- ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಅಂತ್ಯಕ್ರಿಯೆ------------
ಶನಿವಾರ ಬೆಳಗ್ಗೆ ನಿಧನರಾದ ಮೈಸೂರು ನಗರದ ಮಾಜಿ ಮೇಯರ್ ಹಾಗೂ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಅವರ ಅಂತ್ಯಕ್ರಿಯೆಯು ಭಾನುವಾರ ಮಧ್ಯಾಹ್ನ ಬನ್ನೂರು ರಸ್ತೆಯಲ್ಲಿರುವ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನೆರವೇರಿತು.
ಜಯಲಕ್ಷ್ಮೀಪುರಂನಲ್ಲಿರುವ ಸ್ವಗೃಹದಲ್ಲಿ ವಾಸು ಅವರ ಪಾರ್ಥಿವ ಶರೀರವನ್ನು ಇಟ್ಟು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಭಾನುವರವೂ ಸಾವಿರಾರು ಮಂದಿ ಭೇಟಿ ನೀಡಿ, ಅಂತಿಮ ನಮನ ಸಲ್ಲಿಸಿದರು. ಪ್ರಮುಖವಾಗಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ, ವರುಣ ಕ್ಷೇತ್ರದ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ,ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಮೊದಲಾದವರು ಅಂತಿಮ ದರ್ಶನ ಪಡೆದರು.ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಎಂಡಿಎ ಅಧ್ಯಕ್ಷ ಕೆ. ಮರೀಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಮಹಿಳಾ ಆಯೋಗದ ಮಾಜಿ ಅಧ್ಯಕ್ಷ ಮಂಜುಳಾ ಮಾನಸ, ನಂತರ ಪಾರ್ಥಿವ ಶರೀರವನ್ನು ರೈಲ್ವೆ ನಿಲ್ದಾಣದ ಬಳಿ ಇರುವ ಕಾಂಗ್ರೆಸ್ ಭವನಕ್ಕೆ ತರಲಾಯಿತು. ಅಲ್ಲಿ ನಗರಾಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಗೌರವ ಸಲ್ಲಿಸಿದರು. ಪಾರ್ಥಿವ ಶರೀರಕ್ಕೆ ಸೇವಾದಳ ಕಾರ್ಯಕರ್ತರ ಸಹಯೋಗದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಹೊದಿಸಲಾಯಿತು.