ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಕುಂಬಾರಬೀದಿ ನಿವಾಸಿ ಮಹದೇವಪ್ಪ ಅವರು ಕೆಲ ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಪಟ್ಟಣದ ತಮ್ಮ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಬುಧವಾರ ತಡರಾತ್ರಿ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಉಂಟಾಗಿ ಮಗಳ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ರಾಜ್ಯ ಸರ್ಕಾರದ ಕನ್ನಡ ರಾಜ್ಯೋತ್ಸವ, ಕರ್ನಾಟಕ ಜಾನಪದ ಅಕಾಡೆಮಿ ಹಾಗೂ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಸೇರಿ ವಿವಿಧ ಸಂಘ ಸಂಸ್ಥೆಗಳಿಂದ ನೂರಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದ ಮಹದೇವಪ್ಪ ಅವರು ವೀರಗಾಸೆ ಕಲೆಯನ್ನೇ ಉಸಿರಾಗಿಸಿಕೊಂಡು ತಾಲೂಕು, ಜಿಲ್ಲೆ ಸೇರಿ ರಾಜ್ಯದ ವಿವಿಧೆಡೆ ತಮ್ಮ ಕಲಾ ಪ್ರದರ್ಶನದ ಮೂಲಕ ಜನಮೆಚ್ಚುಗೆ ಗಳಿಸಿದ್ದರು. ಅಲ್ಲದೆ ಕೆಲ ಚಲನಚಿತ್ರಗಳಲ್ಲಿಯೂ ವೀರಗಾಸೆ ಕಲಾವಿದರಾಗಿ ಅಭಿನಯಿಸಿದ್ದರು.ಕಳೆದ ನಾಲ್ಕೈದು ವರ್ಷಗಳಿಂದ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರ ನವದೆಹಲಿಯ ನಿವಾಸದಲ್ಲಿ ಡಿಸೆಂಬರ್ ತಿಂಗಳಲ್ಲಿ ಜರುಗುತ್ತಿದ್ದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವೀರಗಾಸೆ ಪ್ರದರ್ಶನ ನೀಡುತ್ತಿದ್ದ ಮಹದೇವಪ್ಪ ಅವರನ್ನು ಸೋನಿಯಾಗಾಂಧಿ ಸನ್ಮಾನಿಸಿದ್ದರು.
ಪತ್ನಿ ಸುಮಿತ್ರ, ಪುತ್ರ ಅನಿರುದ್ರ ಮತ್ತು ಮೂವರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿರುವ ಮಹದೇವಪ್ಪ ಅವರ ಪಾರ್ಥೀವ ಶರೀರವನ್ನು ಗುರುವಾರ ಮಧ್ಯಾಹ್ನದವರೆಗೂ ಪಟ್ಟಣದ ಕುಂಬಾರಬೀದಿಯ ಸ್ವಗೃಹದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.
ಗಣ್ಯರ ಸಂತಾಪ :
ವೀರಗಾಸೆ ಕಲೆಯಲ್ಲಿ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದ ಪಟ್ಟಣದ ಮಹದೇವಪ್ಪ ಅವರು ಕಲೆಯನ್ನೇ ಉಸಿರಾಗಿಸಿಕೊಂಡು ಬಹಳ ಎತ್ತರಕ್ಕೆ ಬೆಳೆದಿದ್ದರು. ಇವರ ಅಗಲಿಕೆಯಿಂದ ಕಲಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲೆಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.