ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

KannadaprabhaNewsNetwork |  
Published : Feb 25, 2024, 01:47 AM IST
12 | Kannada Prabha

ಸಾರಾಂಶ

ಪ್ರಯತ್ನ ಕೈ ಬಿಡಬೇಕು. ತಕ್ಷಣ ಸಂಬಂಧಪಟ್ಟ ಅರಣ್ಯ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಮೈಸೂರು

ಜಮೀನು ಬಿಡುವಂತೆ ಅರಣ್ಯ ಅಧಿಕಾರಿಗಳು ನೋಟಿಸ್ ನೀಡಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತನ ಶವವಿಟ್ಟು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರದ ಬಳಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶನಿವಾರ ಅರಣ್ಯ ಇಲಾಖೆಯವರ ವಿರುದ್ಧ ಪ್ರತಿಭಟಿಸಿದರು. ಎಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ ಗಿರಿಗೌಡ (50) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಭೂಮಿ ಕಳೆದುಕೊಳ್ಳುವ ಭಯದಿಂದಾಗಿ

ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೆ ಮೃತಪಟ್ಟಿದ್ದಾರೆ. ಇದನ್ನು ಖಂಡಿಸಿ ಕುಟುಂಬಸ್ಥರು, ಗ್ರಾಮಸ್ಥರು ಕೆ.ಆರ್. ಆಸ್ಪತ್ರೆಯ ಶವಾಗಾರದ ಮುಂದೆ ರೈತನ ಶವವಿಟ್ಟು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟಿಸಿದರು. ಮೃತನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ ನೀಡುವುದರ ಜೊತೆಗೆ ಅರಣ್ಯಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಅರಣ್ಯ ಅಧಿಕಾರಿಗಳ ದಬ್ಬಾಳಿಕೆಗೆ ಕಣಿಯನಹುಂಡಿ ಗ್ರಾಮದ ರೈತ ಗಿರಿಗೌಡ ಜೀವ ತೆತ್ತಿದ್ದಾರೆ. ಸರ್ಕಾರ ಈ ಕೂಡಲೇ ರೈತರನ್ನು ಒಕ್ಕಲೆಬ್ಬಿಸುವ

ಪ್ರಯತ್ನ ಕೈ ಬಿಡಬೇಕು. ತಕ್ಷಣ ಸಂಬಂಧಪಟ್ಟ ಅರಣ್ಯ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು, ತಹಸೀಲ್ದಾರ್ ಮಹೇಶ್ ಕುಮಾರ್ ಮನವಿ ಸ್ವೀಕರಿಸಿದರು. ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಮಾತನಾಡಿ, ನಾವು ಇರುವುದು ನಿಮ್ಮ ಸೇವೆಗಾಗಿ. ಯಾರೂ ದುಡುಕಿ ಇಂತಹ ನಿರ್ಧಾರಕ್ಕೆ ಬರಬಾರದು. ನಿಮ್ಮ ಮನವಿಯನ್ನು ಸರ್ಕಾರದ ಗಮನಕ್ಕೆ ತಂದು, ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು

ಕೊಡಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ರೈತ ಮುಖಂಡರಾದ ಪಿ. ಮರಂಕಯ್ಯ, ರಾಮೇಗೌಡ, ಶಿವಣ್ಣ, ಕೆ.ಎಂ. ಬಸವರಾಜು, ನಾಗಣ್ಣ, ಸಣ್ಣನಿಂಗೇಗೌಡ, ಹಿರೇಗೌಡ, ರವಿ, ಕೃಷ್ಣ ಮೊದಲಾದದವರು ದ್ದರು.

----

ಏನಾಗಿತ್ತು?

ಕಣಿಯನಹುಂಡಿ ಗ್ರಾಮದ 465

ಹೆಕ್ಟೇರ್‌ಪ್ರದೇಶವನ್ನು ಮೀಸಲು ಅರಣ್ಯ ಪ್ರದೇಶವನ್ನಾಗಿ ಮಾಡಲು ಸರ್ಕಾರದಿಂದ ಅರಣ್ಯ ವ್ಯವಸ್ಥಾಪನಾಧಿಕಾರಿ ನೇಮಿಸಲಾಗಿದೆ. ಗಿರಿಗೌಡ ಅವರ ಜಾಗವೂ ಇದೇ ವ್ಯಾಪ್ತಿಗೆ ಸೇರಿದೆ. ಹೀಗಾಗಿ, ಅವರು ತಮ್ಮ ಜಾಗದ ದಾಖಲೆಗಳನ್ನು ಪಡೆಯಲು ಅರ್ಜಿ ಸಲ್ಲಿಸುವುದಕ್ಕಾಗಿ ಮೈಸೂರಿನ ಅರಣ್ಯ ಭವನಕ್ಕೆ ಮಂಗಳವಾರ ಬಂದಿದ್ದರು. ಆದರೆ, ಅದು

ಮೀಸಲು ಅರಣ್ಯ ಪ್ರದೇಶಕ್ಕೆ ಸೇರಿದ್ದರಿಂದ ಅಧಿಕಾರಿಗಳು ಅರ್ಜಿ ಸ್ವೀಕರಿಸಿರಲಿಲ್ಲ. ಅರಣ್ಯ ಭವನದಿಂದ ಜಮೀನಿಗೆ ತೆರಳಿದ್ದ ಗಿರಿಗೌಡ ಕ್ರಿಮಿನಾಶಕ ಸೇವಿಸಿದ್ದು, ಸ್ಥಳೀಯರು ಅವರನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನಕ್ಷರತೆ ಬಾಲ್ಯ ವಿವಾಹ ಕೇಸ್‌ ರದ್ದತಿಗೆ ಆಧಾರವಾಗದು: ಕೋರ್ಟ್‌
ಕೆಎಸ್‌ಡಿಎಲ್‌ನಿಂದ ₹400ನ ಮಲ್ಲಿಗೆ ಸೋಪ್‌!