ಸಮುದಾಯ ಮುಖಂಡರು, ವಿವಿಧ ಸಂಘ ಭಾಗಿ । ಜಿಲ್ಲಾಡಳಿತಕ್ಕೆ ಮನವಿ । ಮೃತರ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಒತ್ತಾಯ
ಯಾವುದೇ ಒತ್ತಡಕ್ಕೂ ಮಣಿಯದೆ ಚಲನಚಿತ್ರ ನಟ ಮತ್ತು ಸಹಚರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ತಕ್ಷಣವೇ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಬೇಕು. ಪತ್ನಿಗೆ ಉದ್ಯೋಗ ಕೊಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜ, ವಿವಿಧ ಮಠದ ಸ್ವಾಮೀಜಿಗಳು ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಅರಕಲಗೂಡು ದೊಡ್ಡಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾಧ್ಯಮದೊಂದಿಗೆ ಮಾತನಾಡಿ, ‘ಇದೇ ವೇಳೆ ಕನ್ನಡ ಚಲನಚಿತ್ರ ನಟ ದರ್ಶನ್ ತೂಗುದೀಪ ಮತ್ತು ಈತನ ಸ್ನೇಹಿತೆ ಪವಿತ್ರಾಗೌಡ ಹಾಗೂ ೧೫ ಮಂದಿ ಸೇರಿ ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಸಿನಿಮಾ ಶೈಲಿಯಲ್ಲಿ ಹಲ್ಲೆ ನಡೆಸಿ ಕೊಲೆ ಮಾಡಿರುವುದು ಖಂಡನೀಯವಾಗಿದೆ. ನಾಗರಿಕ ಸಮಾಜವು ಇದನ್ನು ಒಪ್ಪಲು ಸಾಧ್ಯವಿಲ್ಲ. ರೇಣುಕಾಸ್ವಾಮಿ ವೀರಶೈವ ಸಮುದಾಯಕ್ಕೆ ಸೇರಿದವರು. ಅವರು ವಯೋವೃದ್ಧ ತಂದೆ ತಾಯಿ ಹಾಗೂ ಗರ್ಭಿಣಿ ಪತ್ನಿ ಇದ್ದು, ಈ ವಿಚಾರ ಕೇಳಿ ಇವರ ಕುಟುಂಬವು ಈಗ ದಿಗ್ಬ್ರಮೆಗೆ ಒಳಗಾಗಿದ್ದಾರೆ’ ಎಂದು ಹೇಳಿದರು.‘ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತಂದು ಚಿತ್ರನಟ ದರ್ಶನ್ ಹಾಗೂ ಆತನ ಸಹಚರರು ಬ್ಯಾಟ್, ಕಬ್ಬಿಣದ ರಾಡು ಇನ್ನಿತರೆ ಆಯುಧಗಳಿಂದ ಮಾರಾಣಾಂತಿಕ ಹಲ್ಲೆ ನಡೆಸಿ ಕ್ರೂರವಾಗಿ ಕೊಲೆಗೈದಿದ್ದಾರೆ. ಪೊಲೀಸರು ಈಗಾಗಲೇ ೧೩ ಆರೋಪಿಗಳನ್ನು ಬಂಧಿಸಿದ್ದು, ಇನ್ನುಳಿದವರ ಶೋಧಕಾರ್ಯ ಮುಂದುವರೆಸಿದ್ದಾರೆ. ದರ್ಶನ್ ತೂಗುದೀಪ ಈ ಹಿಂದೆ ಕೂಡ ಕ್ರಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದು, ರೇಣುಕಾಸ್ವಾಮಿ ಕೊಲೆ ಮಾಡಿದ್ದರಿಂದ ಅವರ ಕುಟುಂಬ ಅನಾಥವಾಗಿದೆ. ದರ್ಶನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಒತ್ತಾಯವಾಗಿದೆ’ ಎಂದು ಹೇಳಿದರು.
‘ರೌಡಿ ದರ್ಶನ್ ತೂಗುದೀಪ ವಿರುದ್ಧ ಪೊಲೀಸರು ರೌಡಿಶೀಟರ್ ಹಾಕಿ ವಸ್ತುಸ್ಥಿತಿ ಅರಿತು ಶಿಘ್ರವೇ ರೇಣುಕಾಸ್ವಾಮಿ ಮನೆಗೆ ಸಂಬಂಧಿಸಿದ ಸಚಿವರು ಭೇಟಿ ನೀಡಿ ಸಾಂತ್ವನ ಹೇಳಬೇಕು. ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿ ದರ್ಶನ್ಗೆ ಯಾವ ಕಾರಣಕ್ಕೂ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಬೇಕು. ನಮ್ಮ ನ್ಯಾಯಯುತ ಬೇಡಿಕೆಯನ್ನು ಪರಿಗಣಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.