ಮಂಗಳೂರು: ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತೀ ಮನೆಯ ಯಜಮಾನಿಗೆ ಯಾವುದೇ ಷರತ್ತಿಲ್ಲದೇ ಎರಡು ಸಾವಿರ ರುಪಾಯಿ ನೀಡುತ್ತೇವೆ ಎಂದು ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ನಾನಾ ಕಾರಣಗಳನ್ನು ನೀಡಿ ಒಂದೂವರೆ ಲಕ್ಷಕ್ಕೂ ಅಧಿಕ ಫಲಾನುಭವಿಗಳನ್ನು ಯೋಜನೆಯಿಂದ ಹೊರ ಹಾಕಲು ಹುನ್ನಾರ ನಡೆಸಿರುವುದು ಖಂಡನೀಯ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಾಕಿ ಉಳಿಸಿಕೊಂಡಿದ್ದ ಎರಡು ಕಂತಿನ ಐದು ಸಾವಿರ ಕೋಟಿ ರು. ಏನಾಯಿತು ಎಂಬ ಬಗ್ಗೆ ಅಧಿವೇಶನದಲ್ಲಿ ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡಿಲ್ಲ. ಒಟ್ಟಾರೆಯಾಗಿ ಗೃಹಲಕ್ಷ್ಮಿ ಹೆಸರಲ್ಲಿ ಕಾಂಗ್ರೆಸ್ ಸರ್ಕಾರ ಬಹುದೊಡ್ಡ ಭ್ರಷ್ಟಾಚಾರ ನಡೆಸುತ್ತಿದ್ದು ಅದನ್ನು ಮುಚ್ಚಿ ಹಾಕಲು ಲಕ್ಷಾಂತರ ಸ್ವಾಭಿಮಾನಿ ಮಹಿಳೆಯರನ್ನು ಯೋಜನೆಯಿಂದ ತೆಗೆದು ಹಾಕಲಾಗುತ್ತಿರುವುದು ಖಂಡನೀಯ. ಈ ಸರ್ಕಾರದ ಅಸಲಿ ಬಣ್ಣ ಬಯಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿಯರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.