- ಧನ ಸಹಾಯ
-----
ಕನ್ನಡಪ್ರಭ ವಾರ್ತೆ ಶಿಕಾರಿಪುರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಜ್ಯಾದ್ಯಂತ 16 ಸಾವಿರ ಅಧಿಕ ದೇವಾಲಯಗಳ ಅಭಿವೃದ್ಧಿಗೆ ಹಂತ ಹಂತವಾಗಿ ಅನುದಾನ ನೀಡಲಾಗಿದ್ದು, ಧರ್ಮಾಧಿಕಾರಿಗಳು ಈ ಮೂಲಕ ಧಾರ್ಮಿಕ ಪರಂಪರೆ, ಸಂಸ್ಕೃತಿ ಜತೆಗೆ ಗ್ರಾಮೀಣ ಸಮುದಾಯದ ಒಗ್ಗಟ್ಟು ಬಲಪಡಿಸುವ ದಿಸೆಯಲ್ಲಿ ಹೆಚ್ಚಿನ ರೀತಿಯಲ್ಲಿ ಶ್ರಮಿಸುತ್ತಿದ್ದಾರೆ ಎಂದು ಯೋಜನೆಯ ಶಿರಸಿ ಜಿಲ್ಲಾ ನಿರ್ದೇಶಕ ಎಂ. ದಿನೇಶ್ ತಿಳಿಸಿದರು.
ಕ್ಷೇ.ಧ.ಗ್ರಾ.ಯೋಜನೆ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಧಾರ್ಮಿಕ ಅಭಿವೃದ್ಧಿಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ದೇವಸ್ಥಾನಗಳು ಗ್ರಾಮೀಣ ಪ್ರದೇಶಗಳ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಪ್ರಮುಖ ಕೇಂದ್ರಗಳಾಗಿದ್ದು, ಇವುಗಳ ಅಭಿವೃದ್ಧಿಗೆ ಧರ್ಮಸ್ಥಳವು ವಿಶೇಷ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.
ನೇರಲಗಿ ಗ್ರಾಮದ ಆಂಜನೇಯ ದೇವಸ್ಥಾನದ ಗೋಪುರ ಅಭಿವೃದ್ಧಿಗೆ ನೀಡಿರುವ ₹1 ಲಕ್ಷ ಸಹಾಯಧನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ರೀತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ದೇವಸ್ಥಾನದ ಆಡಳಿತ ಮಂಡಳಿ ಹೆಚ್ಚಿನ ರೀತಿಯಲ್ಲಿ ನಿಗಾವಹಿಸುವಂತೆ ಅವರು ಸೂಚಿಸಿದರು.
ಯುವಜನರು, ಮಹಿಳೆಯರು ಹಾಗೂ ಗ್ರಾಮಸ್ಥರು ಇಂತಹ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಗ್ರಾಮದಲ್ಲಿ ಉತ್ತಮ ಸಾಮಾಜಿಕ ವಾತಾವರಣ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾ.ಯೋಜನಾಧಿಕಾರಿಗಳು, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಆಂಜನೇಯ ದೇವಸ್ಥಾನದ ಆಡಳಿತ ಮಂಡಳಿಯವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕ್ಷೇ.ಧ.ಗ್ರಾ.ಯೋಜನೆಯಿಂದ ತಾಲೂಕಿನ ನೇರಲಗಿ ಆಂಜನೇಯ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಮಂಜೂರಾದ ₹1ಲಕ್ಷ ಮೌಲ್ಯದ ಚೆಕ್ನ್ನು ಶಿರಸಿ ಜಿಲ್ಲಾ ನಿರ್ದೇಶಕ ಎಂ. ದಿನೇಶ್ ದೇವಸ್ಥಾನ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿದರು.