ತಾಲೂಕು ಪಂಚಾಯಿತಿ ಸಾಮಾರ್ಥ್ಯ ಸೌಧದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ
ಏಪ್ರಿಲ್ 13 ರಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಶೃಂಗೇರಿ ಕ್ಷೇತ್ರದ ವ್ಯಾಪ್ತಿಯ ₹150 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ರಾಜ್ಯ ನವೀಕರಿಸಬಹುದಾದ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಬುಧವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಎನ್.ಆರ್.ಪುರಕ್ಕೆ ಬರುವ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆದ ಶೃಂಗೇರಿ ಕ್ಷೇತ್ರ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಶಿಸ್ತು ಬದ್ದವಾಗಿ ಸರಿಯಾದ ರೀತಿ ನಿರ್ವಹಣೆ ಮಾಡಬೇಕು. ಮಲೆನಾಡಿನ ಸಂಸ್ಕೃತಿ ಬಿಂಬಿಸುವ ರೀತಿಯಲ್ಲಿ ಕಾರ್ಯಕ್ರಮ ನಡೆಸಬೇಕು. ಯಾವುದೇ ಸಮಸ್ಯೆ ಬಂದರೂ ಮುಕ್ತವಾಗಿ ಚರ್ಚೆ ನಡೆಸಬೇಕು. ಶಾಸಕನಾಗಿ ನಾನು ಎಲ್ಲಾ ಸಹಕಾರ ನೀಡುತ್ತೇನೆ. ವಿಶೇಷವಾಗಿ ನರಸಿಂಹರಾಜಪುರ ತಾಲೂಕು ಅಧಿಕಾರಗಳ ಜವಾಬ್ದಾರಿ ಹೆಚ್ಚಾಗಿದೆ ಎಂದರು.ಮುಂದಿನ 3 ದಿನ ಮಳೆ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳ ಜಾಗೃತರಾಗಬೇಕು. ಮಳೆ ಬಂದರೆ ಬದಲಿ ವ್ಯವಸ್ಥೆ ಮಾಡಬೇಕು. ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡ್ ಹಾಗೂ ಟೇಕಾಪ್ ಆಗುವಾಗ ಮಳೆ ಇದ್ದರೆ ಕಷ್ಟವಾಗಲಿದೆ ಎಂದರು.
ವೇದಿಕೆ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ, ಮೆಸ್ಕಾಂ,ಪೊಲೀಸ್ ಇಲಾಖೆ ಮುನ್ನಚ್ಚರಿಕೆ ವಹಿಸಬೇಕು. 3 ಸಾವಿರ ಕುರ್ಚಿಗಳನ್ನು ಹಾಕಿಸಲಾಗುವುದು. ವೇದಿಕೆ ಪಕ್ಕದಲ್ಲೇ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗುವುದು. ಪಟ್ಟಣದ ಎಲ್ಲಾ ಕಡೆ ಸ್ವಚ್ಛತೆಗೆ ಗಮನ ನೀಡಬೇಕು. ಪಪಂನವರು ಸ್ವಚ್ಛತೆಗೆ ಗಮನ ನೀಡಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಮಾದ್ಯಮದವರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಮುಖ್ಯ ಮಂತ್ರಿ ಕಾರ್ಯಕ್ರಮದ ಶಿಷ್ಟಚಾರದ ಪ್ರಕಾರ ನಡೆಸಲಾಗುವುದು. ಕನಿಷ್ಠ 5 ಜನರಿಗೆ ಮಾತ್ರ ಮಾತನಾಡಲು ಅವಕಾಶವಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಿದ ನಂತರ ಗೌರವಾರ್ಪಣೆ ಮಾಡಲು ಅವಕಾಶ ನೀಡಲಾಗುವುದು ಎಂದರು.
ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ಮಾಹಿತಿ ನೀಡಿ, ಬಸ್ ಪಾರ್ಕಿಂಗ್ಗೆ ನಿಲ್ದಾಣದಿಂದ ಬೇರೆ ರಸ್ತೆಯಲ್ಲಿ ಹೋಗಿ ಅಲ್ಲಿನ ಖಾಲಿ ಲೇಔಟ್ ನಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡುತ್ತೇವೆ. ಪ್ರವಾಸಿ ಮಂದಿರದಿಂದ ಮುಂದಕ್ಕೆ ಹೋದರೆ ಅಲ್ಲೂ ಪಾರ್ಕಿಂಗ್ ವ್ಯವಸ್ಥೆ ಮಾಡುತ್ತೇವೆ. ಮುಖ್ಯಮಂತ್ರಿ ವಾಸ್ತವ್ಯ ಹೂಡುವ ಪ್ರವಾಸಿ ಮಂದಿರದ ಒಳಗೆ ಕೆಲವೇ ವಾಹನಕ್ಕೆ ಮಾತ್ರ ಪ್ರವೇಶವಿದೆ. ಸಾರ್ವಜನಿಕರಿಗೆ ಪ್ರವೇಶವಿಲ್ಲ. ಸಭೆ ನಡೆಯುವಾಗ ವಿಐಪಿ, ಮಹಿಳೆಯರು, ಅಧಿಕಾರಿಗಳು, ಫಲಾನು ಭವಿಗಳು ಹಾಗೂ ಮಾದ್ಯಮದವರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗುವುದು ಎಂದರು.
-- ಬಾಕ್ಸ್ --
ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದಾಗ ಶೃಂಗೇರಿ ಕ್ಷೇತ್ರದಿಂದ ಮನವಿ ಅರ್ಪಿಸಲು ಸಿದ್ಧತೆ ಮಾಡಲಾಗಿದೆ. ಅಡಕೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ, ಅರಣ್ಯ ಸಮಸ್ಯೆ, ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನ ಹಾಗೂ ಕೊಪ್ಪದಿಂದ ಶಿವಮೊಗ್ಗ ಏರ್ ಪೋರ್ಟಿಗೆ ಹೋಗಲು ಸುಸಜ್ಜಿತ ರಸ್ತೆಗೆ ವಿಶೇಷ ಅನುದಾನ ನೀಡುವಂತೆ ಮನವಿ ನೀಡಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.