ಬಳ್ಳಾರಿ: ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಎರ್ರಿಸ್ವಾಮಿ ತೊಗಲುಗೊಂಬೆ ಕಲಾ ಮೇಳ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ವಿಶೇಷ ಘಟಕ ಯೋಜನೆಯಡಿ ಜಾನಪದ ಸಂಭ್ರಮ ಕಾರ್ಯಕ್ರಮ ಜರುಗಿತು.
ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್, ಶ್ರೀಧರಗಡ್ಡೆ ಗ್ರಾಮವು ಈ ಹಿಂದಿನಿಂದಲೂ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿದೆ ಎಂದು ಶ್ಲಾಘಿಸಿದರು.
ಗ್ರಾಮದ ಮುಖಂಡ ನಂದೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾನಪದ ಕಲಾವಿದ ದೊಡ್ಡಬಸಪ್ಪ ಯಾಟಿ, ಉದ್ಯಮಿ ಎಸ್.ಡಿ. ವೀರನಗೌಡ, ಬಸವೇಶ್ವರ ಯುವಕ ಸಂಘದ ಎ.ಜಂಬನಗೌಡ, ಬಸವೇಶ್ವರ ಟ್ರಸ್ಟ್ ಕಮಿಟಿಯ ಅಧ್ಯಕ್ಷ ನಾಗೇಂದ್ರಪ್ಪ, ಪಿ.ನಿರಂಜನ್, ಬಿ.ಬಸವರಾಜ್ ಭಾಗವಹಿಸಿದ್ದರು.ಎರ್ರಿಸ್ವಾಮಿ ತೊಗಲುಗೊಂಬೆ ಕಲಾ ಮೇಳ ಟ್ರಸ್ಟ್ನ ಅಧ್ಯಕ್ಷ ವೈ.ಪ್ರಭು ಪ್ರಾಸ್ತಾವಿಕ ಮಾತನಾಡಿದರು. ಜಡೇಶ್ ಎಮ್ಮಿಗನೂರು, ವೈ.ಉಮೇಶ್ ಹಾಗೂ ಟ್ರಸ್ಟ್ ನ ಕಾರ್ಯದರ್ಶಿ ಪಿ.ರೇಖಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಬಂಡಿಹಟ್ಟಿ ಕೀಬೋರ್ಡ್, ಯೋಗೀಶ್ ಸಂಗನಕಲ್ಲು ತಬಲಾ ಸಾಥ್ ನೀಡಿದರು. ಕೊನೆಯಲ್ಲಿ ಹುಲಿಗೆಮ್ಮ ತಂಡದಿಂದ ತೊಗಲುಗೊಂಬೆ ಪ್ರದರ್ಶನ, ಸಹನಾ, ತಂಡದಿಂದ ಸುಗಮ ಸಂಗೀತ, ಜಾನಪದ ನೃತ್ಯ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.