ಇಂದಿನಿಂದ ವೇಣೂರು ಬಾಹುಬಲಿಗೆ ಮಹಾಮಜ್ಜನ

KannadaprabhaNewsNetwork |  
Published : Feb 22, 2024, 01:46 AM IST
ಮಸ್ತಕಾಭಿಷೇಕ | Kannada Prabha

ಸಾರಾಂಶ

ಇಂದಿನಿಂದ ಮಾರ್ಚ್‌ 1ರ ತನಕ ಲೋಕಕಲ್ಯಾಣಾರ್ಥವಾಗಿ ಜನ ಸಮುದಾಯದಲ್ಲಿ ಧಾರ್ಮಿಕ ಪ್ರವೃತ್ತಿಯ ಸಂರಕ್ಷಣೆಗಾಗಿ ನಡೆಯುವ ಮಹಾಮಸ್ತಕಾಭಿಷೇಕವು ಯುಗಳಮುನಿ ಪರಮಪೂಜ್ಯ ಶ್ರೀ ಅಮೋಘ ಕೀರ್ತಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರ ಕೀರ್ತಿ ಮಹಾರಾಜ ಇವರ ಪಾವನ ಸಾನಿಧ್ಯದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಆರಂಭಗೊಳ್ಳಲಿದೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ವೇಣೂರಿನಲ್ಲಿ 21ನೇ ಶತಮಾನದ ಮೂರನೇ ಮಹಾಮಸ್ತಕಾಭಿಷೇಕಕ್ಕೆ ಎಲ್ಲ ಸಿದ್ಧತೆಗಳು ಅಂತಿಮಗೊಂಡಿದ್ದು ಇಂದಿನಿಂದ (ಫೆ.22) ವಿರಾಟ್ ವಿರಾಗಿಗೆ ಮಹಾಮಜ್ಜನ ಕಾರ್ಯ ನೆರವೇರಲಿದೆ. ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬ ಸಂದೇಶ ಮಸ್ತಕಾಭಿಷೇಕದೊಂದಿಗೆ ಪಸರಿಸಲಿದೆ.

ಇಂದಿನಿಂದ ಮಾರ್ಚ್‌ 1ರ ತನಕ ಲೋಕಕಲ್ಯಾಣಾರ್ಥವಾಗಿ ಜನ ಸಮುದಾಯದಲ್ಲಿ ಧಾರ್ಮಿಕ ಪ್ರವೃತ್ತಿಯ ಸಂರಕ್ಷಣೆಗಾಗಿ ನಡೆಯುವ ಮಹಾಮಸ್ತಕಾಭಿಷೇಕವು ಯುಗಳಮುನಿ ಪರಮಪೂಜ್ಯ ಶ್ರೀ ಅಮೋಘ ಕೀರ್ತಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರ ಕೀರ್ತಿ ಮಹಾರಾಜ ಇವರ ಪಾವನ ಸಾನಿಧ್ಯದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಆರಂಭಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಮೂಡುಬಿದಿರೆ, ಶ್ರವಣಬೆಳಗೊಳ, ನರಸಿಂಹರಾಜಪುರ, ಲಕ್ಕವಳ್ಳಿ, ಹೊಂಬುಜ ಆರತೀಪುರ, ಸೋಂದ, ಅರಹಂತಗಿರಿ, ಕನಕಗಿರಿ ಕಂಬದಹಳ್ಳಿ, ಕಾರ್ಕಳ, ಶ್ರೀ ಕ್ಷೇತ್ರ ಗಾಂದಣಿ, ವರೂರು, ಕೊಲ್ಲಾಪುರ, ಜಿನಕಂಚಿ ಮೊದಲಾದ ಜೈನ ಮಠಗಳ ಮಹಾಸ್ವಾಮಿಗಳು ಭಾಗವಹಿಸಲಿದ್ದಾರೆ. ಡಿಕೆಶಿ ಅವರಿಂದ ಧಾರ್ಮಿಕ ಸಭೆ ಉದ್ಘಾಟನೆ: ಇಂದು ಬೆಳಿಗ್ಗೆ ತೋರಣ ಮುಹೂರ್ತ, ವಿಮಾನಶುದ್ಧಿ ವಿಧಾನ, ಮಧ್ಯಾಹ್ನ ಮುಖ ವಸ್ತ್ರ ಉದ್ಘಾಟನೆ, ನಾಂದಿ ಮಂಗಲ ವಿಧಾನ, ವಾಸ್ತು ಪೂಜಾ ವಿಧಾನ, ನವಗ್ರಹ ಮಹಾಶಾಂತಿ,ದಿಕ್ಪಾಲಕ ಬಲಿ ವಿಧಾನ, ಅಗ್ರೋದಕ ಮೆರವಣಿಗೆ ಇತ್ಯಾದಿ ಜರುಗಲಿದೆ. ಸಂಜೆ 3 ಗಂಟೆಯಿಂದ ನಡೆಯುವ ಧಾರ್ಮಿಕ ಸಭೆ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು. ಸಚಿವ ದಿನೇಶ್ ಗುಂಡೂರಾವ್ ಸ್ಮರಣ ಸಂಚಿಕೆ ಬಿಡುಗಡೆ, ಸಂಸದ ನಳಿನ್ ಕುಮಾರ್ ಕಟೀಲ್ ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಿಸಲಿದ್ದಾರೆ. ಮಾಜಿ ಸಚಿವ ಅಭಯಚಂದ್ರ ಜೈನ್, ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ಎಂಎಲ್‌ಸಿ ಹರೀಶ್ ಕುಮಾರ್, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವೇಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನೇಮಯ್ಯ ಕುಲಾಲ್ ಮತ್ತಿತರರು ಭಾಗವಹಿಸಲಿದ್ದಾರೆ. ರಾತ್ರಿ 7.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಭರತನಾಟ್ಯ,ಯಕ್ಷಗಾನ ಜರಗಲಿದೆ.ಸಂಜೆ 6:45ರಿಂದ ಮಹಾಮಸ್ತಕಾಭಿಷೇಕ:

