ಟೌನ್‍ಶಿಪ್ ವಿರೋಧಿಸಿ 25ಕ್ಕೆ ವಿಧಾನಸೌಧ ಚಲೋ

KannadaprabhaNewsNetwork |  
Published : Aug 22, 2026, 01:30 AM IST
ಪೊಟೋ: 21ಎಸ್‌ಎಂಜಿಕೆಪಿ01ಶಿವಮೊಗ್ಗದ ಪತ್ರಿಕಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಮಾತನಾಡಿದರು. | Kannada Prabha

ಸಾರಾಂಶ

ಬಿಡದಿ ರೈತರ ಹೋರಾಟ ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ನೇತೃತ್ವದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಆ.25ರಂದು ಬೃಹತ್ ವಿಧಾನ ಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಬಿಡದಿ ರೈತರ ಹೋರಾಟ ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ನೇತೃತ್ವದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಆ.25ರಂದು ಬೃಹತ್ ವಿಧಾನ ಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 550 ದಿನಗಳಿಂದ ಬಿಡದಿ ರೈತರು ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಧಿಮಾಕಿನ ಧೋರಣೆ ಅನುಸರಿಸುತ್ತಿದೆ. ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನದಾಸ್ ನೇತೃತ್ವದ ಪಬ್ಲಿಕ್ ಹಿಯರಿಂಗ್‌ನಲ್ಲಿ ಬಿಡದಿ ಟೌನ್‌ಶಿಪ್‌ ಯೋಜನೆಗೆ ಹಾಗೂ ಭೂ ಸ್ವಾಧೀನ ಪ್ರಕ್ರಿಯೆಗೆ ಯಾವುದೇ ಕಾನೂನಿನ ತಳಹದಿ ಇಲ್ಲ, ಇದು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ತೀರ್ಪುಗಳ ಉಲ್ಲಂಘನೆ ಎಂದು ಸ್ಪಷ್ಟವಾಗಿ ಹೇಳಿದೆ. ವಿಚಾರಣೆ ವೇಳೆ ಶೇ.80ರಷ್ಟು ರೈತರು ಭೂಮಿ ಕೊಡುವುದಿಲ್ಲ ಎಂದರೂ ಸರ್ಕಾರ ಈ ಅನ್ಯಾಯದ ಭೂ ಸ್ವಾಧೀನವನ್ನು ಸಮರ್ಥಿಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 14ರಂದು ಪತ್ರಿಕಾಗೋಷ್ಠಿಯಲ್ಲಿ ಸಮಿತಿ ರಚಿಸುವುದಾಗಿ ಘೋಷಿಸಿದ್ದರು. ಆಗಸ್ಟ್ 9 ರಂದು ನ್ಯಾಯಮೂರ್ತಿ ಗುರುನಾಥ್ ನರೇಂದ್ರ ನೇತೃತ್ವದಲ್ಲಿ ಸಮಿತಿ ಸದಸ್ಯರ ಪಟ್ಟಿ ಬಿಡುಗಡೆ ಮಾಡಿ 30 ದಿನಗಳಲ್ಲಿ ವರದಿ ಪಡೆಯುವುದಾಗಿ ಹೇಳಿದ್ದರು. ಘೋಷಿಸಿ ಒಂದೂವರೆ ತಿಂಗಳಾದರೂ ಸರ್ಕಾರಿ ಆದೇಶವೇ ಹೊರಬಿದ್ದಿಲ್ಲ. ಪಟ್ಟಿ ಬಿಡುಗಡೆಯಾಗಿ 15 ದಿನವಾದರೂ ಕ್ರಮವಿಲ್ಲ. ಇದು ಅನಗತ್ಯ ಮತ್ತು ದುರುದ್ದೇಶದ ವಿಳಂಬ ಎಂದು ದೂರಿದರು.

ಬಿಡದಿ ರೈತರ ಹೋರಾಟ ಒಂದೂವರೆ ವರ್ಷದಿಂದ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಒಂದು ಬಾರಿಯೂ ರೈತರ ಜೊತೆ ಮಾತುಕತೆ ನಡೆಸಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜಕೀಯದ ಹೆಸರಲ್ಲಿ ರೈತರಲ್ಲಿ ಒಡಕು ಮೂಡಿಸಿ, ಪರೋಕ್ಷವಾಗಿ ಸರ್ಕಾರದ ರಿಯಲ್ ಎಸ್ಟೇಟ್ ಹುನ್ನಾರಕ್ಕೆ ಸಹಕರಿಸುತ್ತಿವೆ. ಮೂರೂ ಪಕ್ಷಗಳು ತಮ್ಮ ಲೋಪ ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿವೆಯೇ ಹೊರತು ರೈತರ ಭೂಮಿ ಉಳಿಸಲು ಅರ್ಥಪೂರ್ಣ ಹೋರಾಟ ನಡೆಸುತ್ತಿಲ್ಲ ಎಂದು ಕಿಡಿಕಾರಿದರು.

ರಿಯಲ್ ಎಸ್ಟೇಟ್ ಕಾರ್ಫೋರೇಟ್ ಭೂ ಕಬಳಿಕೆಯ ಹುನ್ನಾರವನ್ನು ಸೋಲಿಸಲು ಮತ್ತು ಫಲವತ್ತಾದ ನೀರಾವರಿ ಕೃಷಿ ಭೂಮಿ ರಕ್ಷಿಸಲು ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಬೈರಮಂಗಲ-ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂ ಹಿತರಕ್ಷಣಾ ಸಂಘದ ಜಂಟಿ ಆಶ್ರಯದಲ್ಲಿ ಈ ಬೃಹತ್ ವಿಧಾನಸೌಧ ಚಲೋ ಆಯೋಜಿಸಲಾಗಿದೆ. ಈ ಚಲೋದಲ್ಲಿ ರಾಜ್ಯದ ನೂರಾರು ರೈತರು, ಕೂಲಿ ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಕರೆ ನೀಡಿದರು.

ಗೋಷ್ಠಿಯಲ್ಲಿ ವಿವಿಧ ಸಂಘಟನೆಗಳ ಹಾಗೂ ರೈತ ಮುಖಂಡರಾದ ಶೇಷಪ್ಪ, ಹಿಟ್ಟೂರು ರಾಜು, ಹನುಮಮ್ಮ, ಕೆ. ಎಲ್.ಅಶೋಕ್, ಎಚ್.ಎಂ. ಜ್ಞಾನೇಶ್, ಇ.ಬಿ. ಜಗದೀಶ್, ಕೆ. ರಾಘವೇಂದ್ರ, ಶೇಖರಪ್ಪ, ಷಣ್ಮುಕಪ್ಪ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಂಟೇಸ್ವಾಮಿ ಕ್ಷೇತ್ರದ ವರಮಹಾಲಕ್ಷ್ಮಿ ಹಬ್ಬಕ್ಕೆ ಧನ ಸಹಾಯ
ನರ್ತಕಿಯರ ಮೇಕಪ್‌ ಕೊಠಡಿಯಾದ ಸಾರ್ವಜನಿಕ ಆಸ್ಪತ್ರೆ..!