ಪೂಜೆ ನಡೆಸಿದರು.
ಕಲಶದಲ್ಲಿ ಅಕ್ಕಿ, ನೀರು, ನಾಣ್ಯ, ಪೂರ್ಣ ಲಿಂಬೆ, ಐದು ಪ್ರಕಾರದ ಎಲೆಗಳು, ಅಡಿಕೆಯನ್ನು ಇರಿಸುವುದು ವಾಡಿಕೆ. ಇನ್ನು ಕೆಲವರು ಅರಿಶಿನ, ಬಾಚಣಿಗೆ, ಕನ್ನಡಿ, ಸಣ್ಣ ಕಪ್ಪು ಬಳೆಗಳು ಹಾಗೂ ಕಪ್ಪು ಮಣಿಗಳು, ನಂತರ ಅರಿಶಿನದ ಮಿಶ್ರಣವನ್ನು ತೆಂಗಿನ ಕಾಯಿಗೆ ಹಚ್ಚಿ ಕಲಶದ ಬಾಯಿಗೆ ಇರಿಸಿ, ಎಲೆಯಿಂದ ಅಮೃತ್ತವಾದ ಕುಂಭದ ಬಾಯಿಗೆ ತೆಂಗಿನಕಾಯಿ ಇಟ್ಟು ಲಕ್ಷ್ಮಿ ದೇವಿ ಪೂಜೆ ಮಾಡಿದರು.