ವೈಭವದ ಹಂಪಿ ಉತ್ಸವಕ್ಕೆ ಸಜ್ಜಾದ ವಿಜಯನಗರ

KannadaprabhaNewsNetwork |  
Published : Feb 12, 2026, 03:00 AM IST
ಫೋಟೋವಿವರ- (11ಎಚ್‌ಪಿಟಿ2) ಹಂಪಿ ಉತ್ಸವದ ವೇದಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್ ಖಾನ್‌ ಪರೀಶೀಲಿಸುತ್ತಿರುವುದು | Kannada Prabha

ಸಾರಾಂಶ

ಫೆ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಾಂಸ್ಕೃತಿಕ ವೈಭವಕ್ಕೆ ಚಾಲನೆ ನೀಡುವರು. ಉದ್ಘಾಟನೆಯ ದಿನದಂದು ಮುಖ್ಯಮಂತ್ರಿ ಹಂಪಿಯಲ್ಲೇ ವಾಸ್ತವ್ಯ ಹೂಡಲಿದ್ದು, ಮರುದಿನ ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ

ಹೊಸಪೇಟೆ: ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿಯಲ್ಲಿ ಫೆ.13, 14, 15ರಂದು ಹಂಪಿ ಉತ್ಸವ​- 2026 ಅದ್ಧೂರಿಯಾಗಿ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್‌ ಖಾನ್ ತಿಳಿಸಿದರು.

ಹಂಪಿ ಉತ್ಸವದ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಫೆ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಾಂಸ್ಕೃತಿಕ ವೈಭವಕ್ಕೆ ಚಾಲನೆ ನೀಡುವರು. ಉದ್ಘಾಟನೆಯ ದಿನದಂದು ಮುಖ್ಯಮಂತ್ರಿ ಹಂಪಿಯಲ್ಲೇ ವಾಸ್ತವ್ಯ ಹೂಡಲಿದ್ದು, ಮರುದಿನ ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದು ಹೇಳಿದರು.

ಉತ್ಸವ ಆರು ವೇದಿಕೆಗಳಲ್ಲಿ ಸಾಂಸ್ಕೃತಿಕ ಸೌರಭ ನಡೆಯಲಿದೆ. ಉತ್ಸವದ ಮುಖ್ಯವೇದಿಕೆಗೆ ಎಂ.ಪಿ. ಪ್ರಕಾಶ್ ವೇದಿಕೆ, ಎದುರು ಬಸವಣ್ಣ ಮಂಟಪದ ವೇದಿಕೆಗೆ ಶ್ರೀಕೃಷ್ಣ ದೇವರಾಯ ವೇದಿಕೆ, ಸಾಸಿವೆ ಕಾಳು ಗಣಪ ವೇದಿಕೆ, ಮಹಾನವಮಿ ದಿಬ್ಬದ ವೇದಿಕೆ ವಿದ್ಯಾರಣ್ಯ ವೇದಿಕೆ ಹಾಗೂ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ವೇದಿಕೆಗೆ ಹಕ್ಕ-ಬುಕ್ಕ ಹೆಸರು ಇಡಲಾಗಿದೆ ಎಂದರು.

ಮುಖ್ಯವೇದಿಕೆಯಲ್ಲಿ 50,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ 8ರಿಂದ 10 ಲಕ್ಷ ಜನ ಸೇರುವ ನಿರೀಕ್ಷೆಯಿದೆ. 15 ಸಾವಿರ ಆಸನಗಳ ಕಾಯ್ದಿರಿಸಲಾಗಿದೆ. ಈ ಬಾರಿಯ ಉತ್ಸವದಲ್ಲಿ ಸ್ಯಾಂಡಲ್‌ವುಡ್‌ನ ಖ್ಯಾತ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಪ್ರಮುಖವಾಗಿ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ಅಶ್ವಿನಿ ಪುನೀತ್ ರಾಜ್‌ಕುಮಾರ್, ಗೋಲ್ಡನ್ ಸ್ಟಾರ್ ಗಣೇಶ್, ರಕ್ಷಿತ್ ಶೆಟ್ಟಿ, ರಚಿತಾರಾಮ್, ಡಾಲಿ ಧನಂಜಯ್ ಮತ್ತು ಬಿಗ್ ಬಾಸ್ ವಿಜೇತ ಗಿಲ್ಲಿನಟ ಭಾಗವಹಿಸಲಿದ್ದಾರೆ ಎಂದರು.