ಫೆ. 22 ರಿಂದ ಮಾ.1ರ ತನಕ ಪ್ರತಿದಿನ ಸಂಜೆ ಗಂಟೆ 6:45 ರಿಂದ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಜಲ, ಸೀಯಾಳ, ಹಾಲು, ಇಕ್ಷುರಸ, ಕಲ್ಕರಸ, ಅರಿಶಿಣ ಹುಡಿ, ಕಷಾಯ, ಗಂಧ, ಕೇಸರಿ, ಚಂದನ, ಅಷ್ಟಗಂಧ ಮೊದಲಾದ ದ್ರವ್ಯಗಳ ಅಭಿಷೇಕದ ಬಳಿಕ ಪುಷ್ಪವೃಷ್ಠಿ ನಡೆಯಲಿದೆ.

ಫೆ.25ರಂದು ಬೆಳಗ್ಗೆ 7 ಗಂಟೆಯಿಂದ ಸ್ವಾಮೀಜಿಯವರ ದೀಕ್ಷಾ ವರ್ಷದ ಪ್ರಯುಕ್ತ ವಿಶೇಷ ಮಹಾ ಮಸ್ತಕಾಭಿಷೇಕ ಹಾಗೂ ಸಂಜೆ ಎಂದಿನಂತೆ ಅಭಿಷೇಕ ಕಾರ್ಯಕ್ರಮಗಳು ನಡೆಯಲಿವೆ.

ಪ್ರಥಮ ನಾಲ್ಕು ದಿನ108 ಕಲಶ, ಬಳಿಕ ಮೂರು ದಿನ 216 ಕಲಶ, ಎಂಟನೇ ದಿನ 504 ಕಲಶಗಳಿಂದ ಮಹಾಮಸ್ತಕಾಭಿಷೇಕ ಸೇವಾಕರ್ತೃಗಳಿಂದ ನಡೆಯಲಿದ್ದು, 9ನೇ ದಿನ 1008 ಕಲಶಗಳೊಂದಿಗೆ ಸಮಿತಿ ವತಿಯಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ.ಪೂರ್ವಭಾವಿ ತಯಾರಿ: ಸರ್ಕಾರದ ವತಿಯಿಂದ ಮಹಾಮಸ್ತಕಾಭಿಷೇಕ ಬಗ್ಗೆ ರಸ್ತೆ ದುರಸ್ತಿ, ಆಕರ್ಷಕ ದೀಪಾಲಂಕಾರ, ಅಭಿವೃದ್ಧಿ ಕಾಮಗಾರಿ, ನವೀಕರಣ ಇತ್ಯಾದಿ ಬಹುತೇಕ ಪೂರ್ಣಗೊಂಡಿದೆ. ಸಮಿತಿ ವತಿಯಿಂದ ಧಾರ್ಮಿಕ ವಿಧಿ ವಿಧಾನಗಳಿಗೆ ಬೇಕಾದ ಅಗತ್ಯ ತಯಾರಿಗಳು ನಡೆಯುತ್ತಿವೆ. ಈ ಶತಮಾನದ ಮೂರನೇ ಮಹಾಮಸ್ತಕಾಭಿಷೇಕಕ್ಕೆ ವೇಣೂರು ಸಂಪೂರ್ಣ ಸಿದ್ಧಗೊಂಡಿದೆ. ಕೊನೆಯ ಹಂತದ ಕೆಲವೊಂದು ಕೆಲಸಗಳು ಸಾಗುತ್ತಿವೆ.

ಪ್ರತಿದಿನ ಸುಮಾರು 20 ಸಾವಿರ ಮಂದಿಗೆ ಊಟೋಪಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಇದರ ಜತೆ ಹೊರ ಭಾಗಗಳಿಂದ ಆಗಮಿಸುವ ಜನರಿಗೆ ವಸತಿ ವ್ಯವಸ್ಥೆಗಳನ್ನು ಮಾಡಲಾಗಿದೆ. ಅಟ್ಟಳಿಗೆ ಕಾಮಗಾರಿ ಪೂರ್ಣಗೊಂಡಿದ್ದು ಈಗಾಗಲೇ ಸಾವಿರಾರು ಮಂದಿ ವೀಕ್ಷಣೆ ನಡೆಸಿದ್ದಾರೆ‌ಹಲವು ಸುತ್ತಿನ ಪೂರ್ವಭಾವಿ ಸಭೆಗಳು ಈಗಾಗಲೇ ನಡೆದಿದ್ದು ಅಗತ್ಯ ಇಲಾಖೆಗಳ ಅಧಿಕಾರಿ ವರ್ಗ ವೇಣೂರಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಕೈಗೊಂಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಯಾದಗಿ ಅರಣ್ಯ ಕಚೇರಿಗೆ ಅರಣ್ಯ ಅತಿಕ್ರಮಣದಾರರ ಮುತ್ತಿಗೆ
ದುಶ್ಚಟ ತ್ಯಜಿಸಿ ಶಿಸ್ತಿನ ಜೀವನಶೈಲಿ ಅಳವಡಿಸಿಕೊಳ್ಳಿ