ಕನ್ನಡಪ್ರಭ ವಾರ್ತೆ ಹಾಸನನೀಟ್ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನಗರದಲ್ಲಿ ವಿವಿಧ ವಿದ್ಯಾರ್ಥಿ, ಯುವಜನ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಶನಿವಾರ ವಿಜಯೋತ್ಸವ ಆಚರಿಸಲಾಯಿತು.ನಗರದ ಹೇಮಾವತಿ ಪ್ರತಿಮೆ ಎದುರು ನಡೆದ ಕಾರ್ಯಕ್ರಮದಲ್ಲಿ ಸಂಘಟನೆಗಳ ಕಾರ್ಯಕರ್ತರು ಸೇರಿ ಘೋಷಣೆಗಳನ್ನು ಕೂಗಿ ಸಂಭ್ರಮ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಭವಿಷ್ಯದ ರಕ್ಷಣೆಗೆ ನಡೆದ ಹೋರಾಟಕ್ಕೆ ಇದು ದೊರೆತ ಮೊದಲ ಜಯ ಎಂದು ಮುಖಂಡರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘಟನೆಗಳ ಪ್ರತಿನಿಧಿಗಳು, ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ವಿರುದ್ಧ ದೇಶದಾದ್ಯಂತ ವಿದ್ಯಾರ್ಥಿಗಳು, ಯುವಜನರು ಹಾಗೂ ವಿವಿಧ ಪ್ರಜಾಪ್ರಭುತ್ವ ಚಳುವಳಿಗಳು ನಿರಂತರ ಹೋರಾಟ ನಡೆಸಿದ್ದವು. ಆ ಹೋರಾಟದ ಒತ್ತಡದ ಫಲವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು. ಪರೀಕ್ಷಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ಧಕ್ಕೆ ತರುವಂತಹ ಯಾವುದೇ ಅಕ್ರಮವನ್ನು ಸಹಿಸಲಾಗುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕ ಮತ್ತು ವಿಶ್ವಾಸಾರ್ಹವಾಗಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಬೆಂಬಲವಾಗಿ ಮುಂದೆಯೂ ಹೋರಾಟ ಮುಂದುವರಿಯಲಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಸಮಾನ ಅವಕಾಶ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.ವಿಜಯೋತ್ಸವದಲ್ಲಿ ವಿವಿಧ ಸಂಘಟನೆಯ ಮುಖಂಡರಾದ ಧರ್ಮೇಶ್, ಟಿ. ಆರ್. ವಿಜಯಕುಮಾರ್, ಎಚ್. ಕೆ. ಸಂದೇಶ್, ಶಾಡ್ರಾಕ್, ಎಂ.ಜಿ. ಪೃಥ್ವಿ, ಅರವಿಂದ್, ವಿದ್ಯಾರ್ಥಿ ಸಂಘಟನೆಗಳು, ಯುವಜನ ಸಂಘಟನೆಗಳು ಹಾಗೂ ಸಾಮಾಜಿಕ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.