ವಿದ್ಯುತ್ ದೀಪಾಲಂಕಾರ:

ಹೊಸಪೇಟೆಯಿಂದ ಹಂಪಿಗೆ ಹೋಗುವ ಎಲ್ಲ ರಸ್ತೆಗಳಿಗೆ ಹಂಪಿ ಮತ್ತು ಸುತ್ತಮುತ್ತಲಿನ ಸುಮಾರು 50 ಕಿ.ಮೀ. ವ್ಯಾಪ್ತಿಯಲ್ಲಿ ವಿಶೇಷ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇಡೀ ಹಂಪಿ ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದೆ ಎಂದರು.

ಹಂಪಿ ಉತ್ಸವ ಅತ್ಯಂತ ವಿಜೃಂಭಣೆಯಿಅದ ಆಚರಿಸುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮ ವಹಿಸಲು ಭದ್ರತೆಗೆ ಸುಮಾರು 2,000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಇದರಲ್ಲಿ ಒಬ್ಬ ಎಸ್‌ಪಿ, 8 ಅಡಿಷನಲ್ ಎಸ್‌ಪಿ, 15 ಡಿವೈಎಸ್‌ಪಿ ಮತ್ತು 61 ಇನ್ಸ್ಪೆಕ್ಟರ್‌ಗಳು ಒಳಗೊಂಡಿದ್ದಾರೆ ಎಂದರು.

ಧ್ವನಿ ಮತ್ತು ಬೆಳಕು ಕಾರ್ಯಕ್ರಮ:

ಹಕ್ಕ​ಬುಕ್ಕರ ಇತಿಹಾಸ ಸಾರುವ ವಿಶೇಷ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಉತ್ಸವ ಮುಗಿದರೂ 7 ದಿನಗಳ ಕಾಲ ಮುಂದುವರಿಯಲಿದೆ. ಭಕ್ತರು ಮತ್ತು ಸಾರ್ವಜನಿಕರಿಗಾಗಿ ಕೃಷ್ಣ ದೇವಸ್ಥಾನದ ಬಳಿ ಸರ್ಕಾರದಿಂದ ಉಚಿತ ಊಟ ಮತ್ತು ತಿಂಡಿಯ ವ್ಯವಸ್ಥೆ ಮಾಡಲಾಗಿದೆ.ಉತ್ಸವಕ್ಕಾಗಿ ಸುಮಾರು 14 ರಿಂದ 15 ಕೋಟಿ ರುಪಾಯಿ ಬಜೆಟ್ ಮೀಸಲಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಎಸ್.ಪಿ.ಜಾಹ್ನವಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿರಾಜ್‌ ಶೇಖ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಕುರಿ ಶಿವಮೂರ್ತಿ, ಸ್ಥಳೀಯ ಮುಖಂಡ ಗಾದಿನೂರು ಹಾಲಪ್ಪ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂ ಧರ್ಮ ಮನಸ್ಸು ಜೋಡಿಸುವ ಸೇತುವೆ
ಸರ್ಕಾರಿ ಕನ್ನಡ ಶಾಲೆಗಳ ಬಾಗಿಲು ಮುಚ್ಚುತ್ತಿರುವುದು ವಿಷಾದನೀಯ: ಬಣ್ಣದಮಠದ ಶ್ರೀ ಶಿವಲಿಂಗ ಸ್ವಾಮೀಜಿ